ಬೆಂಗಳೂರು: 1998, 1999 ಹಾಗೂ 2004ನೇ ಸಾಲಿನ ಕೆಎಎಸ್ ಅಧಿಕಾರಿಗಳ ನೇಮಕ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನ ವಿಭಾಗೀಯ ಪೀಠ ನೀಡಿದ್ದ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ.
ಮೂಲ ದೂರುದಾರರಾದ ಕೆ.ಆರ್. ಖಲೀಲ್ ಅಹಮದ್ ಮತ್ತಿತರರು ಸಲ್ಲಿಸಿದ್ದ ಅರ್ಜಿ ಸೋಮವಾರ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಖೇಹರ್ ಅವರಿದ್ದ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತು. ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ಮೇಲ್ಮನವಿಯನ್ನು ವಿಚಾರಣೆಗೆ ಪರಿಗಣಿಸಿ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿತು. ಅಲ್ಲದೆ, ಈ ಅರ್ಜಿಯನ್ನು ಇದೇ ವಿಷಯದ ಕುರಿತಂತೆ ಗೋಪಾಲಕೃಷ್ಣ ಮತ್ತಿತರರು ಸಲ್ಲಿಸಿರುವ ಮುಖ್ಯ ಅರ್ಜಿಯ ಜೊತೆ ಟ್ಯಾಗ್ ಮಾಡಿ ಅದರ ಜೊತೆ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಆದೇಶ ನೀಡಿತು.
2016ರ ಡಿ.14ರಂದು ಗೋಪಾಲಕೃಷ್ಣ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ನ್ಯಾಯಪೀಠ, 2016ರ ಜೂ. 21ರಂದು ಹೈಕೋರ್ಟ್ ವಿಭಾಗೀಯಪೀಠ ನೀಡಿದ್ದ ತೀರ್ಪಿಗೆ ಮಧ್ಯಾಂತರ ತಡೆ ನೀಡಿತ್ತು.