ಆ್ಯಪ್ನಗರ

ಮಡಿಕೇರಿಗೆ ಕೇಂದ್ರ ತಂಡದ ಅಧಿಕಾರಿಗಳ ಭೇಟಿ

ಅತಿವೃಷ್ಟಿಯಿಂದ ಹಾನಿಗೊಳಗಾದ ಹೆಬ್ಬೆಟ್ಟಗೇರಿ, ದೇವಸ್ತೂರು, ತಂತಿಪಾಲ, ಕಾಲೂರು, ಕುಂದರಕೊಡಿ ಮತ್ತಿತರ ಗ್ರಾಮಗಳಿಗೆ ಕೇಂದ್ರ ತಂಡದ ಅಧಿಕಾರಿಗಳು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Vijaya Karnataka Web 13 Sep 2018, 8:54 pm
ಮಡಿಕೇರಿ: ಅತಿವೃಷ್ಟಿಯಿಂದ ಹಾನಿಗೊಳಗಾದ ಹೆಬ್ಬೆಟ್ಟಗೇರಿ, ದೇವಸ್ತೂರು, ತಂತಿಪಾಲ, ಕಾಲೂರು, ಕುಂದರಕೊಡಿ ಮತ್ತಿತರ ಗ್ರಾಮಗಳಿಗೆ ಕೇಂದ್ರ ತಂಡದ ಅಧಿಕಾರಿಗಳು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Vijaya Karnataka Web coorg floods1


ಕೇಂದ್ರ ಅಧ್ಯಯನ ತಂಡದ ಪ್ರಮುಖರಾದ ಕೇಂದ್ರ ಗೃಹ ಇಲಾಖೆಯ ಜಂಟಿ ಕಾರ್ಯದರ್ಶಿ ಅನಿಲ್ ಮಲ್ಲಿಕ್, ಜಲ ಸಂಪನ್ಮೂಲ ಇಲಾಖೆಯ ಮುಖ್ಯ ಅಧೀಕ್ಷಕ ಎಂಜಿನಿಯರ್ ಜಿತೇಂದ್ರ ಪಾನ್ವರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಪೊನ್ನುಸ್ವಾಮಿ ಅವರು ಅತಿವೃಷ್ಟಿಯಿಂದ ಹಾನಿಗೊಂಡಿರುವ ಬೆಳೆ, ಮನೆ, ಅಂಗನವಾಡಿ, ಶಾಲಾ ಕಟ್ಟಡ ಪ್ರದೇಶಗಳನ್ನು ವೀಕ್ಷಿಸಿದರು. ಹೆಬ್ಬೆಟ್ಟಗೇರಿ ಬಳಿ ಭೂ ಕುಸಿತವಾಗಿರುವುದನ್ನು ಪರಿಶೀಲಿಸಿದರು.

ಸಂಸದ ಪ್ರತಾಪ್ ಸಿಂಹ ಮಾತನಾಡಿ, ಕೇಂದ್ರ ತಂಡವು ಈಗಾಗಲೇ ಎರಡು ದಿನಗಳಿಂದ ತೀವ್ರ ಅತಿವೃಷ್ಟಿ ಪ್ರದೇಶಗಳ ವೀಕ್ಷಿಸಿ ಪರಿಶೀಲನೆ ನಡೆಸಿದ್ದು, ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಲಿದೆ. ಆ ನಿಟ್ಟಿನಲ್ಲಿ ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ಅವರ ನೇತೃತ್ವದಲ್ಲಿ ಜಿಲ್ಲೆಯ ಶಾಸಕರು ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ಪ್ರಕೃತಿ ವಿಕೋಪದಿಂದ ಉಂಟಾಗಿರುವ ನಷ್ಟ ಸಂಬಂಧ ಹೆಚ್ಚಿನ ಹಣ ಬಿಡುಗಡೆ ಮಾಡಬೇಕೆಂದು ಮನವಿ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

ಪ್ರಾಕೃತಿಕ ವಿಕೋಪದಿಂದ ಅಪಾರ ನಷ್ಟ ಉಂಟಾಗಿದ್ದು, ಈ ಸಂಬಂಧ ಕೇಂದ್ರ ತಂಡವನ್ನು ಖುದ್ದಾಗಿ ಭೇಟಿಯಾಗಿ ಮಾಹಿತಿ ನೀಡುವ ಕೆಲಸ ಮಾಡಲಾಗಿದೆ ಎಂದು ಪ್ರತಾಪ್ ಸಿಂಹ ಹೇಳಿದರು.

ಜಿಲ್ಲಾಧಿಕಾರಿ ಪಿ. ಐ. ಶ್ರೀವಿದ್ಯಾ ಮಾತನಾಡಿ ,ಕೇಂದ್ರ ತಂಡವು ಜಿಲ್ಲೆಯ ನಾನಾ ಅತಿವೃಷ್ಟಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿದೆ ಎಂದರು. ಕೇಂದ್ರ ತಂಡದ ಅಧಿಕಾರಿಗಳು ಶುಕ್ರವಾರ ಬೆಂಗಳೂರಿನಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿಯನ್ನು ಭೇಟಿ ಮಾಡಲಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ನಷ್ಟದ ಬಗ್ಗೆ ವರದಿಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕೇಂದ್ರ ತಂಡಕ್ಕೆ ಪ್ರತಿಭಟನೆಯ ಬಿಸಿ

ಈ ನಡುವೆ ದೇವಸ್ತೂರು ಗ್ರಾಮಸ್ಥರಿಂದ ಕೇಂದ್ರ ತಂಡಕ್ಕೆ ಅಡ್ಡಿ ಪಡಿಸಲಾಯಿತು. ದೇವಸ್ತೂರು ಗ್ರಾಮದ ಪರಿಶೀಲನೆ ನಡೆಸದಿರುವ ಆರೋಪದ ಹಿನ್ನೆಲೆಯಲ್ಲಿ ರಸ್ತೆಗೆ ಮರ ಹಾಕಿ ಕೇಂದ್ರ ತಂಡದ ಅಧಿಕಾರಿಗಳು ಇದ್ದ ಜೀಪ್ಗಳನ್ನು ಗ್ರಾಮಸ್ಥರು ತಡೆದರು.

ಕೇಂದ್ರ ಅಧ್ಯಯನ ತಂಡಕ್ಕೆ ಪ್ರತಿಭಟನೆ ಬಿಸಿ ಮುಟ್ಟಿತ್ತು. ಶಾಸಕರು ಹಾಗೂ ಜಿಲ್ಲಾಧಿಕಾರಿಗಳನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡರು. ಪರಿಸ್ಥಿತಿ ಕೈ ಮೀರುತ್ತಿದ್ದಾಗ ಅಧಿಕಾರಿಗಳು ಮಧ್ಯ ಪ್ರವೇಶಿಸಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ