ಮಳವಳ್ಳಿ: ಕೆಲಸ ಕಾಯಂಗೊಳಿಸುವಂತೆ ಆಗ್ರಹಿಸಿ ಪುರಸಭೆಯ ಗುತ್ತಿಗೆ ಪೌರಕಾರ್ಮಿಕರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ಪುರಸಭೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಡಾ.ಬಿ.ಆರ್.ಅಂಬೇಡ್ಕರ್ ಗುತ್ತಿಗೆ ಪೌರ ಕಾರ್ಮಿಕರ ಸಂಘದ ಪೌರಕಾರ್ಮಿಕರು, ಸರಕಾರ ಶೀಘ್ರದಲ್ಲೇ ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.
ಸಂಘದ ಅಧ್ಯಕ್ಷ ಕೆ.ನಾಗರಾಜು ಮಾತನಾಡಿ, 15 ವರ್ಷಗಳಿಂದ ಪೌರ ಕಾರ್ಮಿಕರಾಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿದ್ದು, ಕಳೆದ ಚುನಾವಣೆ ಸಂದರ್ಭದಲ್ಲಿ ಸರಕಾರ ಕಾಯಂಗೊಳಿಸುವುದಾಗಿ ಭರವಸೆ ನೀಡಿದ್ದರೂ ಇದುವರೆಗೂ ಈಡೇರಿಲ್ಲ. ಈ ಕೂಡಲೇ ಕಾಯಂಗೊಳಿಸಬೇಕು. ಇಲ್ಲದಿದ್ದರೆ ಮತ್ತಷ್ಟು ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಕಾರ್ಯದರ್ಶಿ ಮಾದೇಶ್, ಸದಸ್ಯೆ ಮೆಹಬೂಬ್ ಪಾಷಾ, ಮಾಜಿ ಪುರಸಭಾಧ್ಯಕ್ಷ ಗಂಗರಾಜೇಅರಸು ಸೇರಿದಂತೆ ಎಲ್ಲಾ ಗುತ್ತಿಗೆ ನೌಕರರು ಭಾಗವಹಿಸಿದ್ದರು.