ಆ್ಯಪ್ನಗರ

'ಒಕ್ಕಲಿಗ' ಓಲೈಕೆ: ಕೆಂಪೇಗೌಡ ಪ್ರತಿಮೆ ಸ್ಥಾಪನೆ ಹಿಂದೆ ಬಿಜೆಪಿ ರಾಜಕೀಯ ಲೆಕ್ಕಾಚಾರ

ಬಿಜೆಪಿ ರಾಷ್ಟ್ರೀಯ ನಾಯಕರ ಸೂಚನೆ, ಒಕ್ಕಲಿಗ ಸಮುದಾಯ ಸೆಳೆಯುವ ಯತ್ನ, ಹಳೇ ಮೈಸೂರು ಭಾಗದಲ್ಲಿ ಇಮೇಜ್‌ ಹೆಚ್ಚಳ ತಂತ್ರಗಳು ಈ ನಿರ್ಧಾರದ ಹಿಂದಿವೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿವೆ.

Vijaya Karnataka Web 15 Sep 2019, 9:05 pm
ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಪ್ರತಿಮೆ ಮಾದರಿಯಲ್ಲಿ ಬೃಹತ್‌ ಕೆಂಪೇಗೌಡ ಪ್ರತಿಮೆ ಸ್ಥಾಪನೆ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಮಾಡಿರುವ ಟ್ವೀಟ್‌ ಈಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಹಳೆ ಮೈಸೂರು ಭಾಗದಲ್ಲಿ ಒಕ್ಕಲಿಗ ಮತ ಭದ್ರಪಡಿಸಿಕೊಳ್ಳುವ ಲೆಕ್ಕಾಚಾರ ಈ ನಡೆಯ ಹಿಂದಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.
Vijaya Karnataka Web BS Yediyurappa


ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ 100 ಕೋಟಿ ರೂ. ನೀಡಲು ನಿರ್ಧರಿಸಿರುವ ಜತೆಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಕೆಂಪೇಗೌಡರ ಬೃಹತ್‌ ಪ್ರತಿಮೆ ನಿರ್ಮಿಸಲು ಬಿಜೆಪಿ ಸರ್ಕಾರ ಸಂಕಲ್ಪಿಸಿದೆ ಎಂದು ಸಿಎಂ ಯಡಿಯೂರಪ್ಪ ಟ್ವೀಟ್‌ ಮಾಡಿದ್ದರು.



ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಪರ ಒಕ್ಕಲಿಗರು ಪ್ರತಿಭಟನೆ ನಡೆಸಿದ ಬಳಿಕ ಯಡಿಯೂರಪ್ಪ ಮಾಡಿರುವ ಟ್ವೀಟ್‌ ಈಗ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಒಕ್ಕಲಿಗ ಸಮುದಾಯದ ವಿರುದ್ಧ ನಾವಿಲ್ಲಎಂಬ ಸಂದೇಶ ರವಾನೆ ಮಾಡುವ ಉದ್ದೇಶದಿಂದಲೇ ಸರಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿಅಸ್ತಿತ್ವಕ್ಕೆ ಬಂದಿದ್ದ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಈ ಹಿಂದೆ ಡಿ.ಕೆ. ಶಿವಕುಮಾರ್‌ ಉಪಾಧ್ಯಕ್ಷರಾಗಿದ್ದರು. ಸಿದ್ದರಾಮಯ್ಯ ಮೇಲೆ ಒತ್ತಡ ಹೇರಿ ಪ್ರಾಧಿಕಾರ ರಚನೆ ಮಾಡಿಸುವಲ್ಲಿ ಶಿವಕುಮಾರ್‌ ಯಶಸ್ವಿಯಾಗಿದ್ದರು. ಈ ಮೂಲಕ ಒಕ್ಕಲಿಗ ಸಮುದಾಯಕ್ಕೆ ನಾನೇ ಭವಿಷ್ಯದ ನಾಯಕ ಎಂದು ಬಿಂಬಿಸಿಕೊಳ್ಳುವ ಲೆಕ್ಕಾಚಾರ ಅವರದ್ದಾಗಿತ್ತು. ಮೈತ್ರಿ ಸರಕಾರ ಪತನ ಬಳಿಕ ಯಡಿಯೂರಪ್ಪ ಈ ಪ್ರಾಧಿಕಾರದ ಅಧ್ಯಕ್ಷರಾಗಿದ್ದು, ಉಪಮುಖ್ಯಮಂತ್ರಿ ಡಾ. ಅಶ್ವಥ್‌ ನಾರಾಯಣ್‌ ಉಪಾಧ್ಯಕ್ಷರಾಗಿದ್ದಾರೆ. ಹೀಗಾಗಿ ಪ್ರಾಧಿಕಾರದ ಮೂಲಕ ಕೆಂಪೇಗೌಡರ ಹೆಸರನ್ನು ಚಿರಸ್ಥಾಯಿಯಾಗಿಸುವಂಥ ಚಟುವಟಿಕೆ ನಡೆಸಿ ಈ ಸಮುದಾಯದ ವಿಶ್ವಾಸ ಗಳಿಸುವ ಲೆಕ್ಕಾಚಾರವನ್ನು ಬಿಜೆಪಿ ಹೊಂದಿದೆ ಎಂದು ಹೇಳಲಾಗುತ್ತಿದೆ.

ಬಿಜೆಪಿ ಮೂಲಗಳ ಪ್ರಕಾರ ಶಿವಕುಮಾರ್‌ ಪ್ರಕರಣದ ಬಳಿಕ ಹಳೆ ಮೈಸೂರು ಭಾಗದಲ್ಲಿ ಪಕ್ಷಕ್ಕೆ ಹಿನ್ನಡೆಯಾಗಲಿದೆ. ಇದನ್ನು ತಡೆಯುವ ಕೆಲಸ ಮಾಡಿ ಎಂಬ ಸಂದೇಶವನ್ನು ರಾಷ್ಟ್ರೀಯ ನಾಯಕರು ನೀಡಿದ್ದಾರೆನ್ನಲಾಗಿದೆ. ಹೀಗಾಗಿ ಒಕ್ಕಲಿಗರ ಹೃದಯ ಗೆಲ್ಲುವ ಜತೆಗೆ ಈ ಸ್ಥಳವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ಲೆಕ್ಕಾಚಾರವನ್ನು ಬಿಜೆಪಿ ಹೊಂದಿದೆ.

ಆದರೆ ಸದ್ಯಕ್ಕೆ ಕೆಂಪೇಗೌಡ ಪ್ರಾಧಿಕಾರದಲ್ಲಿ ಇಷ್ಟೊಂದು ಹಣವಿಲ್ಲ. ಕೇವಲ 12 ಕೋಟಿ ರೂ.ನ್ನು ಪ್ರಾತಿನಿಧಿಕವಾಗಿ ನಿಯೋಜನೆ ಮಾಡಲಾಗಿದೆ. ಎಲ್ಲದಕ್ಕಿಂತ ಮುಖ್ಯವಾಗಿ ಡಿಸಿಎಂ ಅಶ್ವಥ್‌ ನಾರಾಯಣ ಕೆಲ ದಿನಗಳ ಹಿಂದೆ ಪ್ರಾಧಿಕಾರದ ಸಭೆ ನಡೆಸಿದ ಸಂದರ್ಭದಲ್ಲಿಈ ವಿಚಾರ ಚರ್ಚೆಗೆ ಬಂದಿಲ್ಲ. ಹಠಾತ್‌ ಆಗಿ ಮುಖ್ಯಮಂತ್ರಿ ಕಾರ್ಯಾಲಯದಿಂದ ಈ ನಿರ್ಧಾರ ಪ್ರಕಟವಾಗಿರುವುದರ ಹಿಂದಿನ ಮರ್ಮದ ಬಗ್ಗೆ ಈಗ ಬಿಜೆಪಿಯಲ್ಲೇ ಚರ್ಚೆ ನಡೆಯುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ