ಕೊಪ್ಪಳ | ಹೊಟ್ಟೆ ನೋವು, ವಾಂತಿಯಿಂದ ವಿದ್ಯಾರ್ಥಿನಿಯರ ನರಳಾಟ; ಅವಧಿ ಮೀರಿದ ಆಹಾರವೇ ಕಾರಣ?

ಹೇಮಂತ್ ಕುಮಾರ್ ಎಸ್ | Vijaya Karnataka Web 18 Nov 2022, 10:08 pm
ಕೊಪ್ಪಳ: ಶಿಕ್ಷಣಕ್ಕಾಗಿ ತಂದೆ-ತಾಯಿಯನ್ನು ಬಿಟ್ಟು ಸರಕಾರಿ ಹಾಸ್ಟೆಲ್‌ನಲ್ಲಿರುವ ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಬೇಕು. ಆದರೆ, ಕಳಪೆ ಆಹಾರ ನೀಡಿರುವ ಹಿನ್ನೆಲೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಕೊಪ್ಪಳದಲ್ಲಿ ನಡೆದಿದೆ. ಅಸ್ವಸ್ಥ ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಟೆಲ್‌ನ ಅವ್ಯವಸ್ಥೆ ಹಾಗೂ ಮಕ್ಕಳ ಆನಾರೋಗ್ಯಕ್ಕೆ ಕಾರಣವನ್ನು ಹುಡುಕುವ ತನಿಖೆ ಆರಂಭಿಸಲಾಗಿದೆ.

ಕೊಪ್ಪಳ ನಗರದಲ್ಲಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವಸತಿ ನಿಲಯದ 20 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಪೊಲೀಸ್ ಠಾಣೆಯ ಬಳಿ ಇರುವ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ.‌ ಗುರುವಾರ ಮಧ್ಯಾಹ್ನದ ವೇಳೆ ಕೆಲ ವಿದ್ಯಾರ್ಥಿನಿಯರಿಗೆ ವಾಂತಿ, ಜ್ವರ ಹಾಗೂ ತಲೆನೋವು ಕಾಣಿಸಿಕೊಂಡಿದೆ. ಕೆಲ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬಳಿಕ ಮತ್ತಷ್ಟು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಅವರನ್ನು ಸಂಜೆ ವೇಳೆಗೆ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆಗೆ ದಾಖಲಿಸಿದ್ದಾರೆ.

ಇದು ಫುಡ್ ಪಾಯ್ಸನ್‌ನಿಂದ ಆಗಿದೆಯೋ ನಿಂದಾಗಿದೆಯೋ ಅಥವಾ ಬೇರೆ ಕಾರಣವಿದೆ ಎಂಬುದು ಇನ್ನೂ ತಿಳಿದಿಲ್ಲ. ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿನಿಯರ ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದ್ದು ವರದಿ ಬಳಿಕ ಕಾರಣವೇನು ಎಂಬುದು ತಿಳಿಯಲಿದೆ. ಘಟನೆ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಚಿದಾನಂದಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ಇಂದು ಆಹಾರ ಇಲಾಖೆಯ ಅಧಿಕಾರಿಗಳು ಹಾಸ್ಟೆಲ್ ನಲ್ಲಿ ಆಹಾರ ಗುಣಮಟ್ಟ ಪರಿಶೀಲಿಸಿದ್ದಾರೆ.‌ ಇಲ್ಲಿ ನೀಡಿರುವ ಹಾಲು ಅವಧಿ ಮೀರಿದ್ದು ಕಂಡು ಬಂದಿದೆ. ಉಳಿದ ಆಹಾರ ಹಾಗೂ ಕುಡಿವ ನೀರನ್ನು ಸಹ ಪರಿಶೀಲಿಸಿದ್ದಾರೆ. ಕೊಪ್ಪಳ‌ ವೈದ್ಯರು ಉಳಿದ 70 ವಿದ್ಯಾರ್ಥಿನಿಯರ ಆರೋಗ್ಯ ತಪಾಸಣೆ ನಡೆಸಿದ್ದಾರೆ.

ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಸುಂದರೇಶಬಾಬು ಭೇಟಿ ನೀಡಿದ್ದಾರೆ. ವಿದ್ಯಾರ್ಥಿನಿಯರ ಆರೋಗ್ಯದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
Loading ...