ಬೆಂಗಳೂರು: ದಲಿತ ಸಮುದಾಯದ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ ಪ್ರಸಾದ್ ಸೋಮವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗುತ್ತಿದ್ದು, ಈ ಮೂಲಕ ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಸಮರ ರಂಗೇರಲಿದೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ವಾಗತಿಸಲಿದ್ದಾರೆ. ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ, ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್, ಮಾಜಿ ಡಿಸಿಎಂ ಆರ್.ಅಶೋಕ್ ಸೇರಿದಂತೆ ಪಕ್ಷದ ಹಲವು ನಾಯಕರು ಈ ಸಂದರ್ಭದಲ್ಲಿ ಹಾಜರಿದ್ದು, ಪ್ರಸಾದ್ರನ್ನು ಬರಮಾಡಿಕೊಳ್ಳಲಿದ್ದಾರೆ.
ಕೆಲವು ತಿಂಗಳ ಹಿಂದೆ ಸಂಪುಟ ಪುನಾರಚನೆ ಸಂದರ್ಭದಲ್ಲಿ ತಮಗೆ ಕಂದಾಯ ಸಚಿವ ಸ್ಥಾನದಿಂದ ಕೊಕ್ ನೀಡಿದ ಸಿಎಂ ಸಿದ್ದರಾಮಯ್ಯ ಅವರ ಧೋರಣೆ ವಿರುದ್ಧ ತಿರುಗಿ ಬಿದ್ದಿದ್ದರು. ಶಾಸಕ ಸ್ಥಾನ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಪ್ರಸಾದ್ ಅವರನ್ನು ಸೆಳೆಯಲು ಬಿಜೆಪಿ ಮತ್ತು ಜೆಡಿಎಸ್ ಪ್ರಯತ್ನ ನಡೆಸಿದ್ದವು. ಅಂತಿಮವಾಗಿ, ಅವರು ಬಿಜೆಪಿಯನ್ನು ಆಯ್ಕೆ ಮಾಡಿಕೊಂಡಿದ್ದು, ಸದ್ಯವೇ ಎದುರಾಗಲಿರುವ ಉಪ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ಪ್ರಸಾದ್ ಅವರೊಟ್ಟಿಗೆ ಆಯ್ದ ಬೆಂಬಲಿಗರು ಮಾತ್ರವೇ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದು, ಉಳಿದವರು ಕ್ಷೇತ್ರದ ಸಭೆಗಳಲ್ಲಿ ಬಿಜೆಪಿ ಸೇರಲಿದ್ದಾರೆ. ಇದರೊಂದಿಗೆ, ನಂಜನಗೂಡು ಕ್ಷೇತ್ರದ ಉಪ ಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ಮಧ್ಯೆ ಜಿದ್ದಾಜಿದ್ದಿ ಹೋರಾಟದ ಅಖಾಡವಾಗಿ ರೂಪುಗೊಳ್ಳುವುದು ಖಚಿತವಾಗಿದೆ.
ಕ್ಷೇತ್ರದಲ್ಲಿ ಪ್ರಬಲ ನಾಯಕರಾಗಿರುವ ಪ್ರಸಾದ್ ವಿರುದ್ಧ ಸಮರ್ಥ ಅಭ್ಯರ್ಥಿ ಹುಡುಕಾಟದಲ್ಲಿ ಕಾಂಗ್ರೆಸ್ ತೊಡಗಿದ್ದು, ಇನ್ನೂ ಸ್ಪಷ್ಟತೆ ಮೂಡಿಲ್ಲ. ಆಡಳಿತ ಪಕ್ಷವಾಗಿ ಉಪ ಚುನಾವಣೆ ಗೆಲ್ಲುವ ಪ್ರತಿಷ್ಠೆ ಜತೆಗೆ, ಸ್ವಕ್ಷೇತ್ರಕ್ಕೆ ಹೊಂದಿಕೊಂಡ ನಂಜನಗೂಡಿನಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಿಸಿಕೊಳ್ಳುವುದು ಸಿಎಂ ಸಿದ್ದರಾಮಯ್ಯ ಪಾಲಿಗೆ ದೊಡ್ಡ ಸವಾಲಾಗಿದೆ.
ಉಪ ಚುನಾವಣೆ ಸೋತರೆ ಸಿಎಂ ವರ್ಚಸ್ಸು ಕುಸಿದುಬೀಳುವ ನಿರೀಕ್ಷೆಯಲ್ಲಿ ಕಾಂಗ್ರೆಸ್ನ ಒಂದು ಗುಂಪು ಶ್ರೀನಿವಾಸ ಪ್ರಸಾದ್ ಗೆಲುವನ್ನು ಬಯಸಿದೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಪಕ್ಷದೊಳಗಿನ ಮತ್ತು ಹೊರಗಿನ ವಿರೋಧಿಗಳ ವಿರುದ್ಧ ಹೋರಾಟ ನಡೆಸಿ ಉಪ ಚುನಾವಣೆ ಗೆಲ್ಲುವ ತಂತ್ರಗಾರಿಕೆಯಲ್ಲಿ ಸಿಎಂ ಸಿದ್ದರಾಮಯ್ಯ ತೊಡಗಿದ್ದಾರೆ.