ಆ್ಯಪ್ನಗರ

ಹುಲಿಗಿ ಹುಲಿಗೆಮ್ಮ ದೇವಿ ಮಹಾ ರಥೋತ್ಸವ

ಉತ್ತರ ಕರ್ನಾಟಕದಲ್ಲೇ ಪ್ರಸಿದ್ಧವಾದ ಹುಲಿಗಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ, ಲಕ್ಷಾಂತರ ಭಕ್ತ ಸಮೂಹದ ‘ಉಧೋ..ಉಧೋ...’ ಜಯ ಘೋಷಣೆ ಮಧ್ಯೆ ಬುಧವಾರ ವಿಜೃಂಭಣೆಯಿಂದ ಜರುಗಿತು.

Vijaya Karnataka 10 May 2018, 12:00 am
ಕೊಪ್ಪಳ: ಉತ್ತರ ಕರ್ನಾಟಕದಲ್ಲೇ ಪ್ರಸಿದ್ಧವಾದ ಹುಲಿಗಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ, ಲಕ್ಷಾಂತರ ಭಕ್ತ ಸಮೂಹದ ‘ಉಧೋ..ಉಧೋ...’ ಜಯ ಘೋಷಣೆ ಮಧ್ಯೆ ಬುಧವಾರ ವಿಜೃಂಭಣೆಯಿಂದ ಜರುಗಿತು.
Vijaya Karnataka Web KPL-KPL09PHOTO04


ದೇವಾಲಯದಿಂದ ಪಲ್ಲಕ್ಕಿಯಲ್ಲಿ ಶ್ರೀ ಹುಲಿಗೆಮ್ಮ ದೇವಿ ಮೂರ್ತಿಯನ್ನು ತಂದು ರಥದಲ್ಲಿ ಪ್ರತಿಷ್ಠಾಪಿಸುತ್ತಿದ್ದಂತೆ ಪೂಜೆ ಸಲ್ಲಿಸಿ, ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಹೂಗಳಿಂದ ಅಲಂಕೃತವಾದ ರಥವನ್ನು ಭಕ್ತರು ಎಳೆದರು. ಹೂ, ಬಾಳೆ ಹಣ್ಣು, ಉತ್ತತ್ತಿ ಎಸೆದು ಭಕ್ತಿ ಸಮರ್ಪಿಸಿದರು. ಸಕಲ ವಾದ್ಯ ವೈಭವ ಸಾಥ್ ನೀಡಿದವು. ರಥ ಪಾದಗಟ್ಟೆ ತಲುಪುವವರೆಗೆ ದಾರಿಯುದ್ದಕ್ಕೂ ಜಯ ಘೋಷ ಮುಗಿಲು ಮುಟ್ಟಿತು. ಅಲ್ಲಿಂದ ಮೂಲ ಸ್ಥಳಕ್ಕೆ ರಥ ಆಗಮಿಸಿದಾಗ ಭಕ್ತರು ಚಪ್ಪಾಳೆ ತಟ್ಟಿ ಗೌರವ ಸಲ್ಲಿಸಿದರು. ನಂತರ ದೇವಿಯ ಮೂರ್ತಿಯನ್ನು ದೇವಾಲಯ ಸುತ್ತ ಪ್ರದಕ್ಷಿಣೆ ಹಾಕಿಸಿ ಗರ್ಭಗುಡಿಯಲ್ಲಿ ಸಾಂಪ್ರದಾಯಿಕವಾಗಿ ಮರಳಿ ಪ್ರತಿಷ್ಠಾಪಿಸಲಾಯಿತು.

ಮೇ 10ಹಾಗೂ 11 ರಂದು ಅಗ್ನಿಕುಂಡ ಸೇರಿ ನಾನಾ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಮುಂಜಾಗ್ರತೆ ಕ್ರಮವಾಗಿ ಕೊಪ್ಪಳ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ದೇವಾಲಯ ಆಡಳಿತ ಮಂಡಳಿ ಸಿಇಒ ಸಿ.ಎಸ್.ಚಂದ್ರಮೌಳಿ, ರಥೋತ್ಸವದ ಉಸ್ತುವಾರಿ ವಹಿಸಿದ್ದರು. ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ಕೊರತೆ ಕಂಡುಬಂತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ