ಆ್ಯಪ್ನಗರ

ಕೊರೊನಾ ಹಿನ್ನೆಲೆ ಜುಲೈ 31ರವರೆಗೆ ಶಿಕ್ಷಕರಿಗೆ ವರ್ಕ್ ಫ್ರಮ್‌ ಹೋಮ್

ಜು. 31ರವರೆಗೆ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಮನೆಯಿಂದಲೇ ಕೆಲಸ ನಿರ್ವಹಿಸಿದರೂ ಕರ್ತವ್ಯದ ಅವಧಿ ಎಂದು ಪರಿಗಣಿಸಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಗುರುವಾರ ಸುತ್ತೋಲೆ ಹೊರಡಿಸಿದೆ.

Vijaya Karnataka 16 Jul 2020, 9:16 pm
ಬೆಂಗಳೂರು: ಕೋವಿಡ್‌-19 ವೈರಸ್‌ ಸೋಂಕು ಮತ್ತಷ್ಟು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಹಾಗೂ ಕೋವಿಡ್‌-19 ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿ ಹೊರತುಪಡಿಸಿ ಉಳಿದೆಲ್ಲ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿ ಜು. 31ರವರೆಗೆ ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
Vijaya Karnataka Web Teacher


ಮಕ್ಕಳು ಬಾರದಿದ್ದರೂ ಶಾಲೆಗೆ ಅನಗತ್ಯವಾಗಿ ಬರುವಂತೆ ಶಿಕ್ಷಣ ಇಲಾಖೆ ಆದೇಶಿಸಿದ್ದರಿಂದ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆ ಕುರಿತು 'ಶಿಕ್ಷಕರು ಸುಮ್ನೆ ಶಾಲೆಗೆ ಬರೋದ್ಯಾಕೆ' ಎಂಬ ಶೀರ್ಷಿಕೆಯಡಿ 'ವಿಜಯ ಕರ್ನಾಟಕ' ವಿಶೇಷ ವರದಿ ಪ್ರಕಟಿಸಿ ಸರಕಾರದ ಗಮನ ಸೆಳೆದಿತ್ತು. ಈ ಸಂಬಂಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿ (ಸೇವೆಗಳು) ಆರ್‌. ಸೋಮಶೇಖರ್‌ ಸುತ್ತೋಲೆ ಹೊರಡಿಸಿದ್ದಾರೆ.

ಜು. 31ರವರೆಗೆ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಮನೆಯಿಂದಲೇ ಕೆಲಸ ನಿರ್ವಹಿಸಿದರೂ ಕರ್ತವ್ಯದ ಅವಧಿ ಎಂದು ಪರಿಗಣಿಸಲಾಗುತ್ತದೆ. ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರನ್ನು ತುರ್ತು ಪರಿಸ್ಥಿತಿಯಲ್ಲಿ ಸಂಪರ್ಕಿಸಲು ಅವರ ದೂರವಾಣಿ ಸಂಖ್ಯೆ/ ಇ-ಮೇಲ್‌ ವಿಳಾಸಗಳನ್ನು ಶಾಲಾ ಆಡಳಿತ ಮಂಡಳಿ/ಶಾಲಾ ಮುಖ್ಯ ಶಿಕ್ಷಕರು ಪಡೆದುಕೊಳ್ಳಲು ಸೂಚಿಸಲಾಗಿದೆ.

ಕೇಂದ್ರ ಸ್ಥಾನ ಬಿಡುವಂತಿಲ್ಲ

ಈ ಅವಧಿಯಲ್ಲಿ ಶಿಕ್ಷಕರು/ ಬೋಧಕೇತರ ಸಿಬ್ಬಂದಿ ಯಾವುದೇ ಕಾರಣಕ್ಕೂ ಕೇಂದ್ರ ಸ್ಥಾನ ಬಿಡುವಂತಿಲ್ಲ. ಸರಕಾರಕ್ಕೆ ಶಿಕ್ಷಕರ/ ಬೋಧಕೇತರ ಸಿಬ್ಬಂದಿ ಸೇವೆ ಅಗತ್ಯವಿದ್ದಾಗ ಆರೋಗ್ಯ ಇಲಾಖೆಯಿಂದ ಹೊರಡಿಸಿರುವ ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಕಡ್ಡಾಯವಾಗಿ ಸೇವೆಗೆ ಹಾಜರಾಗುವಂತೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ಅಲ್ಲದೆ, ಸುರಕ್ಷತೆ ದೃಷ್ಟಿಯಿಂದ ಕೊರೊನಾ ಸೋಂಕಿತರು ಹಾಗೂ ಸೋಂಕಿನ ಅಪಾಯದ ಬಗ್ಗೆ ಸೂಚನೆ ನೀಡಲು ಸಹಕಾರಿಯಾಗಿರುವ ಆರೋಗ್ಯ ಸೇತು ಆ್ಯಪ್‌ ಅನ್ನು ಎಲ್ಲ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ತಮ್ಮ ಮೊಬೈಲ್‌ನಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳಲು ಸೂಚಿಸಲಾಗಿದೆ.

ಒಂದು ವೇಳೆ ಆನ್‌ಲೈನ್‌ ತರಗತಿ ನಡೆಸಿದಲ್ಲಿ ಶಿಕ್ಷಕರು ಕಡ್ಡಾಯವಾಗಿ ಮನೆಯಿಂದಲೇ ಭಾಗವಹಿಸಬಹುದು. ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಆನ್‌ಲೈನ್‌/ ದೂರಸಂಪರ್ಕ/ ತಂತ್ರಜ್ಞಾನ ಆಧಾರಿತ ತರಗತಿಗಳನ್ನು ನಡೆಸುವ ಯೋಜನೆಯಿದ್ದು, ಅಂತಹ ಸಂದರ್ಭದಲ್ಲಿ ತಮಗೆ ವಹಿಸುವ ಕರ್ತವ್ಯಗಳನ್ನು ಚಾಚೂ ತಪ್ಪದೆ ನಿರ್ವಹಿಸುವಂತೆ ನಿರ್ದೇಶನ ನೀಡಲಾಗಿದೆ. ಶಾಲೆ ಪ್ರಾರಂಭವಾಗುವವರೆಗೆ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಉಪಾಹಾರ ಯೋಜನೆಯ ಆಹಾರ ಧಾನ್ಯಗಳು, ಪಠ್ಯ ಪುಸ್ತಕಗಳು, ಸಮವಸ್ತ್ರ ಮುಂತಾದ ಸೌಲಭ್ಯಗಳನ್ನು ವಿತರಿಸುವ ಸಂದರ್ಭದಲ್ಲಿಯೂ ವಹಿಸಿದ ಜವಾಬ್ದಾರಿಯನ್ನು ನಿರ್ವಹಿಸುವಂತೆ ಸೂಚಿಸಲಾಗಿದೆ.

ಈ ನಡುವೆ, ಶಿಕ್ಷಕರು ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟಿರುವುದಕ್ಕಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ. ನಾರಾಯಣಸ್ವಾಮಿ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿಅವರು ಸಚಿವ ಎಸ್‌. ಸುರೇಶ್ ‌ಕುಮಾರ್‌ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ