ಆ್ಯಪ್ನಗರ

ಶ್ರೀರಂಗಪಟ್ಟಣ ಡಿವೈಎಸ್ಪಿ ಆತ್ಮಹತ್ಯೆ ಯತ್ನ

ಆರೋಗ್ಯ ಸಮಸ್ಯೆ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಶ್ರೀರಂಗಪಟ್ಟಣ ಡಿವೈಎಸ್‌ಪಿ ಯೋಗೇಂದ್ರನಾಥ್‌(52) ಭಾನುವಾರ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Vijaya Karnataka 14 Oct 2019, 5:00 am
ಶ್ರೀರಂಗಪಟ್ಟಣ: ಆರೋಗ್ಯ ಸಮಸ್ಯೆ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಶ್ರೀರಂಗಪಟ್ಟಣ ಡಿವೈಎಸ್‌ಪಿ ಯೋಗೇಂದ್ರನಾಥ್‌(52) ಭಾನುವಾರ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
Vijaya Karnataka Web srirangapatna dysp attempts suicide
ಶ್ರೀರಂಗಪಟ್ಟಣ ಡಿವೈಎಸ್ಪಿ ಆತ್ಮಹತ್ಯೆ ಯತ್ನ


ತಾಲೂಕಿನ ಕಿರಂಗೂರು ಹೊಸಬಡಾವಣೆಯಲ್ಲಿ ವಾಸವಿದ್ದ ಅವರು ತಮ್ಮ ಮನೆಯಲ್ಲೇ ಹರಿತವಾದ ಆಯುಧದಿಂದ ಮುಂಗೈನ ನರ ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಮನೆ ಬಳಿಯಿದ್ದ ಸಿಬ್ಬಂದಿ ಹಾಗೂ ಅಕ್ಕಪಕ್ಕದವರು ತಕ್ಷಣ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಡಿವೈಎಸ್‌ಪಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಪೊಲೀಸ್‌ ಇಲಾಖೆ ಮೇಲಧಿಕಾರಿಗಳು ತಿಳಿಸಿದ್ದಾರೆ.

1996ರ ಬ್ಯಾಚ್‌ನಲ್ಲಿ ಪಿಎಸ್‌ಐ ಆಗಿ ಪೊಲೀಸ್‌ ಇಲಾಖೆಯಲ್ಲಿ ವೃತ್ತಿ ಜೀವನ ಆರಂಭಿಸಿದ ಯೋಗೇಂದ್ರನಾಥ್‌ ಅವರು ರಾಜ್ಯದ ನಾನಾ ಜಿಲ್ಲೆಗಳಲ್ಲಿ ಪಿಎಸ್‌ಐ, ಸಿಪಿಐ ಆಗಿ ಕರ್ತವ್ಯ ನಿರ್ವಹಿಸಿದ್ದರು. ಒಂದು ವರ್ಷದ ಹಿಂದೆ ಬಡ್ತಿಯಾಗಿ ಶ್ರೀರಂಗಪಟ್ಟಣ ಉಪವಿಭಾಗದ ಡಿವೈಎಸ್‌ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ರಕ್ತದೊತ್ತಡ ಹಾಗೂ ಮಧುಮೇಹ ಸಮಸ್ಯೆ ಜೊತೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಇದೇ ಕಾರಣದಿಂದ ಅವರು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ಹಿನ್ನೆಲೆಯಲ್ಲಿ ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ಕೆ.ಪರಶುರಾಮ್‌ ಅವರು ಆಸ್ಪತ್ರೆಗೆ ಭೇಟಿ ನೀಡಿ ಯೋಗೇಂದ್ರನಾಥ್‌ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು. ಅವರ ಕುಟುಂಬದವರೊಂದಿಗೂ ಸಮಾಲೋಚನೆ ನಡೆಸಿದರು. ದಕ್ಷಿಣ ವಲಯ ಐಜಿಪಿ ವಿಪುಲ್‌ಕುಮಾರ್‌ ಕೂಡ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

''ಅನಾರೋಗ್ಯ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಡಿವೈಎಸ್‌ಪಿ ಯೋಗೇಂದ್ರನಾಥ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ. ಆತ್ಮಹತ್ಯೆ ಯತ್ನ ಸಂಬಂಧ ಮಾಹಿತಿ ಸಂಗ್ರಹಿಸಲಾಗುತ್ತಿದೆ,'' ಎಂದು ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ಕೆ.ಪರಶುರಾಮ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ