ಆ್ಯಪ್ನಗರ

ಸುಪ್ರೀಂ ತೀರ್ಪಿನ ಬಳಿಕ 7 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ: ದಿನೇಶ್‌ ಗುಂಡೂರಾವ್‌

ಈ ಹಿಂದೆ ಕಾಂಗ್ರೆಸ್ ಉಪಚುನಾವಣೆ ನಡೆಯಲಿರುವ 15 ಕ್ಷೇತ್ರಗಳಲ್ಲಿ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿತ್ತು. ಇದೀಗ 7 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಬಾಕಿ ಉಳಿದಿದ್ದು ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

Vijaya Karnataka Web 11 Nov 2019, 1:41 pm
ಬೆಂಗಳೂರು: ಅನರ್ಹ ಶಾಸಕರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತೀರ್ಪು ಹೊರ ಬೀಳಬೇಕಿದ್ದು, ಆ ಬಳಿಕವೇ ಉಪಚುನಾವಣೆ ನಡೆಯಲಿರುವ 15 ಕ್ಷೇತ್ರಗಳಲ್ಲಿ ಉಳಿದ 7 ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದರು.
Vijaya Karnataka Web KPCC Meeting


ಸೋಮವಾರ ಬೆಂಗಳೂರಿನಲ್ಲಿ ನಡೆದ ಕೆಪಿಸಿಸಿ ಹಿರಿಯ ನಾಯಕರ ಸಭೆ ಬಳಿಕ ಅವರು ಈ ಮಾಹಿತಿ ನೀಡಿದರು. ಇನ್ನು ರಾಜು ಕಾಗೆಯವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಇದೇ 13ರ ಒಳಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದರು.

ಕೆ.ಎಚ್‌. ಮುನಿಯಪ್ಪ ಹಾಗೂ ಬಿ.ಕೆ. ಹರಿಪ್ರಸಾದ್ ಸಭೆಯಿಂದ ಬೇಗ ಹೋಗಿಲ್ಲ. ಸಭೆ ಮುಕ್ತಾಯದ ಬಳಿಕವೇ ಅವರು ಹೋಗಿದ್ದು, ತಮ್ಮ ಅಭಿಪ್ರಾಯವನ್ನ ಹೇಳಿ ಹೋಗಿದ್ದಾರೆ. ಮುನಿಯಪ್ಪ ಅವರು ಸ್ಥಳೀಯ ಸಂಸ್ಥೆ ಚುನಾವಣೆ ಇದೆ ಎಂಬ ಕಾರಣಕ್ಕೆ ಬೇಗ ತೆರಳಿದ್ದಾರೆ ಅಷ್ಟೇ ಎಂದು ಸಮಜಾಯಿಷಿ ನೀಡಿದರು.

ಈ ಹಿಂದೆ ಕಾಂಗ್ರೆಸ್ ಉಪಚುನಾವಣೆ ನಡೆಯಲಿರುವ 15 ಕ್ಷೇತ್ರಗಳಲ್ಲಿ 8 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿತ್ತು. ಇದೀಗ 7 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಬಾಕಿ ಉಳಿದಿದ್ದು, "ಇಲ್ಲಿನ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆಯಾಗಿದೆ. ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯೂ ಸಿದ್ಧವಾಗಿದೆ. ಒಂದೆರಡು ಕ್ಷೇತ್ರಗಳಲ್ಲಿ ಸ್ಪಲ್ಪ ಗೊಂದಲ ಇದೆ. ಹೈಕಮಾಂಡ್ ನಾಯಕರು ಪಟ್ಟಿ ಅಂತಿಮ ಮಾಡಲಿದ್ದಾರೆ," ಎಂದು ಅವರು ವಿವರ ನೀಡಿದರು.

ಸಭೆಯ ಬಳಿಕ ಪ್ರತಿಕ್ರಿಯೆ ನೀಡಿದ ಕೆಎಚ್‌ ಮುನಿಯಪ್ಪ, “15 ಕ್ಷೇತ್ರಗಳಲ್ಲೂ ಗೆಲ್ಲಬೇಕು ಅನ್ನುವುದರ ಬಗ್ಗೆ ಚರ್ಚೆ ಮಾಡಿದ್ದೇವೆ. ಒಗ್ಗಟ್ಟಾಗಿ ಎಲ್ಲರೂ ಹೋಗುವ ತೀರ್ಮಾನ ಮಾಡಿದ್ದೇವೆ. ನಗರಸಭೆ ಚುನಾವಣೆ ಸಿದ್ಧತೆ ಮಾಡಿಕೊಳ್ಳಬೇಕಿದೆ. ಅದಕ್ಕಾಗಿ ಸಭೆಯಿಂದ ಹೊರಟಿದ್ದೇನೆ. ಅಧ್ಯಕ್ಷರಿಗೂ ಹೇಳಿದ್ದೇನೆ. ಅನ್ಯತಾ ಭಾವಿಸೋದು ಬೇಡ,” ಎಂದು ಸ್ಪಷ್ಟನೆ ನೀಡಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿಕೆ ನೀಡಿ, “ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಹಿರಿಯರು ಸಲಹೆಗಳನ್ನು ನೀಡಿದ್ದಾರೆ. ಪಕ್ಷದಲ್ಲಿ ಯಾವುದೇ ಭಿನ್ನಾಬಿಪ್ರಾಯಗಳಿಲ್ಲ. ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಆರ್ಥಿಕ ಹಿಂಜರಿತ, ಗಾಂಧಿ ಕುಟುಂಬಕ್ಕೆ ಎಸ್‌ಪಿಜಿ ಭದ್ರತೆ ವಾಪಸ್, ನಿರುದ್ಯೋಗ ಸಮಸ್ಯೆ ಇನ್ನಿತರ ವಿಚಾರಗಳ ಬಗ್ಗೆ ಹೋರಾಟ ಮಾಡಲಿದ್ದೇವೆ. ಇಂದು ಕೇಂದ್ರ, ರಾಜ್ಯದ ವಿರುದ್ಧ ಪ್ರತಿಭಟನೆ ನಡೆಸ್ತೇವೆ,” ಎಂದು ತಿಳಿಸಿದರು.



ಅನೈತಿಕವಾಗಿ ಯಡಿಯೂರಪ್ಪ ಸರಕಾರ ಅಧಿಕಾರಕ್ಕೆ ಬಂದಿದೆ. ಪ್ರವಾಹ ಸಂತ್ರಸ್ತರ ಸಮಸ್ಯೆ ಪರಿಹರಿಸಿಲ್ಲ. ರಾಜ್ಯ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ದೇಶ ಕವಲು ದಾರಿಯತ್ತ ಹೊರಟಿದೆ. ಈ ಪ್ರತಿಭಟನೆ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತೇವೆ ಎಂಬುದಾಗಿ ಅವರು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ