ಆ್ಯಪ್ನಗರ

ತಂಬಾಕು ಬಳಕೆ: ಜಾಗೃತಿ ಕಾರ್ಯಕ್ರಮಕ್ಕೆ ನಿರ್ದೇಶನ

ತಂಬಾಕು ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಜಾಗೃತಿ ಕಾರ್ಯಕ್ರಮ ಆಯೋಜಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರವೀಣ್‌ ಕುಮಾರ್‌ ನಿರ್ದೇಶನ ನೀಡಿದ್ದಾರೆ.

Vijaya Karnataka 5 Nov 2018, 5:00 am
ಮಡಿಕೇರಿ: ತಂಬಾಕು ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಜಾಗೃತಿ ಕಾರ್ಯಕ್ರಮ ಆಯೋಜಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರವೀಣ್‌ ಕುಮಾರ್‌ ನಿರ್ದೇಶನ ನೀಡಿದ್ದಾರೆ.
Vijaya Karnataka Web
ತಂಬಾಕು ಬಳಕೆ: ಜಾಗೃತಿ ಕಾರ್ಯಕ್ರಮಕ್ಕೆ ನಿರ್ದೇಶನ


ತಮ್ಮ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷ ತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ನಿಷೇಧಿಸಲಾಗಿದೆ. ಆದರೂ, ಹಲವು ಕಡೆಗಳಲ್ಲಿ ಧೂಮಪಾನ ಮಾಡುವುದು ಕಂಡು ಬರುತ್ತದೆ. ಈ ಬಗ್ಗೆ ದಂಡ ಹಾಕುವುದರ ಜತೆಗೆ, ಅರಿವು ಮೂಡಿಸುವುದು ಅಗತ್ಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಭಿಪ್ರಾಯ ವ್ಯಕ್ತಪಡಿಸಿದರು.

ತಂಬಾಕಿನಿಂದ ಮಾಡಿದ ಬೀಡಿ, ಸಿಗರೇಟು ಬಳಸುವವರು, ಜತೆಗೆ ಬಳಸುವವರಿಂದ ಬರುವ ಹೊಗೆಯಿಂದ ಸುತ್ತಮುತ್ತಲಿನವರಿಗೂ ರೋಗ ಹರಡುತ್ತದೆ. ಆದ್ದರಿಂದ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಲಹೆ ಮಾಡಿದರು.

ಧೂಮಪಾನದಿಂದ ಉಂಟಾಗುವ ದುಷ್ಪರಿಣಾಮ ಸಂಬಂಧಿಸಿದಂತೆ ಶಾಲಾ, ಕಾಲೇಜುಗಳು, ಕಚೇರಿಗಳು, ಸಾರ್ವಜನಿಕ ಸ್ಥಳಗಳಲ್ಲಿ ನಾಮಫಲಕ ಅಳವಡಿಸುವುದು. ಈ ಸಂಬಂಧ ಕಂದಾಯ, ಪೊಲೀಸ್‌, ಶಿಕ್ಷ ಣ ಮತ್ತಿತರ ಇಲಾಖೆಗಳು ಕೈಜೋಡಿಸಿ ಅರಿವು ಮೂಡಿಸಬೇಕಿದೆ ಎಂದರು.

ರೇಡಿಯೋ ಕಾರ್ಯಕ್ರಮ ಹಮ್ಮಿಕೊಳ್ಳುವುದು, ಗೋಡೆ ಬರಹ ಬರೆಯುವುದು, ವಿವಿಧ ರೀತಿಯಲ್ಲಿ ಸಂದೇಶಗಳ ಮೂಲಕ ಮಾಹಿತಿ ನೀಡುವುದು, ಸಂತೆ, ಜನಸಂದಣಿ ಪ್ರದೇಶದಲ್ಲಿ ಬೀದಿ ನಾಟಕ ಏರ್ಪಡಿಸುವುದು, ಹಾಡಿಗಳಲ್ಲಿ ವಿಶೇಷ ಅಭಿಯಾನ ಆಯೋಜಿಸುವುದು, ಮತ್ತಿತರ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದರು.

ಉಪ ಪೊಲೀಸ್‌ ವರಿಷ್ಠಾಧಿಕಾರಿ ಸುಂದರರಾಜ್‌ ಮಾಹಿತಿ ನೀಡಿ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ಪತ್ತೆಹಚ್ಚಿ 170 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅಕ್ಟೋಬರ್‌ ಅಂತ್ಯದವರೆಗೆ ದಂಡ ರೂಪದಲ್ಲಿ 99,900 ರೂ. ಸಂಗ್ರಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್‌ ಅವರು ಮಾಹಿತಿ ನೀಡಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾಯ್ದೆಯಂತೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಆ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಸಹಕಾರ ಅಗತ್ಯ ಎಂದು ಹೇಳಿದರು.

ಕಾರ್ಯಕ್ರಮ ಅಧಿಕಾರಿ ಡಾ.ಶಿವಕುಮಾರ್‌ ಮಾಹಿತಿ, ನೀಡಿ ಶಾಲಾ-ಕಾಲೇಜಿನ 100 ಗಜ ವ್ಯಾಪ್ತಿಯಲ್ಲಿ ತಂಬಾಕನ್ನು ಮಾರಾಟ ಮಾಡುವಂತಿಲ್ಲ ಎಂದು ತಿಳಿಸಿದರು.

ಸರಕಾರಿ ಕಚೇರಿಗಳಲ್ಲಿ ಕೋಟ್ಪಾ-2003ರ ಸೆಕ್ಷ ನ್‌ 4ರ ನಾಮಫಲಕಗಳನ್ನು ಅಳವಡಿಸುವುದು, ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಗಳಲ್ಲಿ ಧ್ವನಿವರ್ಧಕ ಮತ್ತು ಪ್ಲಾಷ್‌ ಸ್ಲೈಡ್‌ ಮುಖಾಂತರ ತಂಬಾಕು ನಿಯಂತ್ರಣ ಬಗ್ಗೆ ಮಾಹಿತಿ ನೀಡುವುದು, ನಗರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಕಸ ವಿಲೇವಾರಿ ಮಾಡುವ ವಾಹನಗಳಲ್ಲಿ ತಂಬಾಕು ನಿಷೇಧದ ಬಗ್ಗೆ ಪ್ರಚಾರ ಮಾಡುವುದು, ಎಲ್ಲ ಪ್ರವಾಸಿ ತಾಣಗಳು, ಬಾರ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ನಾಮಫಲಕ ಅಳವಡಿಸಲು ಕ್ರಮಕೈಗೊಳ್ಳಬೇಕಿದೆ ಎಂದು ಮಾಹಿತಿ ನೀಡಿದರು.

ಕೊಡಗು ವೈದ್ಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಕಾರ್ಯಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮಲ್ಲೇಸ್ವಾಮಿ, ಪದವಿ ಪೂರ್ವ ಶಿಕ್ಷ ಣ ಇಲಾಖೆಯ ಉಪ ನಿರ್ದೇಶಕ ಕೆಂಚಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮ ಅಧಿಕಾರಿಗಳಾದ ಡಾ.ನಿಲೇಶ್‌, ಡಾ.ಎ.ಸಿ.ಶಿವಕುಮಾರ್‌, ಜಿಲ್ಲಾ ವಿಶೇಷಚೇತನರ ಅಧಿಕಾರಿ ದೇವರಾಜು, ತಾಲೂಕು ಕಾರ್ಮಿಕ ಅಧಿಕಾರಿ ಯತ್ನಟಿ, ಸಾರ್ವಜನಿಕ ಶಿಕ್ಷ ಣ ಇಲಾಖೆಯ ವಿಷಯ ಪರಿವೀಕ್ಷ ಕ ವಿಶ್ವನಾಥ್‌ ಹಾಜರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ