ಆ್ಯಪ್ನಗರ

ಮಂಡ್ಯ: ಹಣ ದುರುಪಯೋಗ ಆರೋಪ, ಪಿಡಿಒ ಅಮಾನತು!

ನಿಯಮಬಾಹಿರವಾಗಿ ಹಣ ದುರುಪಯೋಗ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ಯಲಿಯೂರು ಗ್ರಾಮ ಪಂಚಾಯಿತಿ ಪಿಡಿಒ ಸಿ.ರುದ್ರಯ್ಯ ಅವರನ್ನು ಸಿಇಒ ಅಮಾನತು ಮಾಡಿದ್ದಾರೆ.

Vijaya Karnataka Web 8 Apr 2021, 11:21 pm
ಮಂಡ್ಯ: ತಾಲೂಕಿನ ಯಲಿಯೂರು ಗ್ರಾಮ ಪಂಚಾಯಿತಿ ಪಿಡಿಒ ಸಿ.ರುದ್ರಯ್ಯ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಂ.ಜುಲಿಕರ್ ಉಲ್ಲಾ ಆದೇಶ ಹೊರಡಿಸಿದ್ದಾರೆ.
Vijaya Karnataka Web ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ


ಯಲಿಯೂರು ಗ್ರಾ.ಪಂ.ನಲ್ಲಿ 2017ನೇ ಸಾಲಿನಲ್ಲಿ ಖರೀದಿ/ರಿಪೇರಿ ಬಿಲ್‌ಗಳನ್ನು ನಿಯಮಾನುಸಾರ ಪಾವತಿಸಿಲ್ಲವೆಂದು ಹಾಗೂ ಖರೀದಿಸಿದ ಸಾಮಗ್ರಿಗಳನ್ನು ದಾಸ್ತಾನು ಪಡೆದಿರುವ ಬಗ್ಗೆ ಯಾವುದೇ ದಾಖಲೆಗಳಿಲ್ಲವೆಂದು ಗ್ರಾ.ಪಂ. ಸದಸ್ಯ ನವೀನ್‌ಕುಮಾರ್ ಆರೋಪಿಸಿ ದೂರು ಸಲ್ಲಿಸಿದ್ದರು.

ಹೀಗಾಗಿ ದೂರಿನ ಬಗ್ಗೆ ಪರಿಶೀಲನೆ ನಡೆಸಿದ ತಾ.ಪಂ. ಇಒ, ಹಣ ದುರುಪಯೋಗ ದೃಢಪಟ್ಟ ಹಿನ್ನಲೆಯಲ್ಲಿ ಪಿಡಿಒ ರುದ್ರಯ್ಯ ವಿರುದ್ಧ ಶಿಸ್ತು ಕ್ರಮ ಹಾಗೂ ವಿಶೇಷ ತನಿಖೆಗಾಗಿ ಸಿಇಒಗೆ ಶಿಫಾರಸ್ಸು ಮಾಡಿದ್ದರು.

ಈ ಹಿನ್ನಲೆಯಲ್ಲಿ 7 ದಿನಗಳೊಳಗೆ ಉತ್ತರಿಸುವಂತೆ ಸಿಇಒ ಕಾರಣ ಕೇಳಿ ರುದ್ರಯ್ಯ ಅವರಿಗೆ ನೋಟಿಸ್ ನೀಡಿದ್ದರು. ಆದರೆ, ಈ ನೋಟೀಸ್‌ಗೆ ಯಾವುದೇ ವಿವರಣೆ ಸಲ್ಲಿಸದೆ ನಿರ್ಲಕ್ಷ್ಯತನ ತೋರಿರುವುದು ಹಾಗೂ ನಿಯಮಬಾಹಿರವಾಗಿ ಖರೀದಿ ಪ್ರಕ್ರಿಯೆ ನಡೆಸಿ ಹಣ ದುರುಪಯೋಗ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ಸಿಇಒ ಅಮಾನತು ಆದೇಶ ಹೊರಡಿಸಿದ್ದಾರೆ.

ರುದ್ರಯ್ಯ ವಿರುದ್ಧ ಶಿಸ್ತುಕ್ರಮ ಜರುಗಿಸುವ ಪ್ರಕ್ರಿಯೆ ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಏ.7ರಂದು ಅಮಾನತು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ ನಿಯಮ 98ರನ್ವಯ ಜೀವನಾಧಾರ ಭತ್ಯೆ ಪಡೆಯಲು ರುದ್ರಯ್ಯ ಅರ್ಹರಿದ್ದು, ಸಕ್ಷಮ ಪ್ರಾಧಿಕಾರಿಯಿಂದ ಪೂರ್ವಾನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಡತಕ್ಕದ್ದಲ್ಲ ಎಂದು ಆದೇಶದಲ್ಲಿ ಸೂಚಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ