ಆ್ಯಪ್ನಗರ

ಕಣ್ವ‌ ಬ್ಯಾಂಕ್‌ ಅವ್ಯವಹಾರದಲ್ಲಿ ನಡೆಯದ ತನಿಖೆ, ಸರಕಾರಕ್ಕೆ ಹೈಕೋರ್ಟ್‌ ಎಚ್ಚರಿಕೆ

ಸೊಸೈಟಿ ಸದಸ್ಯರು ಮತ್ತು ಸಾರ್ವಜನಿಕರಿಂದ 2019ರ ಮಾರ್ಚ್‌ ವೇಳೆಗೆ ಸುಮಾರು 642.31 ಕೋಟಿ ರೂ.ಗಳನ್ನು ಶ್ರೀ ಕಣ್ವ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿ ಠೇವಣಿ ರೂಪದಲ್ಲಿ ಸಂಗ್ರಹಿಸಿ ವಂಚಿಸಿದೆ ಎಂಬ ಆರೋಪವಿದೆ.

Vijaya Karnataka 30 Jul 2020, 9:21 pm
ಬೆಂಗಳೂರು: ಶ್ರೀ ಕಣ್ವ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಅವ್ಯವಹಾರ ಪ್ರಕರಣದಲ್ಲಿ ಠೇವಣಿದಾರರ ಹಿತಾಸಕ್ತಿ ರಕ್ಷಿಸಲು ಯಾವುದೇ ಕ್ರಮ ಕೈಗೊಳ್ಳದ ಸರಕಾರದ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್‌, ಸ್ವತಂತ್ರ ತನಿಖೆಗೆ ಆದೇಶಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
Vijaya Karnataka Web Kanva Mart


ಬ್ಯಾಂಕಿನ ವಹಿವಾಟು ಮತ್ತು ಲೆಕ್ಕಪತ್ರಗಳ ಬಗ್ಗೆ ಫೊರೆನ್ಸಿಕ್‌ ಆಡಿಟ್‌ ನಡೆಸುವಂತೆ ಕೋರಿ ಕೆ.ಎಸ್‌. ರಮೇಶ್‌ ಮತ್ತಿತರರು ಸಲ್ಲಿಸಿದ್ದ ಪಿಐಎಲ್‌ ಕುರಿತು ಸಿಜೆ ಎ.ಎಸ್‌. ಓಕಾ ನೇತೃತ್ವದ ವಿಭಾಗೀಯ ಪೀಠ ಗುರುವಾರ ವಿಚಾರಣೆ ನಡೆಸಿತು.

ಸರಕಾರ ಈ ವಿಚಾರದಲ್ಲಿ ಏನೂ ಕ್ರಮ ಕೈಗೊಂಡಿಲ್ಲದಿರುವುದಕ್ಕೆ ತರಾಟೆಗೆ ತೆಗೆದುಕೊಂಡ ನ್ಯಾಯಪೀಠ, ‘‘ವಿಶೇಷಾಧಿಕಾರಿ ಸೂಕ್ತ ಕ್ರಮ ತೆಗೆದುಕೊಳ್ಳಲು ವಿಫಲರಾಗಿದ್ದಾರೆ. ಸಕ್ಷಮ ಪ್ರಾಧಿಕಾರ ಆಸ್ತಿ ಜಪ್ತಿಗೆ ವಿಳಂಬ ಮಾಡಿದೆ. ಒಂದು ವಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಸ್ವತಂತ್ರ ತನಿಖೆಗೆ ಆದೇಶಿಸಬೇಕಾಗುತ್ತದೆ,’’ ಎಂದು ಎಚ್ಚರಿಕೆ ನೀಡಿ ವಿಚಾರಣೆಯನ್ನು ಆಗಸ್ಟ್‌ 6ಕ್ಕೆ ಮುಂದೂಡಿತು.
ಕಳೆದ ವಿಚಾರಣೆ ವೇಳೆ ನ್ಯಾಯಾಲಯ, ಅವ್ಯವಹಾರದ ಸಂಬಂಧ ನಾಲ್ಕು ಎಫ್‌ಐಆರ್‌ ದಾಖಲಾಗಿರುವ ಬಗ್ಗೆ ನಡೆಸಿರುವ ತನಿಖೆಯ ಸ್ಥಿತಿಗತಿ ವರದಿ ಸಲ್ಲಿಸುವಂತೆ ಪೊಲೀಸರಿಗೆ ನಿರ್ದೇಶಿಸಿತ್ತು.

ಪ್ರಕರಣದಲ್ಲಿ ಭಾರೀ ಮೊತ್ತ ಒಳಗೊಂಡಿರುವ ಹಿನ್ನೆಲೆಯಲ್ಲಿ ನ್ಯಾಯಾಲಯ ತಜ್ಞ ಸಂಸ್ಥೆಗೆ ತನಿಖೆಗೆ ವಹಿಸುವುದು ಸೂಕ್ತವೆಂದು ಅಭಿಪ್ರಾಯಪಟ್ಟಿತು. ಸರಕಾರ ಈಗಾಗಲೇ ಕೆಪಿಐಡಿ ಕಾಯಿದೆಯಡಿ ಬೆಂಗಳೂರು ನಗರ ಜಿಲ್ಲಾಧಿಕಾರಿಯನ್ನು ಸಕ್ಷ ಮ ಪ್ರಾಧಿಕಾರವನ್ನಾಗಿ ನೇಮಕ ಮಾಡಿದೆ. ಆದರೆ ಪ್ರಸ್ತುತ ಅವರು ಕೋವಿಡ್‌ ಸಂಬಂಧಿ ಕರ್ತವ್ಯಗಳಲ್ಲಿ ತೊಡಗಿಕೊಂಡಿರುವುದರಿಂದ ಆ ಹೊಣೆಯನ್ನು ಬೇರೊಬ್ಬರಿಗೆ ವಹಿಸುವುದು ಸೂಕ್ತ ಎಂದು ನ್ಯಾಯಾಲಯ ಹೇಳಿತು.

ಅರ್ಜಿದಾರರು, "ಸೊಸೈಟಿ ಸದಸ್ಯರು ಮತ್ತು ಸಾರ್ವಜನಿಕರಿಂದ 2019ರ ಮಾರ್ಚ್‌ ವೇಳೆಗೆ ಸುಮಾರು 642.31 ಕೋಟಿ ರೂ.ಗಳನ್ನು ಠೇವಣಿ ರೂಪದಲ್ಲಿ ಸಂಗ್ರಹಿಸಿದೆ ಮತ್ತು ಹಲವು ಕಂಪನಿಗಳು ಮತ್ತು ಸಂಸ್ಥೆಗಳಿಗೆ 416 ಕೋಟಿ ರೂ. ಸಾಲ ನೀಡಿದೆ. ಆದರೆ ಆ ಸಾಲ ವಸೂಲಿಗೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಹಾಗಾಗಿ ಇಡೀ ವಹಿವಾಟಿನ ಬಗ್ಗೆ ಫೊರೆನ್ಸಿಕ್‌ ಆಡಿಟ್‌ ನಡೆಸಬೇಕು,’’ ಎಂದು ನ್ಯಾಯಾಲಯವನ್ನು ಕೋರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ