ಆ್ಯಪ್ನಗರ

ಇಬ್ಬರು ಪಕ್ಷೇತರರಿಗೆ ಮನ್ನಣೆ: ರಾಮಲಿಂಗಾರೆಡ್ಡಿ ಮುನಿಸು

ಸರಕಾರ ಉಳಿಸಿಕೊಳ್ಳಬೇಕೆಂಬ ಒಂದೇ ಒಂದು ಕಾರಣಕ್ಕಾಗಿ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರು ಹಾಗೂ ನಿಷ್ಠಾವಂತರನ್ನು ಸಂಪೂರ್ಣ ನಿರ್ಲಕ್ಷ ಮಾಡಲಾಗುತ್ತಿದೆ. ಇದು ಸರಿಯಾದ ಬೆಳವಣಿಗೆಯಲ್ಲ

Vijaya Karnataka 3 Jun 2019, 9:40 pm
ಬೆಂಗಳೂರು : ಸಂಪುಟ ವಿಸ್ತರಣೆ ನೆಪದಲ್ಲಿ ಪಕ್ಷ ನಿಷ್ಠರನ್ನು ಹೊರಗಿಟ್ಟು ಸಮ್ಮಿಶ್ರ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದ ಇಬ್ಬರು ಪಕ್ಷೇತರರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲು ಹೊರಟಿರುವ ಕಾಂಗ್ರೆಸ್‌-ಜೆಡಿಎಸ್‌ ನಾಯಕರ ಧೋರಣೆಗೆ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Vijaya Karnataka Web ರಾಮಲಿಂಗಾ ರೆಡ್ಡಿ
ರಾಮಲಿಂಗಾ ರೆಡ್ಡಿ


ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಭೇಟಿ ವೇಳೆ ಈ ಅಸಮಾಧಾನ ಹೊರಹಾಕಿರುವ ಅವರು ಸರಕಾರ ಉಳಿಸಿಕೊಳ್ಳಬೇಕೆಂಬ ಒಂದೇ ಒಂದು ಕಾರಣಕ್ಕಾಗಿ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕರು ಹಾಗೂ ನಿಷ್ಠಾವಂತರನ್ನು ಸಂಪೂರ್ಣ ನಿರ್ಲಕ್ಷ ಮಾಡಲಾಗುತ್ತಿದೆ. ಇದು ಸರಿಯಾದ ಬೆಳವಣಿಗೆಯಲ್ಲ ಎಂದು ಹೇಳಿದರೆಂದು ತಿಳಿದುಬಂದಿದೆ.

ಕಾಂಗ್ರೆಸ್‌ ಪಕ್ಷದ ನಾಯಕರ ಧೋರಣೆ ಬಗ್ಗೆ ಮತ್ತೊಬ್ಬ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆರ್‌.ರೋಷನ್‌ ಬೇಗ್‌ ಈಗಾಗಲೇ ತಮ್ಮ ಆಕ್ರೋಶವನ್ನು ಹೊರ ಹಾಕಿರುವ ಬೆನ್ನಲ್ಲೇ ರಾಮಲಿಂಗಾರೆಡ್ಡಿ ಕೂಡ ಅದೇ ಧಾಟಿಯಲ್ಲಿ ಮಾತನಾಡಿರುವುದು ಪಕ್ಷದ ನಾಯಕರಲ್ಲಿ ತಳಮಳ ಉಂಟು ಮಾಡಿದೆ. ರಾಮಲಿಂಗಾರೆಡ್ಡಿ, ರೋಷನ್‌ ಬೇಗ್‌ ಸೇರಿದಂತೆ ಅನೇಕ ಕಾಂಗ್ರೆಸ್‌ ಮುಖಂಡರು ಪಕ್ಷೇತರರಿಗೆ ಸಚಿವ ಸ್ಥಾನ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

6ಕ್ಕೆ ಸಂಪುಟ ವಿಸ್ತರಣೆ

ಈ ಮಧ್ಯೆ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಲಭ್ಯ ಮಾಹಿತಿಗಳ ಪ್ರಕಾರ ಗುರುವಾರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆಗಳಿವೆ. ಪಕ್ಷೇತರರಾದ ಆರ್‌.ಶಂಕರ್‌ ಹಾಗೂ ನಾಗೇಶ್‌ ಅವರನ್ನು ಸಚಿವರನ್ನಾಗಿ ಮಾಡಲು ನಿರ್ಧರಿಸಲಾಗಿದೆ. ಅಂತಿಮವಾಗಿ ಇನ್ನೊಂದು ಸುತ್ತು ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಜತೆ ಮಾತುಕತೆ ನಡೆಸಿದ ಬಳಿಕ ಅಂತಿಮ ನಿರ್ಣಯ ಕೈಗೊಳ್ಳಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ