ಆ್ಯಪ್ನಗರ

ದಲಿತರಿಗೆ ದೇವಾಲಯ ಪ್ರವೇಶ ನಿರಾಕರಣೆ

ದಲಿತರಿಗೆ ದೇವಾಲಯ ಪ್ರವೇಶ ನಿರಾಕರಿಸಿದ ಹಿನ್ನೆಲೆಯಲ್ಲಿ ಮೇಲ್ವರ್ಗ ಹಾಗೂ ದಲಿತರ ನಡುವೆ ಮಾತಿನ ಚಕಮಕಿ ನಡೆದು ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾದ ಘಟನೆ ತಾಲೂಕಿನ ಗುಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.

Vijaya Karnataka 4 Jul 2019, 3:20 pm
ಕೋಲಾರ: ದಲಿತರಿಗೆ ದೇವಾಲಯ ಪ್ರವೇಶ ನಿರಾಕರಿಸಿದ ಹಿನ್ನೆಲೆಯಲ್ಲಿ ಮೇಲ್ವರ್ಗ ಹಾಗೂ ದಲಿತರ ನಡುವೆ ಮಾತಿನ ಚಕಮಕಿ ನಡೆದು ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾದ ಘಟನೆ ತಾಲೂಕಿನ ಗುಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.
Vijaya Karnataka Web no entry for dalits to temple
ದಲಿತರಿಗೆ ದೇವಾಲಯ ಪ್ರವೇಶ ನಿರಾಕರಣೆ


ಗ್ರಾಮದಲ್ಲಿನ ಆಂಜನೇಯ ಸ್ವಾಮಿ ದೇವಾಲಯವನ್ನು ಇತ್ತೀಚೆಗೆ ಜೀರ್ಣೋದ್ಧಾರ ಮಾಡಲಾಗಿದ್ದು, ಗ್ರಾಮದಲ್ಲಿ ದೇವರ ಮೆರವಣಿಗೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ದಲಿತರ ಕೇರಿಗೆ ದೇವರ ಮೆರವಣಿಗೆ ಹೆಚ್ಚಿನ ಸಮಯ ಮಾಡಿದ್ದರೆಂದು ಸವರ್ಣೀಯರು ವಾಗ್ವಾದಕ್ಕಿಳಿದಿದ್ದಾರೆ ಎನ್ನಲಾಗಿದೆ.

ಇದರಿಂದ ರೊಚ್ಚಿಗೆದ್ದ ದಲಿತ ಯುವಕರು ಹಲವಾರು ವರ್ಷಗಳಿಂದ ದಲಿತರನ್ನು ಗ್ರಾಮದಲ್ಲಿ ಶೋಷಣೆಗೆ ಒಳಪಡಿಸಲಾಗಿದೆ. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿಯೇ ದಲಿತರ ಪ್ರವೇಶಕ್ಕೆ ಅವಕಾಶ ನೀಡುವಾಗ, ಗ್ರಾಮದಲ್ಲಿ ದೇವಾಲಯ ಪ್ರವೇಶಕ್ಕೆ ಏಕೆ ಅವಕಾಶ ನೀಡುವುದಿಲ್ಲವೆಂದು ತಿರುಗಿಬಿದ್ದಿದ್ದಾರೆ. ಜತೆಗೆ ದಲಿತರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡಲೇಬೇಕೆಂದು ಪಟ್ಟುಹಿಡಿದ ಪರಿಣಾಮ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ದಲಿತರಿಗೆ ದೇವಾಲಯ ನಿರಾಕರಿಸಿರುವ ಬಗ್ಗೆ ದಲಿತ ಸಂಘಟನೆಗಳು ಕೂಡಲೇ ತಾಲೂಕಿನ ತಹಸೀಲ್ದಾರ್‌, ಪೊಲೀಸ್‌ ಇನ್ಸ್‌ಪೆಕ್ಟರ್‌ ಹಾಗೂ ವೃತ್ತ ನಿರೀಕ್ಷರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಗಮನಕ್ಕೆ ಬಂದಿದ್ದಾರೆ. ಅಧಿಕಾರಿಗಳು ಬುಧವಾರ ಗ್ರಾಮಕ್ಕೆ ತೆರಳಿ ಎರಡು ಗುಂಪುಗಳ ಮುಖಂಡರೊಂದಿಗೆ ಶಾಂತಿ ಸಭೆ ನಡೆಸಿದ್ದಾರೆ.

ಶಾಂತಿ ಸಭೆಯಲ್ಲಿ ಅಧಿಕಾರಿಗಳು ಭಾರತದ ಸಂವಿಧಾನದಂತೆ ಪ್ರತಿಯೊಬ್ಬರಿಗೂ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡಬೇಕು. ದೇವಾಲಯ ಪ್ರವೇಶಕ್ಕೆ ಅವಕಾಶ ನೀಡದಿದ್ದರೆ ಕಾನೂನಾತ್ಮಕ ಕ್ರಮಗಳ ಮೊರೆ ಹೋಗಬೇಕಾಗುತ್ತದೆ ಎಂದು ಸವರ್ಣಿಯರ ಮನವೊಲಿಸಲಾಯಿತು. ಕೊನೆಗೆ ಎರಡು ಗುಂಪುಗಳ ಸರ್ವಾನುಮತದಿಂದ ದಲಿತರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಎಲ್ಲರೂ ಭಾತೃತ್ವ ಹಾಗೂ ಸಾಮರಸ್ಯದಿಂದ ಇರುವಂತೆ ತಿಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ತಾಲೂಕಿನ ತಹಸೀಲ್ದಾರ್‌, ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಪೊಲೀಸ್‌ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಎರಡು ಗುಂಪುಗಳೊಂದಿಗೆ ಶಾಂತಿ ಸಭೆ ನಡೆಸಿದ್ದು, ದಲಿತರಿಗೆ ದೇವಾಲಯ ಪ್ರವೇಶ ಕಲ್ಪಿಸಲು ಸರ್ವಾನುಮತದಿಂದ ತೀರ್ಮಾನ ಕೈಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ವರದಿ ನೀಡುವಂತೆ ಸಹಾಯಕ ನಿರ್ದೇಶಕರಿಗೆ ಆದೇಶಿಸಿದ್ದೇನೆ.

- ಎಚ್‌.ಎಸ್‌.ಸಿಂಧು, ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ