ಆ್ಯಪ್ನಗರ

ರಾಜ್ಯದಲ್ಲಿ ಮತ್ತೆ ಪಠ್ಯ ಪುಸ್ತಕ ಬದಲಾವಣೆಗೆ ಚಿಂತನೆ?: ನೂತನ ಶಿಕ್ಷಣ ಸಚಿವ ಶ್ರೀನಿವಾಸ್ ಸುಳಿವು

ಪ್ರೊ. ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯ-ಪುಸ್ತಕ ಪರಿಷ್ಕರಣೆ ಸಮಿತಿಯ ವರದಿ ಸಲ್ಲಿಕೆಯಾಗಿ ಎರಡು ವರ್ಷ ಕಳೆಯುವುದರೊಳಗೆ ಮತ್ತೆ ಪಠ್ಯ-ಪುಸ್ತಕ ಪರಿಷ್ಕರಣೆ ಮಾಡುವ ಬಗ್ಗೆ ರಾಜ್ಯ ಸರಕಾರ ಚಿಂತನೆ ನಡೆಸಿದೆ.

Vijaya Karnataka 27 Jun 2019, 9:29 am
ಬೆಂಗಳೂರು: ಪ್ರೊ. ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯ-ಪುಸ್ತಕ ಪರಿಷ್ಕರಣೆ ಸಮಿತಿಯ ವರದಿ ಸಲ್ಲಿಕೆಯಾಗಿ ಎರಡು ವರ್ಷ ಕಳೆಯುವುದರೊಳಗೆ ಮತ್ತೆ ಪಠ್ಯ-ಪುಸ್ತಕ ಪರಿಷ್ಕರಣೆ ಮಾಡುವ ಬಗ್ಗೆ ರಾಜ್ಯ ಸರಕಾರ ಚಿಂತನೆ ನಡೆಸಿದೆ.
Vijaya Karnataka Web Gubbi JDS - SR Srinivas


ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಗುಬ್ಬಿ ಶ್ರೀನಿವಾಸ್‌ ಈ ಬಗ್ಗೆ ಸುಳಿವು ನೀಡಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಆಮೂಲಾಗ್ರವಾಗಿ ರಚನಾತ್ಮಕ ಬದಲಾವಣೆ ತರುವ ದೃಷ್ಟಿಯಿಂದ ಸರಕಾರ ಈ ಬಗ್ಗೆ ಚಿಂತನೆ ನಡೆಸಿದೆ ಎಂದು ಅವರು ಸುದ್ದಿಗಾರರಿಗೆ ಬುಧವಾರ ತಿಳಿಸಿದ್ದಾರೆ.

''ರಾಜ್ಯದ ಹಳ್ಳಿಗಾಡಿನ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಸರಕಾರ ಆದ್ಯತೆ. ದಿಲ್ಲಿ ಹಾಗೂ ಕೇರಳ ರಾಜ್ಯಗಳು ಈ ವಿಚಾರದಲ್ಲಿ ಗಮನಾರ್ಹ ಸಾಧನೆ ಮಾಡಿವೆ. ಇನ್ನು ಹದಿನೈದು ದಿನದೊಳಗಾಗಿ ಶಿಕ್ಷಣ ತಜ್ಞರು ಹಾಗೂ ಅಧಿಕಾರಿಗಳ ಜತೆಗೆ ನಾನು ದಿಲ್ಲಿಗೆ ಭೇಟಿ ನೀಡಿ ಅಲ್ಲಿನ ಸರಕಾರಿ ಶಿಕ್ಷಣ ವ್ಯವಸ್ಥೆ ಬಗ್ಗೆ ಅಧ್ಯಯನ ನಡೆಸಲಿದ್ದೇನೆ. ಬದಲಾಗುತ್ತಿರುವ ವ್ಯವಸ್ಥೆಗೆ ಅನುಗುಣವಾಗಿ ಪಠ್ಯ-ಪುಸ್ತಕ ಪರಿಷ್ಕರಣೆ ಅನಿವಾರ್ಯ. ವ್ಯಕ್ತಿತ್ವ ವಿಕಸನ ಹಾಗೂ ಪ್ರಾದೇಶಿಕತೆಯನ್ನು ಒಳಗೊಂಡ ಶಾಲಾ ಪಠ್ಯ ರಚನೆ ಮಾಡಬೇಕಿದೆ. ಈ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಜತೆ ಚರ್ಚೆ ನಡೆಸಿ ಮುನ್ನಡೆಯಲಾಗುವುದು,'' ಎಂದು ಹೇಳಿದರು.

ಶನಿವಾರ ಸಭೆ

''ಶಾಲಾ ವಿದ್ಯಾರ್ಥಿಗಳಿಗೆ ನೀಡಿರುವ ಬೈಸಿಕಲ್‌ ಗುಣಮಟ್ಟದಿಂದ ಕೂಡಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿತ್ತು. ಆದರೆ ಮತ್ತೆ ವಿತರಣೆ ಮಾಡುವ ಬಗ್ಗೆ ಮುಖ್ಯಮಂತ್ರಿ ಜತೆಗೆ 29ರಂದು ಶಿಕ್ಷಣ ಇಲಾಖೆಯ ಸಭೆ ನಿಗದಿಯಾಗಿದೆ. ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು,'' ಎಂದು ಸಚಿವರು ಹೇಳಿದರು.

ಗ್ರಂಥಪಾಲಕರ ಕಾಯಂ ಬೇಡಿಕೆ

''ಈ ಹಿಂದೆ ಗ್ರಂಥಪಾಲಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗಿತ್ತು. ಅವರೀಗ ಉದ್ಯೋಗ ಕಾಯಂಗೊಳಿಸುವಂತೆ ಸರಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. ಸರಕಾರ ಈ ಬಗ್ಗೆ ಪರಿಶೀಲನೆ ನಡೆಸಲು ಸಿದ್ಧ. ಆದರೆ 6000ಕ್ಕೂ ಹೆಚ್ಚು ಗ್ರಂಥಾಲಯಗಳು ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿವೆ. ಹಂತಹಂತವಾಗಿ ಸೇವೆ ಕಾಯಂ ಮಾಡುವ ಬಗ್ಗೆ ಸರಕಾರ ಕ್ರಮ ತೆಗೆದುಕೊಳ್ಳಲಿದೆ,'' ಎಂದರು.
ಉಚಿತ ಬಸ್‌ ಪಾಸ್‌ ಇಲ್ಲ
ರಾಜ್ಯದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಈ ವರ್ಷವೂ ಸರಕಾರ ಉಚಿತ ಬಸ್‌ ಪಾಸ್‌ ನೀಡುವ ಸಾಧ್ಯತೆ ಇಲ್ಲ.

''ಹಿಂದಿನ ಸರಕಾರದ ಅವಧಿಯಲ್ಲಿ ಈ ಬಗ್ಗೆ ಭರವಸೆ ನೀಡಲಾಗಿತ್ತು. ಆದರೆ ಸರಕಾರ ಬದಲಾವಣೆಯಾದ ಸಂದರ್ಭದಲ್ಲಿ ಇದನ್ನು ಜಾರಿಗೆ ತರಲು ಸಾಧ್ಯವಾಗಿರಲಿಲ್ಲ. ನಾನು ಈಗಷ್ಟೇ ಇಲಾಖೆ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಈ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಗಮನ ಸೆಳೆಯುತ್ತೇನೆ,'' ಎಂದು ಸಚಿವರು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ