ಆ್ಯಪ್ನಗರ

ವಿಧಾನಸಭೆ ಸಚಿವಾಲಯದ ನೇಮಕಾತಿ ಅಕ್ರಮ ತನಿಖೆಗೆ ತಜ್ಞರ ಸಲಹೆಗೆ ಸ್ಪೀಕರ್‌ ನಿರ್ಧಾರ

ವಿಧಾನಸಭೆ ಸಚಿವಾಲಯದಲ್ಲಿ ನಡೆದಿರುವ ನೇಮಕ ಹಗರಣದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸುವ ಸಂಬಂಧ ಕಾನೂನು ತಜ್ಞರ ಅಭಿಪ್ರಾಯ ಪಡೆಯಲು ಸ್ಪೀಕರ್‌ ಕೆ.ಆರ್‌.ರಮೇಶ್‌ಕುಮಾರ್‌ ನಿರ್ಧರಿಸಿದ್ದಾರೆ.

Vijaya Karnataka Web 2 Aug 2018, 4:00 am
ಬೆಂಗಳೂರು: ವಿಧಾನಸಭೆ ಸಚಿವಾಲಯದಲ್ಲಿ ನಡೆದಿರುವ ನೇಮಕ ಹಗರಣದ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸುವ ಸಂಬಂಧ ಕಾನೂನು ತಜ್ಞರ ಅಭಿಪ್ರಾಯ ಪಡೆಯಲು ಸ್ಪೀಕರ್‌ ಕೆ.ಆರ್‌.ರಮೇಶ್‌ಕುಮಾರ್‌ ನಿರ್ಧರಿಸಿದ್ದಾರೆ.
Vijaya Karnataka Web ramesh-kumar


''ಚುನಾವಣೆಗೆ ಮುನ್ನ ತರಾತುರಿಯಲ್ಲಿ ನಡೆದಿರುವ ಈ ನೇಮಕಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು, ಹಣ ಪಡೆದು ಉದ್ಯೋಗ ನೀಡಲಾಗಿದೆ ಮತ್ತು ಸ್ವಜನಪಕ್ಷಪಾತ ನಡೆದಿದೆ ಎಂದು ದೂರಲಾಗಿದೆ. ಈ ಅಕ್ರಮದಲ್ಲಿ ಮಾಜಿ ಸ್ಪೀಕರ್‌ ಕೆ.ಬಿ.ಕೋಳಿವಾಡ, ಮಾಜಿ ಸಿಎಂ ಸಿದ್ದರಾಮಯ್ಯ, ವಿಧಾನಸಭೆ ಕಾರ್ಯದರ್ಶಿ ಎಸ್‌.ಮೂರ್ತಿ ಸೇರಿದಂತೆ ಸಾಂವಿಧಾನಿಕ ಹುದ್ದೆಯಲ್ಲಿರುವವರು ಭಾಗಿಯಾಗಿರುವ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ಸ್ವತಂತ್ರ ತನಿಖೆಗೆ ಒಪ್ಪಿಸಬೇಕು,'' ಎಂದು ಆಗ್ರಹಿಸಿ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್‌.ಆರ್‌. ಹಿರೇಮಠ್‌ ಪತ್ರ ಬರೆದಿದ್ದರು.

ಹಿರೇಮಠ್‌ ಪತ್ರಕ್ಕೆ ಉತ್ತರ ನೀಡಿರುವ ಸ್ಪೀಕರ್‌ ಕೆ.ಆರ್‌.ರಮೇಶ್‌ಕುಮಾರ್‌ ''ಈ ನೇಮಕ ಅಕ್ರಮದಲ್ಲಿ ಸಾಂವಿಧಾನಿಕ ಹುದ್ದೆಯಲ್ಲಿದ್ದವರು ಭಾಗಿಯಾಗಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಅಡ್ವೊಕೇಟ್‌ ಜನರಲ್‌ ಹಾಗೂ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು'' ಎಂದು ಭರವಸೆ ನೀಡಿದ್ದಾರೆ.

ಈ ಸಂಬಂಧ ಕಳೆದ ಜು.20 ರಂದು ಸ್ಪೀಕರ್‌ ರಮೇಶ್‌ಕುಮಾರ್‌ ಹಾಗೂ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದ ಹಿರೇಮಠ್‌ ''90 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ 151 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಹೈದರಾಬಾದ್‌ ಕರ್ನಾಟಕ ಭಾಗದ ಜನರಿಗೆ ಮೀಸಲಾತಿ ಕಲ್ಪಿಸಿಲ್ಲ. ಅಂದಿನ ಸ್ಪೀಕರ್‌, ಸಿಎಂ, ಕಾನೂನು ಸಚಿವರು, ಮುಖ್ಯ ಸಚೇತಕರೂ ಈ ಅಕ್ರಮದಲ್ಲಿ ಭಾಗಿಯಾಗಿದ್ದು, ತಮ್ಮ ವಿಧಾನಸಭಾ ಕ್ಷೇತ್ರದ ಜನರಿಗೆ ಉದ್ಯೋಗ ಕೊಡಿಸಿದ್ದಾರೆ. ಅಧಿಕಾರ ದುರ್ಬಳಕೆ, ಸ್ವಜನಪಕ್ಷಪಾತ ಹಾಗೂ ಲಂಚ ಪಡೆಯಲಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ, ಭ್ರಷ್ಟಾಚಾರ ನಿಗ್ರಹ ಕಾಯಿದೆಯಡಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು'' ಎಂದು ಮನವಿ ಮಾಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ