ಆ್ಯಪ್ನಗರ

ಸೇವಾ ಭದ್ರತೆಗೆ ಒತ್ತಾಯಿಸಿ ಆರೋಗ್ಯ ಇಲಾಖೆ ಗುತ್ತಿಗೆ ನೌಕರರಿಂದ ಪ್ರತಿಭಟನೆ

ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ವೇದಿಕೆ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.

Vijaya Karnataka 25 Oct 2018, 9:41 pm
ಮಂಡ್ಯ: ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ವೇದಿಕೆ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.
Vijaya Karnataka Web MDY-MDY25R04


ನಗರದ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಯಿಂದ ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಸರ್‌.ಎಂ.ವಿಶ್ವೇಶ್ವರಯ್ಯ ಪ್ರತಿಮೆವರೆಗೂ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಲಾಖೆಯಲ್ಲಿ ಕಾಯಂಗಿಂತ ಗುತ್ತಿಗೆ ನೌಕರರ ಸಂಖ್ಯೆ ಹೆಚ್ಚಿದ್ದು, ಹೆಚ್ಚಿನ ಒತ್ತಡದಲ್ಲಿ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸುಪ್ರೀಂ ಕೋರ್ಟ್‌ 2016ರಲ್ಲಿ ನೀಡಿರುವ ಆದೇಶದ ಪ್ರಕಾರ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಒದಗಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹಕ್ಕೊತ್ತಾಯಗಳು

ಆರೋಗ್ಯ ಕ್ಷೇತ್ರದ ಬಜೆಟ್‌ ಅನ್ನು ಶೇ.15ರಷ್ಟು ಹೆಚ್ಚಿಸಬೇಕು. ಇದಕ್ಕೆ ಅಗತ್ಯ ಇರುವ ಆರ್ಥಿಕ ನೆರವನ್ನು ಕೇಂದ್ರ ಸರಕಾರ ನೀಡಬೇಕು. ಮಧ್ಯವರ್ತಿಗಳಿಲ್ಲದೇ ನೇರವಾಗಿ ಇಲಾಖೆಯಿಂದ ವೇತನ ಪಾವತಿಯಾಗಬೇಕು.

ಜ್ಯೋತಿ ಸಂಜೀವಿನಿ ವೈದ್ಯಕೀಯ ಯೋಜನೆಯನ್ನು ಗುತ್ತಿಗೆ ನೌಕರರಿಗೂ ನೀಡಬೇಕು. ಹಾಲಿ ಗುತ್ತಿಗೆ ವ್ಯವಸ್ಥೆಯಲ್ಲಿರುವ ಎಲ್ಲ ಹುದ್ದೆಗಳನ್ನು ಕಾಯಂ ಹುದ್ದೆಗಳಾಗಿ ಸೃಷ್ಟಿಸಬೇಕು. ಕಾಯಂ ನೇಮಕಾತಿಯ ಕಾರಣ ಹೇಳಿ ಸ್ಥಳ ಬದಲಾವಣೆ ಮಾಡಬಾರದು. ಕಳೆದೊಂದು ವರ್ಷದಲ್ಲಿ ಸೇವೆಯಿಂದ ತೆಗೆದಿರುವವರನ್ನು ಮತ್ತೆ ಅದೇ ಹುದ್ದೆಗೆ ಮರು ನೇಮಕ ಮಾಡಿಕೊಳ್ಳಬೇಕು. ಶೋಷಣೆ ತಪ್ಪಿಸಲು ರಾಜ್ಯ, ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸಬೇಕು. ಗ್ರೂಪ್‌ ಡಿ ನೌಕರರಿಗೆ ವಿಶೇಷ ಸೇವಾ ಭತ್ಯೆ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ನಾಗರಾಜು, ಅಜಯ್‌ಕುಮಾರ್‌, ಅರುಣ, ಚೈತ್ರ, ರಮ್ಯಾ, ನಾಗೇಗೌಡ, ಸೋಮಶೇಖರ್‌, ಜಯಲಕ್ಷ್ಮಿ, ಮಾನಸ ಇತರರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ