ಆ್ಯಪ್ನಗರ

ರೈತರ ಹೋರಾಟಕ್ಕೆ ಮಣಿದ ಸರಕಾರ: ನಾಲೆಗೆ ನೀರು ಬಿಡಲು ನಿರ್ಧಾರ

ಜಿಲ್ಲೆಯ ರೈತರ ಹೋರಾಟಕ್ಕೆ ಕಡೆಗೂ ಮಣಿದಿರುವ ರಾಜ್ಯ ಸರಕಾರ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅನುಮತಿ ಮೇರೆಗೆ ಒಣಗುತ್ತಿರುವ ಬೆಳೆಗಳ ರಕ್ಷಣೆ ಮತ್ತು ಜನಜಾನುವಾರುಗಳ ಕುಡಿಯುವ ನೀರಿಗಾಗಿ ನಾಲೆಗಳಲ್ಲಿ ನೀರು ಹರಿಸಲು ಕ್ರಮ ವಹಿಸಿದೆ.

Vijaya Karnataka 16 Jul 2019, 5:00 am
ಮಂಡ್ಯ: ಜಿಲ್ಲೆಯ ರೈತರ ಹೋರಾಟಕ್ಕೆ ಕಡೆಗೂ ಮಣಿದಿರುವ ರಾಜ್ಯ ಸರಕಾರ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅನುಮತಿ ಮೇರೆಗೆ ಒಣಗುತ್ತಿರುವ ಬೆಳೆಗಳ ರಕ್ಷಣೆ ಮತ್ತು ಜನಜಾನುವಾರುಗಳ ಕುಡಿಯುವ ನೀರಿಗಾಗಿ ನಾಲೆಗಳಲ್ಲಿ ನೀರು ಹರಿಸಲು ಕ್ರಮ ವಹಿಸಿದೆ.
Vijaya Karnataka Web govt slams farmers struggle the decision to leave the water to the channel
ರೈತರ ಹೋರಾಟಕ್ಕೆ ಮಣಿದ ಸರಕಾರ: ನಾಲೆಗೆ ನೀರು ಬಿಡಲು ನಿರ್ಧಾರ


ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್‌.ಪುಟ್ಟರಾಜು ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಸೋಮವಾರ ನಡೆದ ಕೆಆರ್‌ಎಸ್‌ ನೀರಾವರಿ ಸಲಹಾ ಸಮಿತಿ(ಐಸಿಸಿ) ಸಭೆಯಲ್ಲಿ ಪ್ರಾಧಿಕಾರದ ಷರತ್ತಿಗೊಳಪಟ್ಟು ನಾಲೆಗಳಿಗೆ ನೀರು ಹರಿಸುವ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಅದರಂತೆ ಜು. 16ರ ರಾತ್ರಿಯಿಂದ 25ರವರೆಗೆ ಹತ್ತು ದಿನ ನಾಲೆಯಲ್ಲಿ ನೀರು ಹರಿಯಲಿದೆ.

ಒಣಗುತ್ತಿರುವ ಬೆಳೆಗಳ ರಕ್ಷಣೆಗಾಗಿ ನಾಲೆಗಳಲ್ಲಿ ನೀರು ಹರಿಸುವಂತೆ ರೈತರು ಹಾಗೂ ನಾನಾ ಸಂಘಟನೆಗಳ ಮುಖಂಡರು ಒಂದು ತಿಂಗಳಿನಿಂದಲೂ ಹೋರಾಟದ ಹಾದಿ ಹಿಡಿದಿದ್ದರು. ಇದೀಗ ನಾಲೆಗಳಿಗೆ ನೀರು ಹರಿಸುವ ಐಸಿಸಿ ತೀರ್ಮಾನದೊಂದಿಗೆ ರೈತರ ಹೋರಾಟಕ್ಕೆ ಫಲ ದೊರೆತಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಪ್ರತಿನಿಧಿಗಳನ್ನು ಒಳಗೊಂಡಂತೆ ಐಸಿಸಿ ಸಭೆ ನಡೆಸಿ ನಾಲೆ ಮತ್ತು ನದಿಗೆ ನೀರು ಹರಿಸಲು ನಿಲುವು ಕೈಗೊಳ್ಳಲಾಯಿತು.

ಸಚಿವರಾದ ಡಿ.ಸಿ.ತಮ್ಮಣ್ಣ, ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್‌, ಶಾಸಕರಾದ ಎಂ.ಶ್ರೀನಿವಾಸ್‌, ರವೀಂದ್ರ ಶ್ರೀಕಂಠಯ್ಯ, ಸುರೇಶ್‌ಗೌಡ, ಅನ್ನದಾನಿ, ಮರಿತಿಬ್ಬೇಗೌಡ, ಕೆ.ಟಿ.ಶ್ರೀಕಂಠೇಗೌಡ, ಎನ್‌.ಅಪ್ಪಾಜಿಗೌಡ ಹಾಗೂ ತಿ.ನರಸೀಪುರ, ಪಿರಿಯಾಪಟ್ಟಣ ಶಾಸಕರು, ಜಿಲ್ಲಾಧಿಕಾರಿ ಎನ್‌.ಮಂಜುಶ್ರೀ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಶಿವಪ್ರಕಾಶ್‌, ಜಿ.ಪಂ. ಸಿಇಒ ಕೆ.ಯಾಲಕ್ಕಿಗೌಡ ಹಾಗೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಹೊಸ ಬೆಳೆ ಬೇಡ: ಜಲಾಶಯದಲ್ಲಿ ಲಭ್ಯವಿರುವ ಅತ್ಯಲ್ಪ ಪ್ರಮಾಣದ ನೀರನ್ನು ಬೆಳೆದು ನಿಂತಿರುವ ಬೆಳೆಗಳ ರಕ್ಷಣೆ ಹಾಗೂ ಕುಡಿಯುವ ನೀರಿಗಾಗಿ ನಾಲೆಗಳಿಗೆ ಹತ್ತು ದಿನ ಹರಿಸಲು ಐಸಿಸಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕೆಆರ್‌ಎಸ್‌(ಆಧುನೀಕರಣ ಮತ್ತು ಮಧ್ಯಮ) ನೀರಾವರಿ ಯೋಜನಾ ವೃತ್ತದ ಅಧೀಕ್ಷಕ ಎಂಜಿನಿಯರ್‌ ಬಿ.ಎನ್‌.ರಾಮಕೃಷ್ಣ ತಿಳಿಸಿದ್ದಾರೆ.

ಜು.16ರಿಂದ 25ರವರೆಗೆ ನಾಲೆಗಳಿಗೆ ನೀರು ಹರಿಸಲಾಗುತ್ತದೆ. ರೈತ ಬಾಂಧವರು ಅಚ್ಚುಕಟ್ಟು ಪರದೇಶದಲ್ಲಿ ಯಾವುದೇ ಹೊಸ ಬೆಳೆಗಳನ್ನು ಬೆಳೆಯದಂತೆ ಹಾಗೂ ಹೊಸ ಬೆಳೆಗಳಿಗೆ ಪೂರ್ವಸಿದ್ಧತೆ ಮಾಡಿಕೊಳ್ಳಬಾರದು. ಯಾವುದೇ ಹೊಸ ಬೆಳೆಗಳನ್ನು ಬೆಳೆದು ಹಾನಿಯಾದರೆ ಅದಕ್ಕೆ ನೀರಾವರಿ ಇಲಾಖೆ ಹೊಣೆಯಾಗುವುದಿಲ್ಲ ಎಂದು ಎಚ್ಚರಿಸಿದ್ದಾರೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ