ಆ್ಯಪ್ನಗರ

ಶಿರಾ, ಆರ್‌ಆರ್‌ ನಗರದಲ್ಲಿ ಯಾರ ಜೊತೆಯೂ ಹೊಂದಾಣಿಕೆ ಇಲ್ಲ - ಸಿದ್ದರಾಮಯ್ಯ

ರಾಷ್ಟ್ರೀಯ ಪಕ್ಷ ಕಾಂಗ್ರೆಸ್‌ಗೆ ಶಕ್ತಿ ಇದೆ ಎಂದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ವಂತ ಬಲದ ಮೇಲೆ ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪಚುನಾವಣೆಯನ್ನು ಎದುರಿಸುವುದಾಗಿ ಹೇಳಿದ್ದಾರೆ.

Vijaya Karnataka 30 Sep 2020, 7:58 pm
ಬೆಂಗಳೂರು: ಶಿರಾ ಹಾಗೂ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಯಾರ ಜೊತೆಗೂ ಹೊಂದಾಣಿಕೆ ಇಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
Vijaya Karnataka Web Siddaramaiah


ನಿರೀಕ್ಷೆಯಂತೆ ಈ ಎರಡು ಕ್ಷೇತ್ರದ ಚುನಾವಣೆ ಕಾಂಗ್ರೆಸ್‌-ಜೆಡಿಎಸ್‌ ನಡುವಿನ ಅಸಮಾಧಾನ ಸ್ಫೋಟಕ್ಕೆ ವೇದಿಕೆಯಾಗಿದ್ದು, ಮೈತ್ರಿ ಸಾಧ್ಯತೆಯನ್ನು ಸಿದ್ದರಾಮಯ್ಯ ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

ನಿವಾಸದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ, "ಕಾಂಗ್ರೆಸ್‌ಗೆ ಅಭ್ಯರ್ಥಿಗಳ ಕೊರತೆ ಇಲ್ಲ. ಒಂದೊಂದು ಕ್ಷೇತ್ರಕ್ಕೆ ಎಂಟರಿಂದ ಹತ್ತು ಆಕಾಂಕ್ಷಿಗಳಿದ್ದಾರೆ. ನಾವು ಈ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಸ್ಪರ್ಧೆ ಮಾಡುತ್ತೇವೆ. ಕಾಂಗ್ರೆಸ್‌ ಒಂದು ರಾಷ್ಟ್ರೀಯ ಪಕ್ಷ . ನಮ್ಮದೇ ಆದ ಶಕ್ತಿ ಹೊಂದಿದ್ದೇವೆ," ಎಂದು ಹೇಳಿದರು.

ಮೈತ್ರಿ ಸರಕಾರದ ಪತನಕ್ಕೆ ಸಂಬಂಧಪಟ್ಟಂತೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, "ಈ ಬಗ್ಗೆ ಅವರನ್ನೇ ಪ್ರಶ್ನೆ ಮಾಡಿ. ಬಿಜೆಪಿ ಸರಕಾರ ಪತನವಾಗುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಕುಮಾರಸ್ವಾಮಿಯೇ ಹೇಳಿಕೆ ನೀಡಿದ್ದಾರಲ್ಲ," ಎಂದು ವ್ಯಂಗ್ಯವಾಡಿದರು.

ಯಾರಪ್ಪ ಅಚ್ಚರಿ?

ರಾಜರಾಜೇಶ್ವರಿನಗರಕ್ಕೆ ಅಚ್ಚರಿ ಅಭ್ಯರ್ಥಿ ಇಳಿಸುವ ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿ, "ನನಗೆ ಗೊತ್ತಿಲ್ಲಪ್ಪ. ಯಾರಪ್ಪ ಅಚ್ಚರಿ ಅಭ್ಯರ್ಥಿ ಎಂದು ಕೇಳುತ್ತೇನೆ? ಶಿರಾಕ್ಕೆ ಜಯಚಂದ್ರ ಅವರನ್ನು ನಮ್ಮ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದೇವೆ. ರಾಜರಾಜೇಶ್ವರಿನಗರಕ್ಕೆ ಸಂಬಂಧಪಟ್ಟಂತೆ ಸಭೆ ನಡೆಸಿ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸುತ್ತೇವೆ," ಎಂದು ಹೇಳಿದರು.

ಸವಾಲು ಸ್ವೀಕರಿಸಿದ್ದೇನೆ

"ಸಿಎಂ ಯಡಿಯೂರಪ್ಪ ಪುತ್ರನ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರ ಪ್ರಕರಣ ಸಂಬಂಧ ನಾನು ಈಗಾಗಲೇ ಸವಾಲು ಸೀಕರಿಸಿದ್ದೇನೆ. ಆರೋಪ ಸಾಬೀತಾಗದೇ ಇದ್ದರೆ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಇವರಿಗೆ ಆತ್ಮವಿಶ್ವಾಸ ಇದ್ದರೆ ಸುಪ್ರೀಂಕೋರ್ಟ್‌ ಹಾಲಿ ನ್ಯಾಯಾಧೀಶರ ಉಸ್ತುವಾರಿಯಲ್ಲಿ ಎಸ್‌ಐಟಿ ತನಿಖೆ ನಡೆಸಲಿ," ಎಂದು ಸಿದ್ದರಾಮಯ್ಯ ಹೇಳಿದರು.

"ಬಿಜೆಪಿಯವರು ಲಜ್ಜೆಗೆಟ್ಟವರು. ಕೊರೊನಾ ಸಂದರ್ಭದಲ್ಲೂ ಭ್ರಷ್ಟಾಚಾರ ಎಸಗಿದ್ದಾರೆ. ಕೋವಿಡ್‌ ನಿಯಂತ್ರಣ ವಿಚಾರದಲ್ಲಿ ಅಸಹಾಯಕತೆ ವ್ಯಕ್ತಪಡಿಸಿರುವ ವೈದ್ಯ ಶಿಕ್ಷ ಣ ಸಚಿವ ಡಾ.ಕೆ.ಸುಧಾಕರ್‌ ರಾಜೀನಾಮೆ ನೀಡಲಿ," ಎಂದು ಆಗ್ರಹಿಸಿದರು.

ಉತ್ತರ ಪ್ರದೇಶದಲ್ಲಿ ಬಾಲಕಿ ಮೇಲಿನ ಅತ್ಯಾಚಾರಕ್ಕೆ ಪ್ರತಿಕ್ರಿಯೆ ನೀಡಿ,"ಅಲ್ಲಿ ಕಾನೂನು-ಸುವ್ಯವಸ್ಥೆ ಇಲ್ಲವಾಗಿದೆ," ಎಂದು ಆರೋಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ