ಆ್ಯಪ್ನಗರ

ಡಿಕೆಶಿ ಬಗ್ಗೆ ಮೂಡದ ಒಮ್ಮತ , ಕೆಪಿಸಿಸಿ ಆಧ್ಯಕ್ಷ ಸ್ಥಾನ ಆಯ್ಕೆ ಮತ್ತಷ್ಟು ವಿಳಂಬ

ಡಿ.ಕೆ ಶಿವಕುಮಾರ್‌ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ವಿಚಾರವಾಗಿ ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಒಮ್ಮತ ಮೂಡದಿರುವ ಹಿನ್ನೆಲೆಯಲ್ಲಿ ಆಯ್ಕೆ ಕಸರತ್ತು ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಹೆಚ್ಚಾಗಿದೆ.

Vijaya Karnataka Web 25 Feb 2020, 5:36 pm
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿ.ಕೆ ಶಿವಕುಮಾರ್‌ ಆಯ್ಕೆಗೆ ವಿರೋಧ ಮುಂದುವರಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನ ಆಯ್ಕೆ ಜಂಜಾಟ ಮುಂದುವರಿದೆ. ಅಧಿವೇಶನ, ದೆಹಲಿ ಚುನಾವಣೆಯ ನೆಪದಲ್ಲಿ ಗೊಂದಲ ಬಗೆಹರಿಸಿಕೊಳ್ಳಲು ಹೈ ಕಮಾಂಡ್‌ ರಾಜ್ಯ ಮುಖಂಡರಿಗೆ ಸಮಯಾವಕಾಶ ನೀಡಿತ್ತು. ಆದರೆ ಒಮ್ಮತದ ನಿರ್ಧಾರವನ್ನು ಕೈಗೊಳ್ಳಲು ರಾಜ್ಯ ಕಾಂಗ್ರೆಸ್ ನಾಯಕರಿಗೆ ಇದುವರೆಗೂ ಸಾಧ್ಯವಾಗಿಲ್ಲ.
Vijaya Karnataka Web kpcc president post decision not yet taken by congress leaders
ಡಿಕೆಶಿ ಬಗ್ಗೆ ಮೂಡದ ಒಮ್ಮತ , ಕೆಪಿಸಿಸಿ ಆಧ್ಯಕ್ಷ ಸ್ಥಾನ ಆಯ್ಕೆ ಮತ್ತಷ್ಟು ವಿಳಂಬ


ಮಾಜಿ ಸಚಿವ ಡಿ.ಕೆ ಶಿವಕುಮಾರ್‌ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ನೀಡಲು ಸಿದ್ದರಾಮಯ್ಯ, ಆರ್‌.ವಿ ದೇಶಪಾಂಡೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಡಾ. ಜಿ ಪರಮೇಶ್ವರ್‌ ಡಿಕೆಶಿ ಪರವಾಗಿ ಹೈ ಕಮಾಂಡ್‌ ಬಳಿ ಬ್ಯಾಟಿಂಗ್‌ ಮಾಡಿದ್ದಾರೆ. ಮಲ್ಲಿಖಾರ್ಜುನ ಖರ್ಗೆ ತಟಸ್ಥ ನಿಲುವನ್ನು ಕೈಗೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತಾಗಿ ದೆಹಲಿಯಲ್ಲಿ ರಾಜ್ಯ ಮುಖಂಡರ ಜೊತೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಲವು ಸುತ್ತಿನ ಮಾತುಕತೆ ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಇತ್ತೀಚೆಗೆ ದಿನೇಶ್ ಗುಂಡೂರಾವ್ ಜೊತೆಗೂ ಸೋನಿಯಾ ಗಾಂಧಿ ಚರ್ಚೆ ನಡೆಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಆಯ್ಕೆ ಸರ್ಕಸ್: ಮತ್ತೆ ಎಂ.ಬಿ ಪಾಟೀಲ್‌ ಹೆಸರು ಮುನ್ನಲೆಗೆ

ಡಿ.ಕೆ ಶಿವಕುಮಾರ್‌ಗೆ ಅಧ್ಯಕ್ಷ ಸ್ಥಾನ ನೀಡಿದರೆ ಪಕ್ಷದ ಎಲ್ಲಾ ಮುಖಂಡರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಹೋಗುವುದಿಲ್ಲ, ಅವರ ವಿರುದ್ಧ ಇಡಿ, ಐಟಿ ತನಿಖಾ ಸಂಸ್ಥೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ವಿಚಾರಣೆ ನಡೆಯುತ್ತಿವೆ. ಈ ಕಾರಣಕ್ಕಾಗಿ ಅವರಿಗೆ ಅಧ್ಯಕ್ಷ ಸ್ಥಾನ ನೀಡುವುದು ಬೇಡ ಎಂಬುವುದು ಸಿದ್ದರಾಮಯ್ಯ ಬಣದ ಪಟ್ಟಾಗಿದೆ.

ಒಂದು ವೇಳೆ ಅಧ್ಯಕ್ಷ ಸ್ಥಾನ ನೀಡಿದ್ದೇ ಆದರೆ ನಾಲ್ವರು ಕಾರ್ಯಾಧ್ಯಕ್ಷರುಗಳನ್ನು ನೇಮಿಸಬೇಕು ಎಂದು ಸಿದ್ದರಾಮಯ್ಯ ಹೈ ಕಮಾಂಡ್‌ ಮುಂದೆ ಬೇಡಿಕೆ ಇಟ್ಟಿದ್ದಾರೆ. ಆದರೆ ಇದಕ್ಕೆ ಡಿಕೆಶಿ ವಿರೋಧ ವ್ಯಕ್ತಪಡಿಸಿದ್ದಾರೆ.

'ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ನಾನೂ ಆಕಾಂಕ್ಷಿ, ಸಿದ್ದರಾಮಯ್ಯನವರೇ ನನ್ನ ಹೆಸರು ಶಿಫಾರಸ್ಸು ಮಾಡಿದ್ದಾರೆ': ಎಂಬಿ ಪಾಟೀಲ್

ಅಧ್ಯಕ್ಷ ಸ್ಥಾನಕ್ಕಾಗಿ ಪಕ್ಷದೊಳಗಡೆ ನಡೆಯುತ್ತಿರುವ ಗೊಂದಲ, ಪೈಪೋಟಿಯಿಂದಾಗಿ ಹೈ ಕಮಾಂಡ್‌ ಕಾದು ನೋಡುವ ತಂತ್ರದ ಮೊರೆ ಹೋದಂತಿದೆ. ಸಮಸ್ಯೆಯನ್ನು ಬಗೆಹರಿಸಲು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಲಾಪ್‌ ಅವರಿಗೆ ಹೊಣೆಗಾರಿಕೆ ನೀಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ.

ಪರಿಣಾಮ ಕೆಪಿಸಿಸಿಗೆ ಸಾರಥಿ ಆಯ್ಕೆ ಸದ್ಯಕ್ಕೆ ಆಗುವಂತಹ ಲಕ್ಷಣಗಳು ಕಾಣಿಸುತ್ತಿಲ್ಲ. ರಾಜ್ಯ ಕಾಂಗ್ರೆಸ್‌ನಲ್ಲಿ ಒಮ್ಮತದ ಅಭಿಪ್ರಾಯ ಮೂಡಿದ ಬಳಿಕವಷ್ಟೇ ಹೈ ಕಮಾಂಡ್‌ ಈ ಕುರಿತಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ