ಆ್ಯಪ್ನಗರ

ಜನಾರ್ದನ ಪೂಜಾರಿಗೆ ಎನ್‌‌ಕೌಂಟರ್ ಬೆದರಿಕೆ: ಯುವಕನ ಬಂಧನ

ಪುತ್ತೂರು ಸಮೀಪದ ನಿವಾಸಿ ಹಕೀಮ್ ಎಂಬಾತ ಬಂಧಿತ. ಸೌದಿ ಅರೇಬಿಯಾದಲ್ಲಿ ಕೆಲಸದಲ್ಲಿದ್ದ ಈತ ಮಂಗಳವಾರ ತವರಿಗೆ ಮರಳುತ್ತಿದ್ದಾಗ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳ್ಳಂಬೆಳಗ್ಗೆ ವಶಕ್ಕೆ ಪಡೆದು, ಕಾವೂರು ಪೊಲೀಸರು ಬಂಧಿಸಿದ್ದಾರೆ.

Vijaya Karnataka Web 19 Mar 2019, 8:22 am
ಮಂಗಳೂರು: ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಬಿ.ಜನಾರ್ದನ ಪೂಜಾರಿ ಅವರನ್ನು ಗಡೀಪಾರು ಮಾಡಬೇಕು ಮತ್ತು ಎನ್‌ಕೌಂಟರ್ ಮೂಲಕ ಸಾಯಿಸಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಡಿಯೊ ಮಾಡಿ ಕಳುಹಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
Vijaya Karnataka Web janardhan poojary


ಪುತ್ತೂರು ಸಮೀಪದ ನಿವಾಸಿ ಹಕೀಮ್ ಎಂಬಾತ ಬಂಧಿತ. ಸೌದಿ ಅರೇಬಿಯಾದಲ್ಲಿ ಕೆಲಸದಲ್ಲಿದ್ದ ಈತ ಮಂಗಳವಾರ ತವರಿಗೆ ಮರಳುತ್ತಿದ್ದಾಗ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳ್ಳಂಬೆಳಗ್ಗೆ ವಶಕ್ಕೆ ಪಡೆದು, ಕಾವೂರು ಪೊಲೀಸರು ಬಂಧಿಸಿದ್ದಾರೆ.

ಡಿಸೆಂಬರ್‌ನಲ್ಲಿ ಕುದ್ರೋಳಿ ದೇವಸ್ಥಾನದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ, ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಆಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ರಾಮ ಮಂದಿರ ಹಿಂದು, ಮುಸ್ಲಿಂ, ಕ್ರೈಸ್ತರೆಲ್ಲರ ಆಶಯ ಎಂದು ಜನಾರ್ದನ ಪೂಜಾರಿ ಹೇಳಿಕೆ ನೀಡಿದ್ದರು.

ಇದು ಚರ್ಚೆ ಹಾಗೂ ವಿರೋಧಕ್ಕೂ ಕಾರಣವಾಗಿತ್ತು. ಈ ಮಧ್ಯೆ, ಯುವಕನೊಬ್ಬ ತಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಪರಿಚಯಿಸಿಕೊಂಡು, ಪೂಜಾರಿ ಅವರನ್ನು ಎನ್‌ಕೌಂಟರ್ ಮಾಡಬೇಕು ಎಂದು ಧ್ವನಿಮುದ್ರಿಕೆ ಮಾಡಿ ವಾಟ್ಸ್‌ಆ್ಯಪ್‌ನಲ್ಲಿ ಕಳುಹಿಸಿದ್ದ. ಇದು ವೈರಲ್ ಆಗಿತ್ತು.

ಪೂಜಾರಿ ಅವಹೇಳನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕ ಜೆ.ಆರ್.ಲೋಬೊ ಸಹಿತ ಹಲವರು ಆಗ್ರಹಿಸಿ ಅಂದಿನ ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ಅವರಿಗೆ ಮನವಿ ಸಲ್ಲಿಸಿದರು.

ಅಪರಿಚಿತ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡಿ ಧರ್ಮ, ಜಾತಿಗಳ ನಡುವೆ ಕಂದಕ ಸೃಷ್ಟಿ ಮಾಡುವಲ್ಲಿ ಯತ್ನಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕೀಳುಮಟ್ಟದ ಹೇಳಿಕೆ ನೀಡಿದ್ದು, ಇದು ಕಾನೂನು ಬಾಹಿರವಾಗಿದೆ. ಹೇಳಿಕೆಯಲ್ಲಿ ಜನಾರ್ದನ ಪೂಜಾರಿ ಅವರನ್ನು ದೇಶದ್ರೋಹಿ ಹಾಗೂ ಎನ್‌ಕೌಂಟರ್ ಮಾಡಬೇಕು ಎಂದು ಕರೆ ನೀಡಿದ್ದಾನೆ ಎಂದು ಮನವಿಯಲ್ಲಿ ತಿಳಿಸಲಾಗಿತ್ತು.

ಮಂಗಳೂರು ಸೈಬರ್ ಠಾಣೆ ಸಹಿತ ಹಲವೆಡೆ ಅಪರಿಚಿತ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಪೊಲೀಸರು ಧ್ವನಿ ಮುದ್ರಿಕೆ ಬಗ್ಗೆ ವಿಚಾರಣೆ ನಡೆಸಿ, ಆರೋಪಿ ಸೌದಿ ಅರೇಬಿಯಾದಲ್ಲಿ ಇರುವುದನ್ನು ಪತ್ತೆಹಚ್ಚಿ, ಆತನ ಬಂಧನಕ್ಕೆ ಬಲೆ ಬೀಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ