ಆ್ಯಪ್ನಗರ

ಬೆಳ್ತಂಗಡಿ ತಾಲೂಕಿನಲ್ಲಿ ಪ್ರವಾಹ ಭೀತಿ: ಕಾಳಜಿ ಕೇಂದ್ರ ಆರಂಭ, 32 ಕುಟುಂಬಗಳ ಸ್ಥಳಾಂತರ

ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಬೀಳುತ್ತಿರುವುದರಿಂದ ನೇತ್ರಾವತಿಯ ಉಪನದಿಗಳು ಉಕ್ಕಿ ಹರಿಯುತ್ತಿವೆ. ಈ ಭಾಗದಲ್ಲಿ ಪ್ರವಾಹದ ಆತಂಕ ಎದುರಾಗಿದ್ದು ಮುನ್ನೆಚ್ಚರಿಕೆಯಾಗಿ ಕಾಳಜಿ ಕೇಂದ್ರಕ್ಕೆ 32 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

Vijaya Karnataka Web 7 Aug 2020, 7:27 am
ಬೆಳ್ತಂಗಡಿ: ಕರಾವಳಿಯಲ್ಲಿ ಕಳೆದ 3 ದಿನಗಳಿಂದ ಮಳೆ ಅಬ್ಬರಿಸುತ್ತಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ ತಾಲೂಕು ಆಡಳಿತ ಕಾಳಜಿ ಕೇಂದ್ರ ತೆರೆದಿದೆ. ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಡಾ. ಯತೀಶ್‌ ಉಳ್ಳಾಲ್‌ ಗುರುವಾರ ತಾಲೂಕಿನ ಸಂಭಾವ್ಯ ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Vijaya Karnataka Web ಸಾಂದರ್ಭಿಕ


ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಡಾ. ಯತೀಶ್‌ ಉಳ್ಳಾಲ್‌, ಮಲವಂತಿಗೆ ಗ್ರಾಮದ ದಿಡುಪೆಯ ಗಣೇಶ್‌ ನಗರ ಎಂಬಲ್ಲಿನ 32 ಕುಟುಂಬಗಳನ್ನು ಸ್ಥಳಾಂತರಿಸಲಾಗಿದ್ದು, ಸ್ಥಳೀಯ ಸರಕಾರಿ ಶಾಲೆಯಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದೆ. ಕಳೆದ ಮಳೆಗಾಲದಲ್ಲಿ ಗಣೇಶ್‌ ನಗರದಲ್ಲಿ ದೊಡ್ಡ ಪ್ರಮಾಣದ ಬಿರುಕು ಉಂಟಾಗಿತ್ತು. ಅಲ್ಲಿ ಈ ಬಾರಿ ಮಳೆಯ ನಡುವೆ ವಾಸ ಮಾಡುವುದು ಅಪಾಯಕಾರಿ ಎಂದು ಕಂಡುಕೊಳ್ಳಲಾಗಿದ್ದು, ಅಲ್ಲಿನ ನಿವಾಸಿಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ. ಕಾಳಜಿ ಕೇಂದ್ರದಲ್ಲಿ ಊಟ, ವಸತಿ, ಶೌಚಾಲಯ ಮತ್ತಿತರ ವ್ಯವಸ್ಥೆ ಮಾಡಲಾಗಿದ್ದು, ಸ್ವಯಂಸೇವಕರನ್ನೂ ನಿಯೋಜಿಸಲಾಗಿದೆ ಎಂದವರು ನುಡಿದರು.

ಚಾರ್ಮಾಡಿ ಘಾಟಿ ಪ್ರದೇಶಕ್ಕೆ ಭೇಟಿ ನೀಡಿದ್ದೇನೆ. ಅಲ್ಲಿ ರಸ್ತೆಗೆ ಬಿದ್ದಿರುವ ಕಲ್ಲುಗಳನ್ನು ತೆರವು ಮಾಡಲಾಗಿದೆ. ಘಾಟಿಯಲ್ಲಿಇನ್ನಷ್ಟು ಕುಸಿತ ಉಂಟಾಗುವ ಭೀತಿ ಇದೆ. ಇದಕ್ಕಾಗಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಒಂದು ಜೆಸಿಬಿಯನ್ನು ಅಲ್ಲೇ ಇರಿಸಲಾಗಿದೆ ಎಂದರು.

ಚಾರ್ಮಾಡಿ ತಪ್ಪಲಿನ ಅಂತರ ಪ್ರದೇಶದಲ್ಲಿಅಣೆಕಟ್ಟಿನ ಕಿಂಡಿಗಳಲ್ಲಿ ಸಿಲುಕಿಕೊಂಡಿರುವ ತ್ಯಾಜ್ಯಗಳನ್ನು ತೆರವು ಮಾಡಲಾಗಿದೆ. ಎಚ್ಚರಿಕೆ ವಹಿಸುವಂತೆ ಜನರಿಗೆ ಸೂಚನೆ ನೀಡಲಾಗಿದೆ. ಅಪಾಯದ ಮುನ್ಸೂಚನೆ ಸಿಕ್ಕಿದ ತಕ್ಷಣ ತಾಲೂಕು ಆಡಳಿತದ ಗಮನಕ್ಕೆ ತರುವಂತೆ ತಿಳಿಸಲಾಗಿದೆ ಎಂದರು. ತಹಸೀಲ್ದಾರ್‌ ಮಹೇಶ್‌ ಜೆ. ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ