ಮಡಿಕೇರಿ: ತಂಬಾಕು ಸೇವನೆಯಿಂದ ಹಲವು ರೋಗಗಳು ಬರಲಿದ್ದು, ಯಾರು ಸಹ ತಂಬಾಕು ಚಟಕ್ಕೆ ದಾಸರಾಗಬಾರದು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್.ಕೆ.ಜಿ.ಎಂ.ಎಂ. ಮಹಾ ಸ್ವಾಮೀಜಿ ಸಲಹೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್, ಭಾರತೀಯ ದಂತ ವೈದ್ಯಕೀಯ ಸಂಘ, ಕೊಡಗು ದಂತ ಮಹಾವಿದ್ಯಾಲಯ, ವಿರಾಜಪೇಟೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಗಾಂಧಿ ಮೈದಾನದಲ್ಲಿ ಬುಧವಾರ ನಡೆದ ವಿಶ್ವ ತಂಬಾಕು ಮುಕ್ತ ದಿನಾಚರಣೆಯ ತಂಬಾಕು ವಿರೋಧಿ ಜಾಥಾ ಉದ್ಘಾಟನೆಗೂ ಮೊದಲು ಮಾತನಾಡಿದರು.
ತಂಬಾಕು ಮುಕ್ತ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು. ಹಾಗಾದಾಗ ಮಾತ್ರ ಆರೋಗ್ಯ ಕಾಪಾಡಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ತಂಬಾಕು ಸೇವನೆಯಿಂದ ಉಂಟಾಗುವ ರೋಗಗಳ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಅಗತ್ಯ, ಧೂಮಪಾನ ಮಾಡುವುದರಿಂದ ರಕ್ತದ ಒತ್ತಡ ಹೆಚ್ಚಾಗುತ್ತದೆ. ಶ್ವಾಸಕೋಶ ತೊಂದರೆ, ಕೆಮ್ಮು, ಉಸಿರಾಟ ತೊಂದರೆ ಉಂಟಾಗಲಿದೆ. ಹೃದಯ ಸಂಬಂಧಿ ಕಾಯಿಲೆಗಳು ಉಂಟಾಗಲಿವೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಮಾತನಾಡಿ, ''ತಂಬಾಕು ವಿರೋಧಿ ದಿನಾಚರಣೆಯನ್ನು ಕಳೆದ ಮೂರು ದಶಕಗಳಿಂದಲೂ ಆಚರಿಸಿಕೊಂಡು ಬರಲಾಗುತ್ತಿದೆ. ತಂಬಾಕು ದುಷ್ಪರಿಣಾಮಗಳ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಅಗತ್ಯ. ಯುವಜನರು ತಂಬಾಕು ಸೇವನೆಗೆ ತುತ್ತಾಗುತ್ತಿದ್ದಾರೆ. ವಿಶ್ವದಲ್ಲಿ ಸುಮಾರು 6 ಬಿಲಿಯನ್ ಜನರು ತಂಬಾಕು ಸೇವನೆಯಿಂದ ನಾನಾ ರೋಗಗಳಿಗೆ ತುತ್ತಾಗಿದ್ದಾರೆ'' ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಮಾತನಾಡಿ, ''ಜಿಲೆಯಲ್ಲಿ ಕಳೆದ ಏಪ್ರಿಲ್ ಅಂತ್ಯದವರೆಗೆ 1500 ಪ್ರಕರಣಗಳನ್ನು ದಾಖಲಿಸಿ 2 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ'' ಎಂದರು.
ಕೊಡಗು ದಂತ ವೈದ್ಯ ಕಾಲೇಜಿನ ವಿದ್ಯಾರ್ಥಿಗಳು ಆಯೋಜಿಸಿದ್ದ ಗೊಂಬೆಯಾಟದ ಮೂಲಕ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.
ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಕುರಿತು ವಿಶೇಷ ಪ್ರಚಾರ ಅಭಿಯಾನಕ್ಕೆ ಇದೇ ಸಂದರ್ಭದಲ್ಲಿ ಗಣ್ಯರು ಚಾಲನೆ ನೀಡಿದರು.
ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಡಿ.ಪವನೇಶ್, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ಸೆಲ್ವ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಒ.ಆರ್.ಶ್ರೀರಂಗಪ್ಪ, ಭಾರತೀಯ ವೈದ್ಯಕೀಯ ಸಂಘದ ಮೋಹನ್ ಅಪ್ಪಾಜಿ, ಸಾರ್ವಜನಿಕ ಶಿಕ್ಷ ಣ ಇಲಾಖೆ ಉಪ ನಿರ್ದೇಶಕ ಮಲ್ಲೇಸ್ವಾಮಿ, ತಂಬಾಕು ನಿಯಂತ್ರಣ ಸಮಿತಿಯ ಡಾ.ಜಾನ್ ಕೆನಡಿ, ವಿರಾಜಪೇಟೆಯ ಕೊಡಗು ದಂತ ಮಹಾವಿದ್ಯಾಲಯದ ಡಾ.ಸುನಿಲ್ ಮುದ್ದಯ್ಯ, ಕಾನೂನು ಸೇವಾ ಪ್ರಾಧಿಕಾರದ ಜಯಪ್ಪ ಇತರರು ಇದ್ದರು.