ಆ್ಯಪ್ನಗರ

ಶಿರಾದಲ್ಲಿ ಸ್ಪರ್ಧೆ ವದಂತಿ: ಖಾಲಿಬಿದ್ದ ಕ್ಷೇತ್ರಕ್ಕೆ ಜೋತುಬೀಳುವ ಜಾಯಮಾನ ನನ್ನದಲ್ಲವೇ ಅಲ್ಲ ಎಂದ ನಿಖಿಲ್ ಕುಮಾರಸ್ವಾಮಿ

ರಾಜ್ಯ ಜಾತ್ಯತೀತ ಯುವ ಜನತಾದಳದ ಅಧ್ಯಕ್ಷನಾಗಿರುವ ನಾನು ಪಕ್ಷಕ್ಕಾಗಿ ದುಡಿಯುವಾಗ 'ಹುದ್ದೆ"ಯ ಕಿರೀಟವನ್ನು ಬದಿಗಿರಿಸಿ ಪಕ್ಷದ ಸಾಮಾನ್ಯ ಕಾರ್ಯಕರ್ತನಂತೆ ದಣಿವರಿಯದೆ ದುಡಿಯುತ್ತೇನೆ. ಪಕ್ಷದ ನಿಷ್ಠಾವಂತ ಹಿರಿಯ-ಕಿರಿಯರ ನಿಸ್ವಾರ್ಥ ರಾಜಕೀಯ ನಿಷ್ಠೆಯೇ ಇದಕ್ಕೆ ಮೂಲ ಪ್ರೇರಣೆ.

Vijaya Karnataka Web 15 Aug 2020, 6:13 pm
ಬೆಂಗಳೂರು: ಶಿರಾದ ಶಾಸಕರಾಗಿದ್ದ ಬಿ ಸತ್ಯನಾರಾಯಣ ಅವರ ಸಾವಿನಿಂದ ತೆರವಾಗಿರುವ ಸ್ಥಾನಕ್ಕೆ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎಂಬ ವದಂತಿಗಳು ಎಲ್ಲೆಡೆ ಹರಡುತ್ತಿದೆ. ಈ ರೀತಿ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಇರಾದೆ ಅಥವಾ ಚಿಂತನೆ ಇಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
Vijaya Karnataka Web ನಿಖಿಲ್‌ ಕುಮಾರಸ್ವಾಮಿ
ನಿಖಿಲ್‌ ಕುಮಾರಸ್ವಾಮಿ


ಈ ಸಂಬಂಧ ಪತ್ರಿಕೆ ಪ್ರಕಟಣೆ ನೀಡಿರುವ ನಿಖಿಲ್‌ ಕುಮಾರಸ್ವಾಮಿ ಈ ರೀತಿಯ ಕಪೋಲಕಲ್ಪಿತ ಸುದ್ದಿಗಳನ್ನು ಸಾರ್ವಜನಿಕರು ನಂಬಬಾರದು ಎಂದರು.

ಈ ರೀತಿಯ ಕಪೋಲಕಲ್ಪಿತ ಸುದ್ದಿ- ವದಂತಿಗಳನ್ನು ಯಾರು ಹಬ್ಬಿಸುತ್ತಾರೋ? ಯಾಕೆ ಹಬ್ಬಿಸುತ್ತಾರೋ? ಇದರಿಂದ ಕುತ್ಸಿತ ಮನಸುಗಳಿಗೆ ಆಗುವ ಲಾಭ ಏನೆಂಬುದು ನನಗೆ ತಿಳಿಯದಾಗಿದೆ.

ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಚುನಾವಣೆ ಮೇಲೆ ಕಣ್ಣಿಟ್ಟಿದ್ದೇನೆ ಎಂಬಂತೆ ವದಂತಿಗಳನ್ನು ಪುಂಖಾನುಪುಂಖವಾಗಿ ಹರಿಯ ಬಿಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಾಜಿ ಸಚಿವರು ಹಾಗೂ ಶಾಸಕರಾಗಿದ್ದ ಬಿ. ಸತ್ಯನಾರಾಯಣ ಅಕಾಲಿಕ ನಿಧನರಾಗಿದ್ದರಿಂದ ಶಿರಾ ಕ್ಷೇತ್ರಕ್ಕೆ ಉಪಚುನಾವಣೆ ಅನಿವಾರ್ಯವಾಗಿದೆ. ಹಾಗಂತ ಅಕಾಲಿಕವಾಗಿ ಖಾಲಿಬಿದ್ದ ಕ್ಷೇತ್ರಕ್ಕೆ ಜೋತುಬೀಳುವ ಜಾಯಮಾನ ನನ್ನದಲ್ಲವೇ ಅಲ್ಲ.

2018 ರ ವಿಧಾನಸಭಾ ಚುನಾವಣೆ ವೇಳೆ ಮೂರು ದಿನಗಳ ಕಾಲ ಶಿರಾ ಸೇರಿದಂತೆ ತುಮಕೂರು ಜಿಲ್ಲೆಯಲ್ಲಿ ಪಕ್ಷದ ಪರವಾಗಿ ನಿಷ್ಠಾವಂತ ಕಾರ್ಯಕರ್ತನಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು ನಿಜ. ಹಾಗೆಂದು ಅಲ್ಲಿ ಸ್ಪರ್ಧಿಸುತ್ತೇನೆ ಎಂಬುದಲ್ಲ ಎಂದು ನಿಖಿಲ್‌ ಸ್ಪಷ್ಟಪಡಿಸಿದ್ದಾರೆ.

ಸತ್ಯ ನಾರಾಯಣ ಅವರ ಪಕ್ಷ ನಿಷ್ಠೆ ಮತ್ತು ಬದ್ಧತೆ ಪ್ರಶ್ನಾತೀತ. ಯಾವುದೇ ಆಮಿಷಗಳಿಗೆ ಬಲಿಯಾಗದೆ ಕೊನೆ ಉಸಿರಿರುವವರೆಗೂ ನಂಬಿದ ಪಕ್ಷವನ್ನು ಹೆಸರಿಗೆ ತಕ್ಕಂತೆ 'ಸತ್ಯ"ವಾಗಿಸಿಕೊಂಡಿದ್ದರು. ಉಪಚುನಾವಣೆಗೆ ಯೋಗ್ಯ, ಸಮರ್ಥ ಅಭ್ಯರ್ಥಿಯನ್ನು ಪಕ್ಷದ ವರಿಷ್ಠರು ಆಯ್ಕೆ ಮಾಡಲಿದ್ದಾರೆ. ಅವರ ಪರವಾಗಿಯೂ ಪಕ್ಷದ ಅಭ್ಯರ್ಥಿ ಪರ ಟೊಂಕಕಟ್ಟಿ ನಿಂತು ಪ್ರಚಾರ ಮಾಡಲಿದ್ದೇನೆ. ಇದರಲ್ಲಿ ಯಾರಿಗೂ ಎಳ್ಳಷ್ಟು ಸಂಶಯ ಬೇಡ ಎಂದು ಭರವಸೆ ನೀಡಿದ್ದಾರೆ.

ನಾನು ಶಿರಾ ಉಪಚುನಾವಣೆಯ ಅಭ್ಯರ್ಥಿಯಾಗುವ ಕನಸು ಕಂಡವನಲ್ಲ. ಯಾವುದೇ ಕಾರಣಕ್ಕೂ ನಾನು ಶಿರಾದಲ್ಲಿ ಅಭ್ಯರ್ಥಿ ಆಗುವುದಿಲ್ಲ. ಸತ್ಯನಾರಾಯಣ ಅವರ 'ಚಿತೆ" ಆರುವ ಮುನ್ನವೇ ಉಪ ಚುನಾವಣೆ ಅಖಾಡಕ್ಕೆ ನನ್ನ ಹೆಸರನ್ನು ತೇಲಿ ಬಿಟ್ಟವರ ಬಗ್ಗೆ ಮರುಕವಿದೆ. ಇಂತಹ ಹೀನ ಸಂಸ್ಕೃತಿಯ ರಾಜಕೀಯ ಪರಂಪರೆ ನಮ್ಮದಲ್ಲ. ಶಿರಾ ಉಪಚುನಾವಣೆಗೆ ನನ್ನನ್ನು ಕಣಕ್ಕಿಳಿಸಲು ಒತ್ತಡಗಳಿವೆ ಎಂಬಂತೆ ಹಾಗೂ ರಾಜಕೀಯ ನೆಲೆ ಕಂಡುಕೊಳ್ಳಲು ಈ ಕ್ಷೇತ್ರವನ್ನೇ 'ಚಿಮ್ಮು ಹಲಗೆ" ಮಾಡಿಕೊಳ್ಳುವ ಹವಣಿಕೆಯಲ್ಲಿದ್ದಾರೆ ಎಂಬುದು ಕೇವಲ ವದಂತಿ ಎಂದು ಹೇಳಿದ್ದಾರೆ.

ಅರಿವುಂಟೆ? ತೊಳಗಿ ಬೆಳಗಿ ಪ್ರಜ್ವಲಿಸಿ ಉರಿವ ಬೆಳಗು ಕೆಡುವಲ್ಲಿ ಉಡುಗುತ್ತಿದ್ದೇನೆ ಎಂದು ನುಡಿಯಿತ್ತೆ? ಇಂತಿವ ಹಿಡಿವಲ್ಲಿ ಬಿಡುವಲ್ಲಿ ಮಿಕ್ಕಾದವ ಒಡಗೂಡುವಲ್ಲಿ ಅಡಿಯೇರಿ
ಮತ್ತೆ ಪುನರಪಿ ಅಡಿ ಉಂಟೆ? ತೊಟ್ಟು ಬಿಟ್ಟ ಹಣ್ಣಿಂಗೆ ಮತ್ತಾ ಬುಡದಾಸೆಯೇಕೆ? ನಿಶ್ಚಯವೆಂಬುದು ನಷ್ಟವಾದಲ್ಲಿ ಕಾಮಧೂಮ ಧೂಳೇಶ್ವರನೆಂಬ ಲಕ್ಷವೇತಕ್ಕೆ? - ಮಾದಾರ ಧೂಳಯ್ಯ ಅವರ ರಚನೆಯನ್ನು ನಿಖಿಲ್‌ ಕುಮಾರಸ್ವಾಮಿ ತಮ್ಮ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ