ಆ್ಯಪ್ನಗರ

ಸಿದ್ದು ಭೇಟಿಯಾದ ರಮೇಶ್‌ ಜಾರಕಿಹೊಳಿ, ನಾಗೇಂದ್ರ

ಅತೃಪ್ತ ನಾಲ್ವರು ಕಾಂಗ್ರೆಸ್‌ ಶಾಸಕರ ನಾಯಕನೆಂದೇ ಗುರುತಿಸಿಕೊಂಡಿದ್ದ ಮಾಜಿ ಸಚಿವ ಹಾಗೂ ಗೋಕಾಕ್‌ ಶಾಸಕ ರಮೇಶ್‌ ಜಾರಕಿಹೊಳಿ ಮತ್ತು ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.

Vijaya Karnataka 16 Feb 2019, 5:00 am
ಬೆಂಗಳೂರು : ಅತೃಪ್ತ ನಾಲ್ವರು ಕಾಂಗ್ರೆಸ್‌ ಶಾಸಕರ ನಾಯಕನೆಂದೇ ಗುರುತಿಸಿಕೊಂಡಿದ್ದ ಮಾಜಿ ಸಚಿವ ಹಾಗೂ ಗೋಕಾಕ್‌ ಶಾಸಕ ರಮೇಶ್‌ ಜಾರಕಿಹೊಳಿ ಮತ್ತು ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.
Vijaya Karnataka Web siddu


ಆದರೆ ಚಿಂಚೋಳಿ ಶಾಸಕ ಡಾ.ಉಮೇಶ್‌ ಜಾಧವ್‌ ಹಾಗೂ ಅಥಣಿಯ ಮಹೇಶ್‌ ಕುಮಠಳ್ಳಿ ಅವರ ಗೈರು ಹಾಜರಿ ಎದ್ದು ಕಾಣುತ್ತಿತ್ತು. ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಉಪಸ್ಥಿತರಿದ್ದರು.

ರಮೇಶ್‌ ಜಾರಕಿಹೊಳಿ ಅವರು ಡಿಸೆಂಬರ್‌ 22 ರಂದು ನಡೆದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಬಿಜೆಪಿ ಸಂಪರ್ಕ ಸಾಧಿಸಿ ಮುಂಬಯಿನಲ್ಲಿ ವಾಸ್ತವ್ಯ ಹೂಡಿದ್ದರು. ಜತೆಗೆ ಆಪರೇಷನ್‌ ಕಮಲದ ಹೆಸರಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರನ್ನು ಸೆಳೆಯುವ ಪ್ರಯತ್ನ ನಡೆಸಿದ್ದರು ಎಂದು ಹೇಳಲಾಗಿದೆ. ಆದರೆ ಶಾಸಕರ ನಡವಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಕಾಂಗ್ರೆಸ್‌ ಹೈಕಮಾಂಡ್‌ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆಯೂ ಸೂಚನೆ ನೀಡಿತ್ತು. ಹೀಗಾಗಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ 2 ಸಭೆಗಳಿಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಸ್ಪೀಕರ್‌ ಅವರಿಗೆ ದೂರು ಸಲ್ಲಿಸಲಾಗಿತ್ತು. ಬಜೆಟ್‌ ಅಧಿವೇಶನದ ವೇಳೆ ಆರಂಭದಿಂದ ಅಂತ್ಯದವರೆಗೂ ಕಡ್ಡಾಯವಾಗಿ ಹಾಜರಿದ್ದು ಸರಕಾರದ ಪರ ಮತ ಚಲಾಯಿಸುವಂತೆಯೂ ಕಾಂಗ್ರೆಸ್‌ನಿಂದ ವಿಪ್‌ ಜಾರಿಗೊಳಿಸಲಾಗಿತ್ತು. ಆದರೆ ಆರಂಭದ ದಿನಗಳಲ್ಲಿ ಸದನಕ್ಕೆ ಗೈರು ಹಾಜರಾಗಿದ್ದ ನಾಲ್ವರು ರೆಬೆಲ್‌ಗಳು ಬುಧವಾರ ಸದನಕ್ಕೆ ಹಾಜರಾಗಿ ಅಚ್ಚರಿ ಮೂಡಿಸಿದ್ದರು. ಜತೆಗೆ ವಿಧೇಯಕಗಳ ಅಂಗೀಕಾರದ ಸಂದರ್ಭದಲ್ಲಿ ಸರಕಾರದ ಪರವಾಗಿಯೂ ಮತ ಚಲಾಯಿಸಿದರು. ಇದರೊಂದಿಗೆ ವಿಪ್‌ ಉಲ್ಲಂಘನೆಯಿಂದ ಪಾರಾಗಿದ್ದಾರೆ.

ಈ ಮಧ್ಯೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದಿಂದ ಜಾರಿಗೊಳಿಸಿದ್ದ ನೋಟಿಸ್‌ಗೆ ಉತ್ತರ ನೀಡಿದ್ದರೂ ಖುದ್ದಾಗಿ ಭೇಟಿಯಾಗುವಂತೆ ಮತ್ತೊಂದು ಪತ್ರ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ರಮೇಶ್‌ ಜಾರಕಿಹೊಳಿ ಹಾಗೂ ನಾಗೇಂದ್ರ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಗೈರು ಹಾಜರಿಗೆ ಸಕಾರಣಗಳನ್ನು ಕೊಟ್ಟಿದ್ದಾರೆ ಎನ್ನಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ