ಆ್ಯಪ್ನಗರ

ಯಡಿಯೂರಪ್ಪ ಕೆಳಗಿಳಿಸಲು ಬಿಜೆಪಿಯಲ್ಲೇ ಕುತಂತ್ರ: ಸಿದ್ದರಾಮಯ್ಯ

"ಕಾಂಗ್ರೆಸ್ ಆಡಳಿತ ಕಾಲದಲ್ಲಿ ಟಿಪ್ಪು ಜಯಂತಿ ಆಚರಿಸಲಾಯಿತು. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಸರಕಾರದಿಂದ ಆಚರಣೆ ಇಲ್ಲ ಎಂದು ಹೇಳಿದೆ. ಬಿಜೆಪಿ ಸಂಕುಚಿತ ಮನೋಭಾವ ಹಾಗೂ ರಾಜಕೀಯ ಕಾರಣಗಳಿಗಾಗಿ ಟಿಪ್ಪು ಜಯಂತಿ ಆಚರಣೆಗೆ ಹಿಂದೇಟು ಹಾಕುತ್ತಿದೆ," - ಸಿದ್ದರಾಮಯ್ಯ.

Vijaya Karnataka 6 Nov 2019, 8:28 pm
ಮಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿಯಲ್ಲೇ ಕುತಂತ್ರ ನಡೆದಿದೆ. ಯಡಿಯೂರಪ್ಪ ಅವರು ಹೇಳಿದನ್ನು ಆಡಿಯೋ ಮೂಲಕ ಜನರಿಗೆ ತಿಳಿಸುವುದು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮುಜಗರಕ್ಕೀಡು ಮಾಡುವುದು ಅವರ ಮುಖ್ಯ ಉದ್ದೇಶವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Vijaya Karnataka Web Siddaramaiah


ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

15 ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳನ್ನು ಗೆಲ್ಲದಿದ್ದರೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅನಿವಾರ್ಯವಾಗುತ್ತದೆ ಎಂದು ಹೇಳಿದ ಸಿದ್ದರಾಮಯ್ಯ, ಕಾಂಗ್ರೆಸ್ ಕನಿಷ್ಠ 12 ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದೆ. ಈ ಹಿನ್ನೆಲೆಯಲ್ಲೇ ಮಹಾರಾಷ್ಟ್ರದಲ್ಲಿ ಎನ್‌ಸಿಪಿಯಿಂದ ದೊಡ್ಡ ಪ್ರಮಾಣದಲ್ಲಿ ಪಕ್ಷಾಂತರ ನಡೆದಿದೆ. ಐಟಿ, ಇ.ಡಿ ಮೂಲಕ ದೇಶದಲ್ಲಿ ಕಾಂಗ್ರೆಸ್‌ನ್ನು ಮುಗಿಸುತ್ತೇವೆ ಎಂದು ಬಿಜೆಪಿ ಹೇಳುತ್ತಿದೆ. ಆದರೆ ಅದು ಅವರ ಭ್ರಮೆಯಷ್ಟೇ ಎಂದರು.

ಟಿಪ್ಪು ಜಯಂತಿ ಆಚರಣೆ - ಸರಕಾರಕ್ಕೆ ಬಿಟ್ಟ ವಿಚಾರ

ಟಿಪ್ಪು ಜಯಂತಿ ಆಚರಿಸಲು ರಾಜ್ಯ ಹೈಕೋರ್ಟ್ ಸೂಚಿಸಿದೆ. ಇನ್ನು ಆಚರಣೆ ಮಾಡುವುದು, ಬಿಡುವುದು ಬಿಜೆಪಿ ಸರಕಾರಕ್ಕೆ ಬಿಟ್ಟ ವಿಚಾರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್ ಆಡಳಿತ ಕಾಲದಲ್ಲಿ ಟಿಪ್ಪು ಜಯಂತಿ ಆಚರಿಸಲಾಯಿತು. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಸರಕಾರದಿಂದ ಆಚರಣೆ ಇಲ್ಲ ಎಂದು ಹೇಳಿದೆ. ಬಿಜೆಪಿ ಸಂಕುಚಿತ ಮನೋಭಾವ ಹಾಗೂ ರಾಜಕೀಯ ಕಾರಣಗಳಿಗಾಗಿ ಟಿಪ್ಪು ಜಯಂತಿ ಆಚರಣೆಗೆ ಹಿಂದೇಟು ಹಾಕುತ್ತಿದೆ ಎಂದರು.

ಪಾಲಿಕೆಯಲ್ಲಿ ವಾರ್ಡ್ ಕಮಿಟಿ ರಚನೆಗೆ ಬದ್ಧ

ಮಂಗಳೂರು ಮಹಾನಗರಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಅಡಳಿತಕ್ಕೆ ಬಂದರೆ ವಾರ್ಡ್ ಕಮಿಟಿ ಹಾಗೂ ಏರಿಯಾ ಕಮಿಟಿ ರಚಿಸಲು ಪಕ್ಷ ಬದ್ಧವಾಗಿದೆ ಎಂದು ಸಿದ್ದರಾಮಯ್ಯ ಇದೇ ಸಂದರ್ಭದಲ್ಲಿ ತಿಳಿಸಿದರು.

ಕಾಂಗ್ರೆಸ್ ಸರಕಾರ ಮಂಗಳೂರು ಅಭಿವೃದ್ಧಿಗೆ ನೀಡಿದಷ್ಟು ಅನುದಾನವನ್ನು ಬೇರೆ ಯಾವುದೇ ಸರಕಾರ ನೀಡಿಲ್ಲ. ಬಿಜೆಪಿ ಏನು ಕೊಟ್ಟಿದೆ ಎನ್ನುವುದನ್ನು ಅಂಕಿ ಅಂಶಗಳ ಮೂಲಕ ತೋರಿಸಲಿ. ಅವರಿಗೆ ಸುಳ್ಳು ಹೇಳುವುದು ಅಭ್ಯಾಸವಾಗಿದೆ. ಸುಳ್ಳು ಬಿಜೆಪಿಯ ಅನ್ವರ್ಥನಾಮ ಎಂದು ಸಿದ್ದರಾಮಯ್ಯ ಟೀಕಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ