ಆ್ಯಪ್ನಗರ

ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್‌

ಬಿಜೆಪಿಯ ಹಿರಿಯ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭೆ ನೂತನ ಸಭಾಧ್ಯಕ್ಷರಾಗಿ ಅವಿರೋಧ ಆಯ್ಕೆ ಬಹುತೇಕ ಖಚಿತವಾಗಿದ್ದು,ಬುಧವಾರ ಅಧಿಕೃತ ...

Vijaya Karnataka 31 Jul 2019, 5:00 am
ಬೆಂಗಳೂರು: ಬಿಜೆಪಿಯ ಹಿರಿಯ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭೆ ನೂತನ ಸಭಾಧ್ಯಕ್ಷರಾಗಿ ಅವಿರೋಧ ಆಯ್ಕೆ ಬಹುತೇಕ ಖಚಿತವಾಗಿದ್ದು,ಬುಧವಾರ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.
Vijaya Karnataka Web aa98af2e-6c10-4b43-9f0e-c9775c44da92


ಜು.31 ರಂದು ನಿಗದಿಯಾಗಿದ್ದ ಸ್ಪೀಕರ್‌ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ ಮಧ್ಯಾಹ್ನ 12 ಗಂಟೆ ವರೆಗೆ ಕಾಲಾವಕಾಶವಿತ್ತು. ಆಡಳಿತಾರೂಢ ಬಿಜೆಪಿ ಅಭ್ಯರ್ಥಿಯಾಗಿ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ.

ಮೈತ್ರಿ ಸರಕಾರ ಪತನದ ಬಳಿಕ 'ದೋಸ್ತಿ' ಮುಂದುವರಿಕೆ ತೋರಿಕೆಗಾಗಿಯಾದರೂ ಸ್ಪೀಕರ್‌ ಚುನಾವಣೆಯಲ್ಲಿ ಜೆಡಿಎಸ್‌ -ಕಾಂಗ್ರೆಸ್‌ ಮಿತ್ರಪಕ್ಷಗಳು ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಬಹುದು ಎಂಬ ನಿರೀಕ್ಷೆ ಹುಸಿಯಾಯಿತು. ಕೆ.ಆರ್‌.ರಮೇಶ್‌ಕುಮಾರ್‌ ರಾಜೀನಾಮೆಯಿಂದ ಈ ಹುದ್ದೆ ತೆರವಾಗಿತ್ತು.

ಮತ್ತೊಮ್ಮೆ ಮಾಜಿ ಸ್ಪೀಕರ್‌ ಕೆ.ಜಿ.ಬೋಪಯ್ಯ ಸಭಾಧ್ಯಕ್ಷರಾಗಿ ಆಯ್ಕೆ ಮಾಡಲು ಬಿಜೆಪಿ ಬಯಸಿತ್ತು. ಆದರೆ, ಕೊನೇ ಕ್ಷಣದಲ್ಲಿ ವರಿಷ್ಠರ ಸೂಚನೆಯಂತೆ ಕಾಗೇರಿ ಅವರನ್ನು ಆಯ್ಕೆ ಮಾಡಲು ನಿರ್ಧರಿಸಲಾಯಿತು.

6ನೇ ಬಾರಿಗೆ ಶಾಸಕರಾಗಿರುವ ಕಾಗೇರಿ ಅವರು ಸಿಎಂ ಯಡಿಯೂರಪ್ಪ ಸಮ್ಮುಖದಲ್ಲಿ ವಿಧಾನಸಭೆ ಕಾರ್ಯದರ್ಶಿಗೆ ನಾಮಪತ್ರ ಸಲ್ಲಿಸಿದರು. ಜಗದೀಶ ಶೆಟ್ಟರ್‌, ಆರ್‌.ಅಶೋಕ್‌, ಗೋವಿಂದ ಕಾರಜೋಳ, ಕೆ.ಎಸ್‌.ಈಶ್ವರಪ್ಪ ಮತ್ತಿತರರಿದ್ದರು.

ನಾಮಪತ್ರ ಸಲ್ಲಿಕೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾಗೇರಿ ''ಪಕ್ಷದ ಹೈಕಮಾಂಡ್‌ ಹಾಗೂ ನಾಯಕರು ಸಮಾಲೋಚಿಸಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ. ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲು ಸಿದ್ಧನಿದ್ದೇನೆ'' ಎಂದು ತಿಳಿಸಿದರು.

ಕಾಗೇರಿ ಹಿನ್ನೆಲೆ

ಜುಲೈ 10, 1961ರಲ್ಲಿ ಜನಿಸಿದ ವಿಶ್ವೇಶ್ವರ ಅನಂತ ಹೆಗಡೆ ಬರೂರಿನಲ್ಲಿ ಪ್ರಾಥಮಿಕ ಶಿಕ್ಷಣ, ಶಿರಸಿಯಲ್ಲಿ ಪ್ರೌಢ ಶಿಕ್ಷಣ, ಧಾರವಾಡದಲ್ಲಿ ವಾಣಿಜ್ಯ ಪದವಿ ಹಾಗೂ ಶಿರಸಿಯಲ್ಲಿ ಎಲ್‌ಎಲ್‌ಬಿ ವ್ಯಾಸಂಗ ಮಾಡಿದ್ದಾರೆ. ಎಬಿವಿಪಿ ರಾಜ್ಯ ಕಾರ್ಯದರ್ಶಿಯಾಗಿ, 5 ವರ್ಷಗಳ ಕಾಲ ಪೂರ್ಣಾವಧಿ ಕಾರ್ಯಕರ್ತರಾಗಿದ್ದರು. 1981 -82ರಲ್ಲಿ ಅಸ್ಸಾಂ ಉಳಿಸಿ ಚಳವಳಿ, ಸ್ವರ್ಣವಲ್ಲಿ ಶ್ರೀಗಳ ನೇತೃತ್ವದ ಬೇಡ್ತಿ -ಅಘನಾಶಿನಿ ಆಂದೋಲನದಲ್ಲೂ ಸಕ್ರಿಯರಾಗಿದ್ದರು.

1990ರಲ್ಲಿ ಸಕ್ರಿಯ ರಾಜಕಾರಣ ಪ್ರವೇಶಿಸಿದ್ದು, 1994ರವರೆಗೆ ಬಿಜೆಪಿ ಉತ್ತರ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ, ರಾಜ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹಾಗೂ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. 1994ರಲ್ಲಿ ಅಂಕೋಲಾ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾದರು. ಸತತ ಮೂರು ಬಾರಿ ಅಂಕೋಲಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2008, 2013 ಮತ್ತು 2018ರ ವಿಧಾನಸಭೆ ಚುನಾವಣೆಗಳಲ್ಲಿ ಶಿರಸಿ-ಸಿದ್ದಾಪುರ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 2006ರಲ್ಲಿ ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿದ್ದರು. 2008ರಲ್ಲಿ ಬಿಜೆಪಿ ಸರಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ