ಆ್ಯಪ್ನಗರ

ಲೋಡ್‌ ಶೆಡ್ಡಿಂಗ್‌ ಕೈಬಿಟ್ಟ ಸರಕಾರ

ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ...

Vijaya Karnataka 25 Oct 2018, 5:00 am
ಬೆಂಗಳೂರು: ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲೋಡ್‌ ಶೆಡ್ಡಿಂಗ್‌ ಮಾಡದಂತೆ ಅಧಿಕಾರಿಗಳಿಗೆ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಕಟ್ಟಪ್ಪಣೆ ಮಾಡಿದ್ದಾರೆ.
Vijaya Karnataka Web power


ಈ ಸಂಬಂಧ ಮಂಗಳವಾರ ಇಂಧನ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದ ಸಿಎಂ, ಕಲ್ಲಿದ್ದಲು ದಾಸ್ತಾನು ಕೊರತೆ ಆಗಿರುವ ಹಿನ್ನೆಲೆಯಲ್ಲಿ ಕಲ್ಲಿದ್ದಲು ಆಧಾರಿತ ವಿದ್ಯುತ್‌ ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಲಾಗಿದ್ದು ನಗರ-ಪಟ್ಟಣದಲ್ಲಿ ಬೆಳಗ್ಗೆ- ಸಂಜೆ ತಲಾ ಒಂದು ಗಂಟೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಒಟ್ಟಾರೆ 3 ರಿಂದ 4 ಗಂಟೆ ವಿದ್ಯುತ್‌ ಕಡಿತ ಮಾಡುವುದು ಅನಿವಾರ್ಯವಾಗಿದೆ ಎಂದು ಪ್ರತಿಪಾದಿಸಿದ್ದರು. ಆದರೆ ಉಪ ಚುನಾವಣೆ ವೇಳೆ ಲೋಡ್‌ಶೆಡ್ಡಿಂಗ್‌ ಜಾರಿಗೊಳಿಸಿದರೆ ಮತದಾರರ ಸಿಟ್ಟು ಎದುರಿಸಬೇಕಾಗುತ್ತದೆ ಜತೆಗೆ ಪ್ರತಿಪಕ್ಷ ಬಿಜೆಪಿಗೆ ಒಂದು ಅಸ್ತ್ರ ಕೊಟ್ಟಂತೆ ಆಗಲಿದೆ ಎಂಬ ಹಿನ್ನೆಲೆಯಲ್ಲಿ ಲೋಡ್‌ಶೆಡ್ಡಿಂಗ್‌ ಕೈಬಿಡಲಾಗಿದೆ.

''ವಿದ್ಯುತ್‌ ಕೊರತೆ ತುಂಬಲು ಪರ್ಯಾಯ ಕ್ರಮಗಳನ್ನು ತೆಗೆದುಕೊಂಡು ರಾಜ್ಯದ ಎಲ್ಲ ಭಾಗಗಳಿಗೆ ಸಮರ್ಪಕ ವಿದ್ಯುತ್‌ ಪೂರೈಕೆ ಮಾಡಬೇಕು. ಯಾವುದೇ ಕಾರಣಕ್ಕೂ ಲೋಡ್‌ ಶೆಡ್ಡಿಂಗ್‌ ಮಾಡಬಾರದು,'' ಎಂದು ಸಿಎಂ ಸ್ಪಷ್ಟ ಸೂಚನೆ ನೀಡಿದ್ದಾರೆ.

''ಕೇಂದ್ರ ಸರಕಾರ ಒಪ್ಪಂದದಂತೆ ರಾಜ್ಯದ ಪಾಲಿನ ಕಲ್ಲಿದ್ದಲು ಪೂರೈಸದ ಕಾರಣ ರಾಯಚೂರು ಶಾಖೋತ್ಪನ್ನ ವಿದ್ಯುತ್‌ ಸ್ಥಾವರದಲ್ಲಿ ಉತ್ಪಾದನೆ ಕುಸಿದಿದೆ. ಜತೆಗೆ, ಕೇಂದ್ರ ಗ್ರಿಡ್‌ನಿಂದಲೂ ರಾಜ್ಯಕ್ಕೆ ನಿಗದಿತ ಪ್ರಮಾಣದ ವಿದ್ಯುತ್‌ ಸರಬರಾಜು ಆಗಿಲ್ಲ. ಹೀಗಾಗಿ ರಾಜ್ಯದಲ್ಲಿ ವಿದ್ಯುತ್‌ ಬೇಡಿಕೆ ಮತ್ತು ಪೂರೈಕೆ ನಡುವಿನ ಕೊರತೆ ಹೆಚ್ಚಿ, ಲೋಡ್‌ ಶೆಡ್ಡಿಂಗ್‌ ಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಜಲವಿದ್ಯುತ್‌ ಉತ್ಪಾದನೆ ಹೆಚ್ಚಿಸಿ, ಸೌರವಿದ್ಯುತ್‌ ಬಳಕೆ ಮೂಲಕ ಲೋಡ್‌ಶೆಡ್ಡಿಂಗ್‌ ಇಲ್ಲದೆ ಸಮರ್ಪಕ ವಿದ್ಯುತ್‌ ಸರಬರಾಜು ಮಾಡಬೇಕು,'' ಎಂದು ಕೆಪಿಟಿಸಿಎಲ್‌ ಹಾಗೂ ಎಸ್ಕಾಂಗಳಿಗೆ ಸಿಎಂ ನಿರ್ದೇಶನ ನೀಡಿದ್ದಾರೆ.

ತನಿಖೆಗೆ ಆದೇಶ

ವಾಸ್ತವ ಸ್ಥಿತಿಯನ್ನು ತಮ್ಮ ಗಮನಕ್ಕೂ ತರದೆ ವಿದ್ಯುತ್‌ ಕೊರತೆ ಕಾರಣಕ್ಕೆ ಲೋಡ್‌ ಶೆಡ್ಡಿಂಗ್‌ ಆದೇಶ ಹೊರಡಿಸಿದ ಕಲಬುರಗಿ ವಿದ್ಯುತ್‌ ಸರಬರಾಜು ಕಂಪನಿ (ಜೆಸ್ಕಾಂ) ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಇಂಧನ ಖಾತೆಯನ್ನೂ ಹೊಂದಿರುವ ಸಿಎಂ ಕುಮಾರಸ್ವಾಮಿ ಆದೇಶಿಸಿದ್ದಾರೆ.

ವಿದ್ಯುತ್‌ ಕೊರತೆ ಕಾರಣ ನೀಡಿ ಅ.22 ರಿಂದ ಜಾರಿಗೆ ಬರುವಂತೆ ಲೋಡ್‌ ಶೆಡ್ಡಿಂಗ್‌ ಮಾಡಲು ಜೆಸ್ಕಾಂ ಮುಖ್ಯ ಎಂಜಿನಿಯರ್‌ ಅ.20 ರಂದು ಅಧಿಕೃತ ಆದೇಶ ಹೊರಡಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ