ಆ್ಯಪ್ನಗರ

ಡಿಕೆಶಿ ಬಂಧನ ಖಂಡಿಸಿ ಪ್ರತಿಭಟನೆ, 82 ಕೋಟಿ ರೂ. ಸಾರ್ವಜನಿಕ ಆಸ್ತಿ ನಷ್ಟ!

2019ರ ಸೆ. 4 ರಿಂದ 11 ವರಗೆ ನಡೆದ ನಿರಂತರ ಪ್ರತಿಭಟನೆಗಳಿಂದಾಗಿ 82 ಕೋಟಿ ರೂಪಾಯಿ ಮೌಲ್ಯದ ಸಾರ್ವಜನಿಕ ಆಸ್ತಿ-ಪಾಸ್ತಿಗೆ ನಷ್ಟ ವಾಗಿದೆ. ಒಟ್ಟು 29 ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂಬುದಾಗಿ ಸರಕಾರ ಹೈಕೋರ್ಟ್‌ಗೆ ಹೇಳಿದೆ.

Vijaya Karnataka 27 Jan 2020, 7:55 pm
ಬೆಂಗಳೂರು: ಮಾಜಿ ಸಚಿವ, ಶಾಸಕ ಡಿಕೆ ಶಿವಕುಮಾರ್‌ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ ವೇಳೆ ರಾಮನಗರ ಜಿಲ್ಲೆಯಲ್ಲಿ ನಡೆದ ಬಂದ್‌ ಮತ್ತು ಪ್ರತಿಭಟನೆಗಳಿಂದ ಸುಮಾರು 82 ಕೋಟಿ ರೂ. ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟವಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ತಿಳಿಸಿದೆ.
Vijaya Karnataka Web DK Shivakumar


ಕನಕಪುರ ತಾಲೂಕಿನ ರವಿಕುಮಾರ್‌ ಕೆಂಚನಹಳ್ಳಿ ಸಲ್ಲಿಸಿದ್ದ ಪಿಐಎಲ್‌ ಸಿಜೆ ಎಎಸ್‌ ಓಕ್‌ ಮತ್ತು ನ್ಯಾ. ಹೇಮಂತ್‌ ಚಂದನಗೌಡರ್‌ ಅವರಿದ್ದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತು.

ಈ ವೇಳೆ ಸರಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ, 2019ರ ಸೆ. 4 ರಿಂದ 11 ವರಗೆ ನಡೆದ ನಿರಂತರ ಪ್ರತಿಭಟನೆಗಳಿಂದಾಗಿ 82 ಕೋಟಿ ರೂಪಾಯಿ ಮೌಲ್ಯದ ಸಾರ್ವಜನಿಕ ಆಸ್ತಿ-ಪಾಸ್ತಿಗೆ ನಷ್ಟ ವಾಗಿದೆ. ಒಟ್ಟು 29 ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ದಂಗೆನಿರತ 40 ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಸುಪ್ರೀಂಕೋರ್ಟ್‌ ಕೊಡುಂಗಲೂರು ಪ್ರಕರಣದಲ್ಲಿ ನೀಡಿರುವ ಆದೇಶದಂತೆ ನಷ್ಟದ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಹೊಣೆಗಾರಿಕೆ ನಿಗದಿಪಡಿಸಲು ಹೈಕೋರ್ಟ್‌ ನ್ಯಾಯಮೂರ್ತಿಗಳು ಸಮಾಲೋಚನೆ ನಡೆಸಿ ನಿವೃತ್ತ ಜಿಲ್ಲಾನ್ಯಾಯಾಧೀಶರು ಅಥವಾ ಹೆಚ್ಚುವರಿ ಜಿಲ್ಲಾನ್ಯಾಯಾಧೀಶರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಸರಕಾರ ಸಲ್ಲಿಸಿದ ಆಕ್ಷೇಪಣೆಗಳನ್ನು ದಾಖಲಿಸಿಕೊಂಡು ವಿಚಾರಣೆಯನ್ನು ಫೆ. 3ಕ್ಕೆ ಮುಂದೂಡಿತು. ರಾಮನಗರ ಜಿಲ್ಲೆಯ ಯಾವ್ಯಾವ ಪೊಲೀಸ್‌ ಠಾಣೆಗಳಲ್ಲಿ ಎಷ್ಟೆಷ್ಟು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಸರಕಾರ ಸಲ್ಲಿಸಿರುವ ಆಕ್ಷೇಪಣೆಯಲ್ಲಿ ತಿಳಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ