ಆ್ಯಪ್ನಗರ

ತೆಲಂಗಾಣ, ತಮಿಳುನಾಡಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು: ರಾಜ್ಯದಲ್ಲೂ ರದ್ದಾಗುತ್ತಾ ಎಗ್ಸಾಂ?

ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದುಗೊಳಿಸಲಾಗಿದೆ. ಹೀಗಾಗಿ ರಾಜ್ಯದಲ್ಲಿಯೂ 10ನೇ ತರಗತಿ ಪರೀಕ್ಷೆ ರದ್ದಾಗುತ್ತದೆಯೇ? ಎಂಬ ಪ್ರಶ್ನೆ ಎದುರಾಗಿತ್ತು. ಈ ಪ್ರಶ್ನೆಗೆ ಖುದ್ದು ಶಿಕ್ಷಣ ಸಚಿವರೇ ಸ್ಪಷ್ಟನೆ ನೀಡಿದ್ದಾರೆ.

Vijaya Karnataka Web 9 Jun 2020, 1:29 pm
ಬೆಂಗಳೂರು: ಕೊರೊನಾ ವೈರಸ್‌ ಭೀತಿಯಿಂದಾಗ ಎಲ್ಲ ಪರೀಕ್ಷೆಗಳನ್ನೂ ಮುಂದೂಡಲಾಗಿದೆ. ತೆಲಂಗಾಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನೇ ರದ್ದುಗೊಳಿಸಲಾಗಿತ್ತು. ಈ ಬೆನ್ನಲ್ಲೇ ತಮಿಳುನಾಡು ಕೂಡ ಎಸ್ಎಸ್‌ಎಲ್‌ ಪರೀಕ್ಷೆ ರದ್ದು ಮಾಡುವುದಾಗಿ ಘೋಷಿಸಿದೆ. ಹೀಗಾಗಿ ರಾಜ್ಯದಲ್ಲಿ 10ನೇ ತರಗತಿ ಪರೀಕ್ಷೆ ನಡೆಯುತ್ತದೆಯೇ? ರದ್ದಾಗುತ್ತದೆಯೇ? ಎಂಬ ಪ್ರಶ್ನೆ ಎದುರಾಗಿತ್ತು.
Vijaya Karnataka Web s suresh kumar


ಈ ಪ್ರಶ್ನೆಗೆ ಖುದ್ದು ಶಿಕ್ಷಣ ಸಚಿವರಾದ ಎಸ್‌. ಸುರೇಶ್‌ ಕುಮಾರ್‌ ಅವರು ಉತ್ತರಿಸಿದ್ದು, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು ಮಾಡಲಾಗದು ಎಂದು ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ಪರೀಕ್ಷೆ ದಿನಾಂಕ ನಿಗದಿಯಾಗಿದ್ದು, ವೇಳಾಪಟ್ಟಿಯಂತೆಯೇ ಪರೀಕ್ಷೆ ನಡೆಯಲಿದೆ. ನಿರ್ಧಾರ ಬದಲಾಯಿಸುವ ಮಾತೇ ಇಲ್ಲ. ಜೂನ್‌ 25ರಿಂದ ಜುಲೈ 4ರವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ದತೆ ನಡೆಸಿಕೊಳ್ಳಿ ಎಂದು ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಉಡುಪಿಯಲ್ಲಿ ಹೇಳಿಕೆ ನೀಡಿದ್ದಾರೆ.


ತೆಲಂಗಾಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು:
ಕೊರೊನಾ ವೈರಸ್ ತೆಲಂಗಾಣದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ. ರಾಜ್ಯ ಸರಕಾರ 10ನೇ ಎಸ್‌ಎಸ್ಸಿ ಪರೀಕ್ಷೆಯನ್ನು ರದ್ದುಗೊಳಿಸಿದ್ದು, ವಿದ್ಯಾರ್ಥಿಗಳನ್ನು ಇಂಟರ್ನಲ್ ಅಂಕಗಳನ್ನು ಆಧರಿಸಿ ಮುಂದಿನ ತರಗತಿಗೆ ಬಡ್ತಿ ನೀಡುವುದಾಗಿ ಪ್ರಕಟಿಸಿದೆ. ಮುಖ್ಯಮಂತ್ರಿ ಕೆ.ಸಿ. ಚಂದ್ರಶೇಖರ್ ಸೋಮವಾರ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಪರೀಕ್ಷೆ ನಡೆಸದೇ ಇರಲು ತೀರ್ಮಾನ ಕೈಗೊಂಡಿದ್ದಾರೆ. ಪ್ರಸಕ್ತ ಸಾಲಿನಲ್ಲಿ 10ನೇ ತರಗತಿಯಲ್ಲಿ 5,34,903 ವಿದ್ಯಾರ್ಥಿಗಳು ಇದ್ದು, ಎಲ್ಲರನ್ನೂ ಗ್ರೇಡಿಂಗ್ ಆಧಾರದ ಮೇಲೆ ಉತ್ತೀರ್ಣ ಮಾಡಲು ನಿರ್ಧರಿಸಲಾಗಿದೆ.


ತಮಿಳುನಾಡಿನಲ್ಲೂ ಪರೀಕ್ಷೆ ರದ್ದು: ತಮಿಳುನಾಡು ಸರಕಾರ ಕೂಡ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಯ ದೃಷ್ಟಿಯಿಂದ ಎಸ್‌ಎಸ್ಎಲ್‌ಸಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 10ನೇ ತರಗತಿಯಲ್ಲಿ 9.5ಲಕ್ಷ ವಿದ್ಯಾರ್ಥಿಗಳು ಇದ್ದು, ಎಲ್ಲರನ್ನೂ ಗ್ರೇಡಿಂಗ್ ಆಧಾರದ ಮೇಲೆ ಉತ್ತೀರ್ಣ ಮಾಡಲು ನಿರ್ಧರಿಸಲಾಗಿದೆ. ಈ ಹಿಂದೆ ಚತ್ತೀಸ್‌ಗಢ ಮತ್ತು ಪಂಜಾಬ್‌ ಸರಕಾರಗಳು ಕೂಡ ಎಸ್ಎಸ್‌ಎಲ್‌ಸಿ ಪರೀಕ್ಷೆಗಳನ್ನು ರದ್ದುಪಡಿಸಿದ್ದವು. ಪಂಜಾಬ್‌ ಸರಕಾರ ಈಗಾಗಲೇ ಫಲಿತಾಂಶವನ್ನು ಕೂಡ ಪ್ರಕಟಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ