ಆ್ಯಪ್ನಗರ

ಕೆಪಿಸಿಸಿ ಗಾದಿಗಾಗಿ ಫೈಟ್: ದೆಹಲಿಯಲ್ಲಿ ಸಿದ್ದು ಸಭೆ, ಬೆಂಗಳೂರಿನಲ್ಲೇ ಉಳಿದ ಡಿಕೆಶಿ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಕುರಿತಾಗಿ ದೆಹಲಿಯಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸಿದ್ದರಾಮಯ್ಯ ಭೇಟಿಯಾಗಿದ್ದು ಮಾತುಕತೆ ನಡೆಸುತ್ತಿದ್ದಾರೆ.

Vijaya Karnataka Web 14 Jan 2020, 4:36 pm
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಹೈಕಮಾಂಡ್‌ ಜೊತೆಗೆ ಮಹತ್ವದ ಮಾತುಕತೆ ನಡೆಸುತ್ತಿದ್ದಾರೆ. ಹಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಸೋನಿಯಾ ಗಾಂಧಿ ಆಪ್ತರಾದ ಅಹ್ಮದ್ ಪಟೇಲ್‌ ಹಾಗೂ ಕೆ. ಸಿ ವೇಣುಗೋಪಾಲ್‌ ಅವರನ್ನು ಭೇಟಿಯಾದ ಸಿದ್ದರಾಮಯ್ಯ ಸುದೀರ್ಘವಾಗಿ ಚರ್ಚೆ ನಡೆಸಿದರು.
Vijaya Karnataka Web who will be the next kpcc president meeting at delhi
ಕೆಪಿಸಿಸಿ ಗಾದಿಗಾಗಿ ಫೈಟ್: ದೆಹಲಿಯಲ್ಲಿ ಸಿದ್ದು ಸಭೆ, ಬೆಂಗಳೂರಿನಲ್ಲೇ ಉಳಿದ ಡಿಕೆಶಿ


ಕೆಪಿಸಿಸಿ ಪಟ್ಟಕ್ಕಾಗಿ ರಾಜ್ಯ ಕಾಂಗ್ರೆಸ್‌ನಲ್ಲಿ ಗೊಂದಲ ತೀವ್ರಗೊಂಡ ಹಿನ್ನಲೆಯಲ್ಲಿ ಸಿದ್ದರಾಮಯ್ಯಗೆ ಹೈ ಕಮಾಂಡ್‌ ಬುಲಾವ್ ನೀಡಿತ್ತು. ಮಂಗಳವಾರ ಸಂಜೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಜೊತೆಗೆ ಸಿದ್ದರಾಮಯ್ಯ ಮಾತುಕತೆ ನಡೆಸಲಿದ್ದಾರೆ. ಇದಾದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಘೋಷಣೆ ಆಗುವ ಸಾಧ್ಯತೆ ಇದೆ.

ಕೆಪಿಸಿಸಿ ಗಾದಿಗಾಗಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಎಂಬಿ ಪಾಟೀಲ್‌ ನಡುವೆ ತೀವ್ರ ಪೈಪೋಟಿ ಇದೆ. ಹಿರಿಯ ಕಾಂಗ್ರೆಸ್ ಮುಖಂಡರು ಡಿ.ಕೆ ಶಿವಕುಮಾರ್ ಪರವಾಗಿ ಅಭಿಪ್ರಾಯ ಹೊಂದಿದರೆ ಸಿದ್ದರಾಮಯ್ಯ ಎಂಬಿ ಪಾಟೀಲ್‌ ಪರವಾಗಿ ಒಲವು ಹೊಂದಿದ್ದಾರೆ. ಇದೇ ವಿಚಾರವಾಗಿ ಮಂಗಳವಾರ ದೆಹಲಿಯಲ್ಲಿ ಕೇಂದ್ರ ಮುಖಂಡರ ಜೊತೆಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಡಿಕೆ ಶಿವಕುಮಾರ್ ಅವರ ಭಿನ್ನ ರಾಜಕೀಯ ಶೈಲಿಗೆ ಬದಲಾಗಿ ಪಕ್ಷವನ್ನು ಸಿದ್ದರಾಮಯ್ಯ ಹಿಡಿತದಲ್ಲಿ ಇಟ್ಟುಕೊಳ್ಳುವ ನಿಟ್ಟಿನಲ್ಲಿ ಎಂಬಿ ಪಾಟೀಲ್‌ ಅಥವಾ ಕೃಷ್ಣ ಭೈರೇಗೌಡ ಅವರನ್ನು ಅಧ್ಯಕ್ಷರನ್ನಾಗಿ ಮಾಡುವುದು ಸಿದ್ದರಾಮಯ್ಯ ತಂತ್ರಗಾರಿಕೆಯಾಗಿದೆ.

ಈ ನಿಟ್ಟಿನಲ್ಲಿ ಲಿಂಗಾಯತ ಸಮುದಾಯದ ಎಂಬಿ ಪಾಟೀಲ್‌ ಅವರನ್ನೇ ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡುವ ಕುರಿತಾಗಿ ಸಿದ್ದರಾಮಯ್ಯ ಕೇಂದ್ರ ಮುಖಂಡರಿಗೆ ಮನವರಿಕೆ ಮಾಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆಗಿನ ಮಾತುಕತೆ ಸಂದರ್ಭದಲ್ಲೂ ಈ ಬೇಡಿಕೆಯನ್ನು ಮುಂದಿಡಲಿದ್ದಾರೆ ಎನ್ನುತ್ತಿದೆ ಸಿದ್ದರಾಮಯ್ಯ ಆಪ್ತ ಮೂಲಗಳು. ಆದರೆ ಕೆಪಿಸಿಸಿ ಗಾದಿಗೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಅಂತಿಮ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ.

ಸಿದ್ದರಾಮಯ್ಯ ದೆಹಲಿಯಲ್ಲಿದ್ದರೂ ಬೆಂಗಳೂರಿನಲ್ಲೇ ಉಳಿದ ಡಿಕೆಶಿ

ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ದೆಹಲಿಯಲ್ಲಿ ಹೈಕಮಾಂಡ್ ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ಡಿ.ಕೆ ಶಿವಕುಮಾರ್ ಬೆಂಗಳೂರಿನಲ್ಲೇ ಉಳಿದುಕೊಂಡಿದ್ದಾರೆ.

ಸಿದ್ದರಾಮಯ್ಯ ಆಪ್ತರಾದ ಬೈರತಿ ಸುರೇಶ್, ಭೀಮಾ ನಾಯ್ಕ್, ರಾಘವೇಂದ್ರ ಹಿಟ್ನಾಳ್ ಅವರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮತ್ತೋರ್ವ ಆಕಾಂಕ್ಷಿಯಾದ ಎಂ.ಬಿ ಪಾಟೀಲ್‌ ಇದ್ದರೂ ಡಿಕೆಶಿ ಮಾತ್ರ ದೆಹಲಿಗೆ ತೆರಳದೆ ಬೆಂಗಳೂರಿನಲ್ಲೇ ಉಳಿದಿರುವುದು ಕುತೂಹಲ ಕೆರಳಿಸಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ವಿದೇಶಕ್ಕೆ ತೆರಳಲಿದ್ದು ಅಧ್ಯಕ್ಷ ಸ್ಥಾನ ಆಯ್ಕೆ ಬಹುತೇಕ ಇಂದೇ ಅಂತಿಮಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ