ಆ್ಯಪ್ನಗರ

ಶಾಲಾ ಪಠ್ಯ ಕಡಿತ ಇನ್ನೂ ಅಂತಿಮವಾಗಿಲ್ಲ: ಎಸ್‌. ಸುರೇಶ್‌ ಕುಮಾರ್‌ ಸ್ಪಷ್ಟನೆ

ಒಂದರಿಂದ ಹತ್ತನೇ ತರಗತಿವರೆಗೆ ಎಲ್ಲ ವಿಷಯಗಳ ವೈಜ್ಞಾನಿಕ ಪಠ್ಯ ಕಡಿತಕ್ಕೆ ಮುಂದಾಗಿದ್ದು, ಇನ್ನೂ ಶೈಕ್ಷಣಿಕ ವರ್ಷದ ಅವಧಿ ನಿಗದಿಯಾಗದ ಹಿನ್ನೆಲೆಯಲ್ಲಿ ಪಠ್ಯಾಂಶಗಳನ್ನು ಅಂತಿಮಗೊಳಿಸಿಲ್ಲ ಎಂದು ಸಚಿವ ಎಸ್‌. ಸುರೇಶ್‌ ಕುಮಾರ್ ಸ್ಪಷ್ಟಪಡಿಸಿದ್ದಾರೆ.

Vijaya Karnataka Web 29 Jul 2020, 7:55 pm
ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಒಂದರಿಂದ ಹತ್ತನೇ ತರಗತಿವರೆಗೆ ಎಲ್ಲ ವಿಷಯಗಳ ವೈಜ್ಞಾನಿಕ ಪಠ್ಯ ಕಡಿತಕ್ಕೆ ಮುಂದಾಗಿದ್ದು, ಇನ್ನೂ ಶೈಕ್ಷಣಿಕ ವರ್ಷದ ಅವಧಿ ನಿಗದಿಯಾಗದ ಹಿನ್ನೆಲೆಯಲ್ಲಿ ಪಠ್ಯಾಂಶಗಳನ್ನು ಅಂತಿಮಗೊಳಿಸಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ.
Vijaya Karnataka Web s suresh kumar


ಈ ಕುರಿತು ತಮ್ಮ ಅಧಿಕೃತ ಫೇಸ್‌ಬುಕ್‌ ಪೇಜ್‌ನಲ್ಲಿ ಹೇಳಿದ್ದಾರೆ. ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳನ್ನು ಗಮನಿಸಿದ್ದೇನೆ. ಪ್ರಸ್ತುತ ಶೈಕ್ಷಣಿಕ ವರ್ಷ ಇನ್ನೂ ಪ್ರಾರಂಭವಾಗಿಲ್ಲ. ಹೀಗಾಗಿ ನಮಗೆ ಎಷ್ಟು ದಿನಗಳು ದೊರೆಯುತ್ತವೆಂಬುದು ಇನ್ನೂ ಅಸ್ಪಷ್ಟವಾಗಿರುವುದರಿಂದ ಸಿಲೆಬಸ್‍ನ್ನು ಅಂತಿಮಗೊಳಿಸಿರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಶೈಕ್ಷಣಿಕ ವರ್ಷದಲ್ಲಿ ಎಷ್ಟು ದಿನಗಳು ಲಭ್ಯವಾಗಲಿವೆ ಎಂಬುದರ ಆಧಾರದ ಮೇಲೆ ಪಠ್ಯ ಕಡಿತ ಮಾಡುವುದು ವೈಜ್ಞಾನಿಕ ವಿಧಾನವಾಗಿದೆ. ಯಾವುದೇ ಪಠ್ಯವನ್ನು ಅನಗತ್ಯವಾಗಿ ಕಡಿತ ಮಾಡುವುದಿಲ್ಲ. ಹಾಗಾಗಿ ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲ.

ರಾಜ್ಯದಲ್ಲಿ ಪ್ರತಿದಿನ 5 ಸಾವಿರ ಪ್ರಕರಣ: ಬೆಂಗಳೂರಲ್ಲಿ 50 ಸಾವಿರ ದಾಟಿದ ಸೋಂಕು!

ಈ ಶೈಕ್ಷಣಿಕ ಸಾಲಿನಲ್ಲಿ ಲಭ್ಯವಾಗಬಹುದಾದ ಬೋಧನಾ ಅವಧಿ, ಸಮೂಹಮಾಧ್ಯಮಗಳು ಅಥವಾ ತಂತ್ರಜ್ಞಾನಾಧಾರಿತ ಬೋಧನೆಗೆ ಕಡ್ಡಾಯವಾಗಿ ಅಳವಡಿಸಿಕೊಳ್ಳಬಹುದಾದ ಪಠ್ಯಗಳನ್ನು ಗುರುತಿಸಿ ಇಲಾಖೆಯ ತಂತ್ರಜ್ಞಾನಾಧಾರಿತ ಕಲಿಕಾ ನೀತಿಗನುಗುಣವಾಗಿ ಪಠ್ಯ ಬೋಧನೆಯ ಮಾದರಿಗಳನ್ನು ರಚನೆ ಮಾಡಲು ಇಲಾಖೆ ಇಚ್ಛಿಸಿದೆ. ಆದರೆ, ಈ ಎಲ್ಲ ಕ್ರಮಗಳು ಅಂತಿಮಗೊಳ್ಳುವ ಮೊದಲೇ ಅಚಾತುರ್ಯದಿಂದ ಇಲಾಖೆಯ ಜಾಲತಾಣದಲ್ಲಿ ಅನುಮೋದಿತವಾಗದ, ಯಾವುದೇ ಕಡಿತ ಮಾಡಿಲ್ಲದ ಪಠ್ಯಕ್ರಮವನ್ನು ಪ್ರಕಟಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಜುಲೈ 31ರೊಳಗೆ ಮುಗಿಸಲೇಬೇಕಾದ 7 ಹಣಕಾಸು ಟಾಸ್ಕ್‌ಗಳಿವು!

ಇದನ್ನು ಕೂಡಲೇ ಹಿಂಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇತಿಹಾಸಕ್ಕೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಯ, ದಾಖಲೆಯ, ಸಂಗತಿಯ ಐತಿಹ್ಯವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ. ನಮ್ಮ ಸರಕಾರವು ಸಮಾಜವನ್ನು ಕಟ್ಟುವ ಕೆಲಸ ಮಾಡುತ್ತದೆಯೇ ವಿನಾ ಕೆಡವುವ ಕೆಲಸ ಮಾಡುವುದಿಲ್ಲ. ಇದು ಅನವಶ್ಯಕ ರಾಜಕೀಯ ಗೊಂದಲಗಳಿಗೆ ಅವಕಾಶ ಕಲ್ಪಿಸಬೇಕಿಲ್ಲ‌. ಸಂಗೊಳ್ಳಿ ರಾಯಣ್ಣನಮಗೆಲ್ಲ ಪ್ರೇರಣಾದಾಯಿ ವ್ಯಕ್ತಿತ್ವ. ಅಂತಹ ವೀರಪುರುಷರ ಪರಿಚಯ ನಮ್ಮೆಲ್ಲ ವಿದ್ಯಾರ್ಥಿಗಳಿಗೆ ಆಗಲೇಬೇಕಾಗಿರುವುದು ಅತ್ಯವಶ್ಯ ವಿಚಾರ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅದೇ ರೀತಿ ನಮಗೆ ಪ್ರೇರಣೆ ತುಂಬುವ ಯಾವುದೇ ಮಹಾನ್ ವ್ಯಕ್ತಿತ್ವ, ಯಾವುದೇ ಸಾಮ್ರಾಜ್ಯ, ಯಾವುದೇ ಐತಿಹಾಸಿಕ ಘಟನೆಗೆ ಎಲ್ಲ ರೀತಿಯ ಗೌರವ ನೀಡುವುದು ನಮ್ಮೆಲ್ಲರ ಹೆಮ್ಮೆಯ ಕರ್ತವ್ಯ. ಅದರಲ್ಲಿ ಯಾವುದೇ ಚ್ಯುತಿ ಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ