ಆ್ಯಪ್ನಗರ

ಮಣಿವಣ್ಣನ್ ವರ್ಗಾವಣೆ ರದ್ದುಗೊಳಿಸಿ! ಸಾಮಾಜಿಕ ಜಾಲತಾಣಗಳಲ್ಲಿ ಸಹಿ ಸಂಗ್ರಹ ಅಭಿಯಾನ

ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿದ್ದ ಪಿ. ಮಣಿವಣ್ಣನ್ ವರ್ಗಾವಣೆ ಚರ್ಚೆಗೆ ಗ್ರಾಸವಾಗುತ್ತಿದೆ. ಮಣಿವಣ್ಣನ್ ವರ್ಗಾವಣೆ ವಿರೋಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಸಹಿ ಸಂಗ್ರಹ ಅಭಿಯಾನ ಆರಂಭಗೊಂಡಿದೆ. ಈ ಕುರಿತಾದ ವರದಿ ಇಲ್ಲಿದೆ.

Vijaya Karnataka Web 13 May 2020, 11:28 am
ಬೆಂಗಳೂರು: ಕಾರ್ಮಿಕ ಇಲಾಖೆ ಕಾರ್ಯದರ್ಶಿ ಹಿರಿಯ ಐಎಎಸ್ ಅಧಿಕಾರಿ ಪಿ. ಮಣಿವಣ್ಣನ್ ಅವರ ವರ್ಗಾವಣೆ ರದ್ದುಗೊಳಿಸಿ ಕಾರ್ಮಿಕ ಇಲಾಖೆಗೆ ವಾಪಸ್‌ ಕರೆತರುವಂತೆ ಒತ್ತಾಯಿಸಿ ಸಾಮಾಜಿಕ ಜಾಲತಾಣಗಳಲ್ಲಿ ಸಹಿ ಅಭಿಯಾನ ನಡೆಯುತ್ತಿದೆ. ಪಿ. ಮಣಿವಣ್ಣನ್ ಅವರನ್ನು ರಾಜ್ಯ ಸರ್ಕಾರ ಸೋಮವಾರ ಏಕಾಏಕಿ ವರ್ಗಾವಣೆ ಮಾಡಿತ್ತು. ಈ ವರ್ಗಾವಣೆ ಸಾಕಷ್ಟು ಚರ್ಚೆಗಳಿಗೂ ಕಾರಣವಾಗುತ್ತಿದೆ. ಕೈಗಾರಿಕೋದ್ಯಮಿಗಳ ಲಾಬಿ ಇದರ ಹಿಂದೆ ಇದೆ ಎಂಬ ಆರೋಪಗಳು ಕೇಳಿಬರುತ್ತಿದೆ.
Vijaya Karnataka Web manivannan


ಮಣಿವಣ್ಣನ್ ಕೊರೊನಾದಂತಹ ಸಂದಿಗ್ದ ಸಂದರ್ಭದಲ್ಲಿ ಕಾರ್ಮಿಕರ ಸಂಕಷ್ಟಗಳಿಗೆ ಉತ್ತಮವಾಗಿ ಸ್ಪಂದಿಸಿದ್ದರು. ಯಾವುದೇ ಕಾರಣಕ್ಕೂ ಕಾರ್ಮಿಕರ ವೇತನವನ್ನು ಕಡಿತಗೊಳಿಸಬಾರದು ಹಾಗೂ ಉದ್ಯೋಗದಿಂದ ವಜಾಗೊಳಿಸಬಾರದು ಎಂದು ಕಂಪನಿಗಳಿಗೆ ಸೂಚನೆ ನೀಡಿ ಸುತ್ತೋಲೆ ಹೊರಡಿಸಿದ್ದರು. ಅಲ್ಲದೆ ಕಾರ್ಮಿಕ ಕಾನೂನು ತಿದ್ದುಪಡಿಗೂ ಅವರು ವಿರೋಧವಿದ್ದರು.


ಮಣಿವಣ್ಣನ್ ಎತ್ತಂಗಡಿಯ ಹಿಂದೆ ಯಾರ ಕೈವಾಡ? ಚರ್ಚೆಗೆ ಗ್ರಾಸವಾದ ಸರ್ಕಾರದ ನಿರ್ಧಾರ

ಆದರೆ ಇದೀಗ ಏಕಾಏಕಿ ಮಣಿವಣ್ಣನ್ ಅವರನ್ನು ಕಾರ್ಮಿಕ ಇಲಾಖೆಯಿಂದ ವರ್ಗಾವಣೆ ಮಾಡಿ ಅವರ ಜಾಗಕ್ಕೆ ಹಿರಿಯ ಐಎಎಸ್ ಅಧಿಕಾರಿ ಮಹೇಶ್ವರ್ ರಾವ್ ಅವರನ್ನು ನೇಮಿಸಲಾಗಿದೆ. ಸರ್ಕಾರದ ಈ ನಡೆ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಈ ನಿರ್ಧಾರದ ಹಿಂದೆ ಉದ್ಯಮಿ ಲಾಬಿಗಳು ಕೆಲಸ ಮಾಡಿವೆ ಎಂದು ಕಾರ್ಮಿಕ ಸಂಘಟನೆಗಳು ಆರೋಪ ಮಾಡುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ.

ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಸಹಿ ಸಂಗ್ರಹ ಅಭಿಯಾನ ಆರಂಭಗೊಂಡಿದ್ದು ಮಣಿವಣ್ಣನ್ ಅವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವಾಪಸ್‌ ಕರೆತರಬೇಕು ಎಂದು ಒತ್ತಾಯಿಸಲಾಗುತ್ತಿದೆ. ಸುಮಾರು 3,333 ಜನರು ಈ ಅಭಿಯಾನದಲ್ಲಿ ಭಾಗಿಯಾಗಿ ಬೆಂಬಲ ಸೂಚಿಸಿದ್ದಾರೆ. ಅಲ್ಲದೆ ಸರ್ಕಾರದ ನಡೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಖಂಡಿಸಿದ್ದಾರೆ.

ಆರ್ಥಿಕ ಪ್ಯಾಕೇಜ್ ಸಮಗ್ರ ವಿವರಣೆ; ಸಂಜೆ 4ಕ್ಕೆ ವಿತ್ತ ಸಚಿವೆ ಸುದ್ದಿಗೋಷ್ಠಿ

ಈ ಕುರಿತಾಗಿ ಮಾತನಾಡಿದ ಸಾಮಾಜಿಕ ಹೋರಾಟಗಾರರಾದ ಕೆ.ಎಸ್‌ ವಿಮಲಾ, ಮಣಿವಣ್ಣನ್ ವರ್ಗಾವಣೆ ಹಿಂದೆ ಕೈಗಾರಿಕೋದ್ಯಮಿಗಳ ಲಾಬಿ ಕೆಲಸ ಮಾಡಿದೆ ಎಂದು ಆರೋಪಿಸಿದ್ದಾರೆ. "ಕೊರೊನಾದಂತಹ ಆಪತ್ತಿನ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರು ಸಾಕಷ್ಟು ಸಂಕಷ್ಟದಲ್ಲಿದ್ದಾರೆ. ಕಾರ್ಮಿಕರಿಗೆ ಊಟ, ಪರಿಹಾರ ನೀಡುವ ನಿಟ್ಟಿನಲ್ಲಿ ಕಾರ್ಮಿಕ ಸಂಘಟನೆಗಳ ಜೊತೆಗೆ ಉತ್ತಮ ಸಂಪರ್ಕವನ್ನಿಟ್ಟುಕೊಂಡು ಸ್ಪಂದನೆ ನೀಡಿದ ಅಧಿಕಾರಿ ಮಣಿವಣ್ಣನ್. ಅವರೊಬ್ಬ ಮಾನವೀಯ ಮನೋಭಾವದ ವ್ಯಕ್ತಿಯಾಗಿದ್ದರು. ಕಾರ್ಮಿಕ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದ ಉತ್ತಮ ಅಧಿಕಾರಿಯನ್ನು ಏಕಾಏಕಿ ವರ್ಗಾವಣೆ ಮಾಡಿರುವ ಹಿಂದಿರುವ ಸರ್ಕಾರದ ಉದ್ಧೇಶವೇನು" ಎಂದು ಅವರು ಪ್ರಶ್ನಿಸಿದ್ದಾರೆ.

ಕೊರೊನಾ ನೆಪದಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನು 8 ರಿಂದ 12 ಗಂಟೆಗೆ ವರೆಗೆ ವಿಸ್ತರಣೆ ಮಾಡಲು ಸರ್ಕಾರ ಮುಂದಾಗುತ್ತಿದೆ. ಅಂತಹ ಸಂದರ್ಭದಲ್ಲಿ ಮಣಿವಣ್ಣನ್ ಅವರಂತಹ ಅಧಿಕಾರಿ ಇದ್ದರೆ ಅದು ಸುಲಭ ಸಾಧ್ಯವಲ್ಲ ಎಂಬ ನಿಟ್ಟಿನಲ್ಲಿ ಕೈಗಾರಿಕೋದ್ಯಮಿಗಳ ಒತ್ತಡಕ್ಕೆ ಸರ್ಕಾರ ಮಣಿದಿದೆ. ಆದ್ದರಿಂದ ವರ್ಗಾವಣೆ ರದ್ದುಗೊಳಿಸಿ ಅವರನ್ನು ಮತ್ತೆ ಆ ಸ್ಥಾನಕ್ಕೆ ನೇಮಕ ಮಾಡಬೇಕು ಎಂದು ಕೆ.ಎಸ್ ವಿಮಲಾ ಒತ್ತಾಯಿಸಿದ್ದಾರೆ.

ಕಾರ್ಮಿಕ ಇಲಾಖೆಯಿಂದ ವರ್ಗಾವಣೆಗೊಂಡ ಮಣಿವಣ್ಣನ್ ಅವರನ್ನು ಪಶುಸಂಗೋಪನೆ ಹಾಗೂ ಮೀನುಗಾರಿಕಾ ಇಲಾಖೆಯ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಆರಂಭದಲ್ಲಿ ಹುದ್ದೆಯನ್ನು ನೀಡರೆ ವರ್ಗಾವಣೆ ಮಾಡಲಾಗಿತ್ತು. ಸರ್ಕಾರ ಈ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ