ಕೆ.ಆರ್.ಪೇಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.12ರಂದು ಕೆ.ಆರ್.ಪೇಟೆಯ ನಾಲ್ವಡಿ ಕೃಷ್ಣರಾಜ ಒಡೆಯರ್ ತಾಲೂಕು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸಾಧನಾ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ರಾಧಿಕ ಅವರು ಬುಧವಾರ ಪಟ್ಟಣದಲ್ಲಿ ಸಂಚಾರ ನಡೆಸಿ ಕಾನೂನು ಸುವ್ಯವಸ್ಥೆ ಹಾಗೂ ಕ್ರೀಡಾಂಗಣದಲ್ಲಿನ ಭದ್ರತಾ ವ್ಯವಸ್ಥೆ ಪರಿಶೀಲಿಸಿದರು. ಜತೆಗೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಮುಖ್ಯಮಂತ್ರಿಗೆ ಮನವಿ ಸಲ್ಲಿಸುವವರು ಮುಂಚಿತವಾಗಿಯೇ ಸ್ಥಳೀಯ ಪೊಲೀಸರಿಗೆ ತಿಳಿಸಿ ಅನುಮತಿ ಪಡೆದುಕೊಳ್ಳಬೇಕು. ಮುಖ್ಯಮಂತ್ರಿಗಳ ಕಾರ್ಯಕ್ರಮ ಬಹಿಷ್ಕರಿಸಿ ಅಡ್ಡಿಪಡಿಸುವುದು ಹಾಗೂ ಕಪ್ಪು ಬಾವುಟ ಪ್ರದರ್ಶಿಸುವುದು ಅಪರಾಧವಾಗಿದೆ ಎಂದು ಎಸ್ಪಿ ಹೇಳಿದರು.
ಶಾಸಕ ನಾರಾಯಣಗೌಡ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತನಾಡಿ, ''ಸಿಎಂ ನಮ್ಮ ಕ್ಷೇತ್ರಕ್ಕೆ ಆಗಮಿಸುತ್ತಿರುವಾಗ ಕ್ಷೇತ್ರದ ಶಾಸಕನಾಗಿ ಅವರನ್ನು ಸ್ವಾಗತಿಸಬೇಕಾದ್ದು ನನ್ನ ಕರ್ತವ್ಯವಾಗಿದೆ. ಪಟ್ಟಣದ ನಾಗರಿಕರ ನೀರಿನ ತೆರಿಗೆಯನ್ನು 100ರೂಗಳಿಂದ 400ರೂ.ಗಳಿಗೆ ಹೆಚ್ಚಿಸುವ ಮೂರನೇ ಹಂತದ ಕುಡಿಯುವ ನೀರಿನ ಯೋಜನೆಯು ನಮ್ಮ ಪಟ್ಟಣಕ್ಕೆ ಬೇಕಾಗಿಲ್ಲ. ಸರಕಾರಕ್ಕೆ ಹಿಂದಿರುಗಿಸಬೇಕಾದ 14 ಕೋಟಿ ರೂ.ಸಾಲವನ್ನು ಪಟ್ಟಣದ ಜನರಿಂದ ಹೆಚ್ಚಿನ ತೆರಿಗೆ ವಸೂಲಿ ಮಾಡಿ ಕಟ್ಟುವುದಕ್ಕೆ ನಮ್ಮ ಸಹಮತವಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದೇನೆ. ಸ್ಥಳೀಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರಕಾರಿ ಕಾರ್ಯಕ್ರಮ ನಡೆಸುವುದಾದರೆ ನನ್ನದೇನೂ ಅಭ್ಯಂತರವಿಲ್ಲ'' ಎಂದು ಶಾಸಕ ನಾರಾಯಣಗೌಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು.
ನಾಗಮಂಗಲ ಡಿವೈಎಸ್ಪಿ ಧರ್ಮೇಂದ್ರ, ಸರ್ಕಲ್ ಇನ್ಸ್ಪೆಕ್ಟರ್ ಎಚ್.ಬಿ.ವೆಂಕಟೇಶಯ್ಯ, ಸಬ್ಇನ್ಸ್ಪೆಕ್ಟರ್ಗಳಾದ ಎಚ್.ಎಸ್.ವೆಂಕಟೇಶ್, ಕೆ.ಎನ್.ಗಿರೀಶ್ ಹಾಜರಿದ್ದು, ಸಿದ್ಧತೆ ಮಾಹಿತಿ ನೀಡಿದರು.