ಆ್ಯಪ್ನಗರ

ದಿನೇಶ್‌ ಗುಂಡೂರಾವ್‌ ಕೆಪಿಸಿಸಿ ಅಧ್ಯಕ್ಷ ?

ಪೂರ್ಣ ಪ್ರಮಾಣದ ಅಧ್ಯಕ್ಷ ರ ನೇಮಕಕ್ಕೆ ಹೈಕಮಾಂಡ್‌ ಚಿಂತನೆ

Vijaya Karnataka Web 7 Jun 2018, 10:32 pm
ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಕಾರ್ಯಾಧ್ಯಕ್ಷರಾಗಿರುವ ದಿನೇಶ್‌ ಗುಂಡೂರಾವ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅತಿ ಶೀಘ್ರದಲ್ಲೇ ಬಡ್ತಿ ಹೊಂದುವ ಸಾಧ್ಯತೆಗಳಿವೆ.
Vijaya Karnataka Web ಕೆಪಿಸಿಸಿ ಕಚೇರಿ
ಕೆಪಿಸಿಸಿ ಕಚೇರಿ


ಕೆಪಿಸಿಸಿ ಅಧ್ಯಕ್ಷರಾಗಿರುವ ಡಾ.ಜಿ.ಪರಮೇಶ್ವರ್‌ ಅವರು ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರದಲ್ಲಿ ಉಪ ಮುಖ್ಯಮಂತ್ರಿ ಆಗಿರುವುದರಿಂದ ಅವರು ದೀರ್ಘ ಕಾಲ ಅಧ್ಯಕ್ಷರಾಗಿ ಮುಂದುವರಿಯುವ ಸಾಧ್ಯತೆಗಳು ಕಡಿಮೆ. ಈ ಮಧ್ಯೆ ಮತ್ತೊಬ್ಬ ಕಾರ್ಯಾಧ್ಯಕ್ಷರಾಗಿದ್ದ ಎಸ್‌.ಆರ್‌.ಪಾಟೀಲ್‌ ಕೂಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕೆಪಿಸಿಸಿಗೆ ಪೂರ್ಣ ಪ್ರಮಾಣದ ಅಧ್ಯಕ್ಷರನ್ನು ನೇಮಿಸುವ ಬಗ್ಗೆ ಕಾಂಗ್ರೆಸ್‌ ಹೈ ಕಮಾಂಡ್‌ ಹಂತದಲ್ಲಿ ಗಂಭೀರ ಚಿಂತನೆಗಳು ನಡೆದಿವೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಡಿ.ಕೆ.ಶಿವಕುಮಾರ್‌ ಅವರು ಕಣ್ಣಿಟ್ಟಿದ್ದರು. ಆದರೆ, ಅವರು ಸಚಿವರಾಗಿ ನೇಮಕಗೊಂಡಿರುವುದರಿಂದ ಅವರನ್ನು ಕೆಪಿಸಿಸಿಗೆ ನೇಮಿಸುವ ಸಾಧ್ಯತೆಗಳು ಕಡಿಮೆ.

ಡಿ.ಕೆ.ಶಿವಕುಮಾರ್‌ ಅಧ್ಯಕ್ಷರಾಗದಿದ್ದರೆ ಮಾಜಿ ಸಚಿವ ಎಂ.ಬಿ.ಪಾಟೀಲರು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಅವರು ಸಚಿವ ಸ್ಥಾನ ಸಿಗದೇ ಇರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವುದರ ಜತೆಗೆ ತಮಗೆ ಕೆಪಿಸಿಸಿ ಅಧ್ಯಕ್ಷರಾಗುವ ಯಾವುದೇ ಆಸಕ್ತಿಯೂ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್ಯದ ಯಾವುದೇ ಸಂಸದರನ್ನು ಕೆಪಿಸಿಸಿಗೆ ನೇಮಿಸುವುದಕ್ಕೆ ವರಿಷ್ಠರಿಗೆ ಒಲವಿಲ್ಲ. ಜತೆಗೆ ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರದ ಜತೆ ಹೊಂದಾಣಿಕೆ ಮಾಡಿಕೊಂಡು ಹೋಗಬೇಕು ಹಾಗೂ ಚುನಾವಣೆಯಲ್ಲಿ ಈ ಎರಡೂ ಪಕ್ಷಗಳ ನಡುವೆ ಸೀಟು ಹೊಂದಾಣಿಕೆ ಏರ್ಪಟ್ಟರೆ ಅಂದಿನ ಪರಿಸ್ಥಿತಿಯನ್ನು ನಿಭಾಯಿಸುವ ಸಾಮರ್ಥ್ಯ‌ವೂ ಇರಬೇಕು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಗೆ ತಕ್ಕಂತೆ ಹೊಂದಿಕೊಂಡು ಹೋಗುವ ಸ್ವಭಾವವಿರುವ ವ್ಯಕ್ತಿಯನ್ನು ನೇಮಿಸುವ ಬಗ್ಗೆ ಹೈಕಮಾಂಡ್‌ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.

ಹಾಲಿ ಕಾರ್ಯಾಧ್ಯಕ್ಷರಾಗಿರುವ ದಿನೇಶ್‌ ಗುಂಡೂರಾವ್‌ ಅವರು ಆರಂಭದಿಂದಲೂ ಸಕ್ರಿಯರಾಗಿದ್ದು ಪ್ರತಿಪಕ್ಷ ಬಿಜೆಪಿಗೆ ಎದುರೇಟು ಕೊಡುವಲ್ಲಿ ಯಶಸ್ವಿಯಾಗಿದ್ದು ಪಕ್ಷವನ್ನು ನಿಭಾಯಿಸಬಲ್ಲರು, ಹಿರಿಯರು, ಕಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವರು ಎಂಬ ಅಭಿಪ್ರಾಯ ಹೈಕಮಾಂಡ್‌ನಲ್ಲಿದೆ. ಹೀಗಾಗಿ ಅವರನ್ನೇ ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ