ಆ್ಯಪ್ನಗರ

ಅನಂತಕುಮಾರ್‌ ನಿಧನ: ಸರಕಾರಿ ರಜೆ ಘೋಷಣೆ, ವಿವಿಗಳ ಪರೀಕ್ಷೆಗಳು ಮುಂದೂಡಿಕೆ

ಕೇಂದ್ರ ಸಚಿವ ಅನಂತಕುಮಾರ್ ನಿಧನದ ಹಿನ್ನೆಲೆಯಲ್ಲಿ ರಾಜ್ಯದ ಸರಕಾರಿ ಕಚೇರಿಗಳು, ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

Vijaya Karnataka Web 12 Nov 2018, 9:44 am
ಬೆಂಗಳೂರು: ಇಂದು ಬೆಳಗ್ಗೆ ನಿಧನ ಹೊಂದಿದ ಕೇಂದ್ರ ಸಚಿವ ಅನಂತ ಕುಮಾರ್ ಅವರ ಗೌರವಾರ್ಥ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಮಾಡಲಾಗುವುದು. ಅವರ ಅಂತ್ಯಕ್ರಿಯೆ ಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
Vijaya Karnataka Web Anant kumar


ಇದಲ್ಲದೆ ಶಾಲಾ, ಕಾಲೇಜು, ಸರಕಾರಿ ಕಚೇರಿಗಳಿಗೆ ಇಂದು (12-11-2018) ಒಂದು ದಿನದ ರಜೆ ಘೋಷಿಸಲಾಗಿದೆ.

ಅಗಲಿದ ನಾಯಕನ ಗೌರವಾರ್ಥ ಸರಕಾರಿ ರಜೆ ಹಾಗೂ ಶೋಕಾಚರಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮಂಗಳೂರು, ಕುವೆಂಪು, ತುಮಕೂರು, ಗುಲ್ಬರ್ಗ ಸೇರಿದಂತೆ ಎಲ್ಲ ವಿಶ್ವವಿದ್ಯಾಲಯಗಳ ಇಂದಿನ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅಕ್ಕಮಹಾದೇವಿ ಮಹಿಳಾ ವಿವಿಯ ಇಂದಿನ ಪರೀಕ್ಷೆಗಳೂ ಮುಂದೂಡಿಕೆಯಾಗಿವೆ. ಈ ಎಲ್ಲ ಪರೀಕ್ಷೆಗಳ ಮುಂದಿನ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಆಯಾ ವಿವಿಗಳ ಕುಲಪತಿಗಳ ಪ್ರಕಟಣೆ ತಿಳಿಸಿದೆ.
ಗುಲ್ಬರ್ಗ ವಿಶ್ವವಿದ್ಯಾಲಯದ ಪ್ರಥಮ, ತೃತೀಯ ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆ ಮುಂದೂಡಲಾಗಿದೆ ಎಂದು ಗುಲ್ಬರ್ಗ ವಿವಿ ಕುಲಸಚಿವ ಮದರಿ ಹೇಳಿಕೆ ನೀಡಿದ್ದಾರೆ.

ಮುಖ್ಯಮಂತ್ರಿಯವರಿಂದ ಅಂತಿಮ ದರ್ಶನ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ಮೈಸೂರಿನಿಂದ ಹೊರಟು ನೇರವಾಗಿ ನ್ಯಾಷನಲ್ ಕಾಲೇಜು ಮೈದಾನಕ್ಕೆ ಆಗಮಿಸಿ ಕೇಂದ್ರ ಸಚಿವ ಅನಂತಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ