ಆ್ಯಪ್ನಗರ

ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯ, ಚರ್ಚೆಗೆ ಗ್ರಾಸವಾದ ಕಾಂಗ್ರೆಸ್‌ ನಡೆ

ಸಿಎಂ ಕುಟುಂಬದ ಭ್ರಷ್ಟಾಚಾರದ ಪ್ರಸ್ತಾಪಿಸುವುದಕ್ಕೆ ಯಾವುದೇ ನಿಯಮದ ಅನ್ವಯ ನೋಟಿಸ್‌ ನೀಡಿದರೂ ಸ್ಪೀಕರ್‌ ಅವಕಾಶ ನೀಡುವುದಿಲ್ಲ. ಆದರೆ ಅವಿಶ್ವಾಸ ನಿರ್ಣಯ ಮಂಡಿಸಿದರೆ ಯಾವ ವಿಚಾರದ ಬಗ್ಗೆ ಬೇಕಾದರೂ ಮಾತನಾಡಬಹುದು ಎಂಬ ಕಾರಣಕ್ಕೆ ಕಾಂಗ್ರೆಸ್‌ ಈ ನಿರ್ಧಾರಕ್ಕೆ ಬಂದಿರುವ ಸಾಧ್ಯತೆ ಇದೆ.

Vijaya Karnataka 24 Sep 2020, 9:30 pm
ಬೆಂಗಳೂರು: ರಾಜ್ಯ ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಹಠಾತ್‌ ನಿರ್ಧಾರವನ್ನು ಕಾಂಗ್ರೆಸ್‌ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ತೆಗೆದುಕೊಂಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
Vijaya Karnataka Web Karnataka Congress


ಸದನ ಆರಂಭವಾಗುವುದಕ್ಕೂ ಮುನ್ನ ಕೋವಿಡ್‌ ವಿಚಾರದಲ್ಲಿ ಅಬ್ಬರಿಸಿದ್ದ ಕಾಂಗ್ರೆಸ್‌ ನಾಯಕರು ಕಲಾಪದಲ್ಲಿ ನೆಪ ಮಾತ್ರಕ್ಕೆ ಚರ್ಚೆ ನಡೆಸಿದ್ದರು. ಆದರೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಬೆಂಗಳೂರಿಗೆ ಆಗಮಿಸಿ ಉಭಯ ಸದನಗಳಲ್ಲಿ ಹೋರಾಟ ನಡೆಸುವಂತೆ ಸೂಚನೆ ನೀಡಿದ್ದರು. ಸಿಎಂ ಕುಟುಂಬ ವರ್ಗದ ಭ್ರಷ್ಟಾಚಾರದ ಬಗ್ಗೆ ಮಾತ್ರ ಕಾಂಗ್ರೆಸ್‌ ಪ್ರಸ್ತಾಪಿಸುವ ಸಾಧ್ಯತೆ ನಿರೀಕ್ಷೆ ಮಾಡಲಾಗಿತ್ತು. ಆದರೆ ಗುರುವಾರ ಬೆಳಗ್ಗೆ ಶಾಸಕಾಂಗ ಪಕ್ಷದ ಸಭೆ ನಡೆಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ. ಇದಕ್ಕೆ ಹಿರಿಯ ನಾಯಕರು ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ನಿರ್ಣಯ ಮಂಡನೆ ಮಾಡಲಾಗಿದೆ.

ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ನಿರ್ಧಾರ!
ಕಾಂಗ್ರೆಸ್‌ ವಾದವೇನು?

ಸಿಎಂ ಕುಟುಂಬದ ಭ್ರಷ್ಟಾಚಾರದ ಪ್ರಸ್ತಾಪಿಸುವುದಕ್ಕೆ ಯಾವುದೇ ನಿಯಮದ ಅನ್ವಯ ನೋಟಿಸ್‌ ನೀಡಿದರೂ ಸ್ಪೀಕರ್‌ ಅವಕಾಶ ನೀಡುವುದಿಲ್ಲ. ಆದರೆ ಅವಿಶ್ವಾಸ ನಿರ್ಣಯ ಮಂಡಿಸಿದರೆ ಯಾವ ವಿಚಾರದ ಬಗ್ಗೆ ಬೇಕಾದರೂ ಮಾತನಾಡಬಹುದು. ಪ್ರಸ್ತಾಪದ ಬಗ್ಗೆ ಚರ್ಚೆಗೆ ಸಮಯ ಕೇಳಿ ಎಪಿಎಂಸಿ, ಭೂ ಸುಧಾರಣಾ ಕಾಯಿದೆ ಮಂಡನೆಯಾಗದಂತೆ ತಡೆಯುವುದಕ್ಕೆ ಪ್ರಯತ್ನ ನಡೆಸಬಹುದು ಎಂದು ತಿಳಿದು ಬಂದಿದೆ.

ಯಡಿಯೂರಪ್ಪ ನೇತೃತ್ವದ ಸರಕಾರ ಜನರ ವಿಶ್ವಾಸವನ್ನು ಕಳೆದುಕೊಂಡಿದೆ. ಜನ ವಿರೋಧಿ ಕಾಯಿದೆ ಜಾರಿಗೆ ತರುತ್ತಿದೆ. ಸಿಎಂ ಕುಟುಂಬ ವರ್ಗ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದೆ. ಇದನ್ನೆಲ್ಲ ನೋಡಿಕೊಂಡು ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಬಿಜೆಪಿ ಸರಕಾರಕ್ಕೆ ಬಹುಮತ ಇಲ್ಲ - ಅವಿಶ್ವಾಸ ನಿರ್ಣಯ ಪ್ರಸ್ತಾವನೆ ಸಲ್ಲಿಸಿದ ಸಿದ್ದರಾಮಯ್ಯ
ಇದು ಯಡಿಯೂರಪ್ಪ ಅವರನ್ನು ಆರು ತಿಂಗಳು ರಕ್ಷಣೆ ಮಾಡುವ ತಂತ್ರಗಾರಿಕೆ ಅಲ್ಲ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದು ಬಿಡುವುದು ಬಿಜೆಪಿಯ ಆಂತರಿಕ ವಿಚಾರ. ಇಷ್ಟೊಂದು ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆಯುವಾಗ ಪ್ರತಿಪಕ್ಷವಾಗಿ ಸುಮ್ಮನಿರಲು ಸಾಧ್ಯವೇ? ಈ ವಿಚಾರದ ಬಗ್ಗೆ ಮಾತನಾಡಲು ಸ್ಪೀಕರ್‌ ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ