ಆ್ಯಪ್ನಗರ

ಕಾಫಿ ಡೇ ಸಿದ್ಧಾರ್ಥ ಸಾವಿನ ಗೊಂದಲಕ್ಕೆ ಕೊನೆಗೂ ತೆರೆ!

ಜುಲೈ 29ರಂದು ಉಳ್ಳಾಲ ಸೇತುವೆ ಬಳಿಯಿಂದ ನಾಪತ್ತೆಯಾಗಿದ್ದ ಸಿದ್ದಾರ್ಥ ಅವರು ಎರಡು ದಿನಗಳ ಬಳಿಕ ಶವವಾಗಿ ಪತ್ತೆಯಾಗಿದ್ದರು.

Vijaya Karnataka 26 Aug 2019, 12:32 pm
ಮಂಗಳೂರು: ಕಾಫಿ ಡೇ ಮಾಲೀಕ ಸಿದ್ಧಾರ್ಥ ಸಾವಿನ ಕುರಿತ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದೆ.
Vijaya Karnataka Web Siddartha


ಸಿದ್ಧಾರ್ಥ ಅವರದ್ದು ಆತ್ಮಹತ್ಯೆ ಎಂದು ಪ್ರಕರಣದ ತನಿಖಾಧಿಕಾರಿಗೆ ಸಲ್ಲಿಸಿದ ವಿಧಿವಿಜ್ಞಾನ ಪ್ರಯೋಗಾಲಯ(ಎಫ್‌ಎಸ್‌ಎಲ್‌) ವರದಿಯಲ್ಲಿ ಹೇಳಲಾಗಿದೆ.

ಎಫ್‌ಎಸ್‌ಎಲ್‌ ವರದಿ ಕಳೆದ ಸೋಮವಾರ ಮರಣೋತ್ತರ ಪರೀಕ್ಷೆ ನಡೆಸಿದ ಫೋರೆನ್ಸಿಕ್‌ ತಜ್ಞರ ಕೈಸೇರಿತ್ತು. ಬಳಿಕ ಅವರು ಅಂತಿಮ ವರದಿಯನ್ನು ಪ್ರಕರಣದ ತನಿಖಾಧಿಕಾರಿಗೆ ಶುಕ್ರವಾರ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜು.29ರಂದು ಮಂಗಳೂರಿನ ಉಳ್ಳಾಲ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಸಿದ್ಧಾರ್ಥ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಶವ ಎರಡು ದಿನಗಳ ಬಳಿಕ ನಾಲ್ಕು ಕಿ.ಮೀ. ದೂರದ ಹೊಯ್ಗೆ ಬಜಾರ್‌ ಎಂಬಲ್ಲಿ ಪತ್ತೆಯಾಗಿತ್ತು. ಶವದ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಪರೀಕ್ಷಾ ವರದಿಯನ್ನು ಹೆಚ್ಚಿನ ಪರೀಕ್ಷೆಗೆ ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.

ಈ ಮಧ್ಯೆ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ಪ್ರಕರಣದ ತನಿಖಾಧಿಕಾರಿಗೆ ಸಲ್ಲಿಕೆಯಾಗಿದ್ದು, ಅದರಲ್ಲಿ ನೀರಿಗೆ ಬಿದ್ದು ಉಸಿರುಗಟ್ಟಿ ಸಾವು ಎಂದು ಉಲ್ಲೇಖಿಸಲಾಗಿತ್ತು. ಇದೀಗ ಮರಣೋತ್ತರ ಪರೀಕ್ಷಾ ವರದಿ ಕೂಡ ತನಿಖಾಧಿಕಾರಿಗೆ ಸಲ್ಲಿಕೆಯಾಗಿದೆ ಎಂದು ತಿಳಿದುಬಂದಿದೆ.

ಈ ವರದಿಯಲ್ಲಿ ಸಿದ್ಧಾರ್ಥ ಸಾವು ಆತ್ಮಹತ್ಯೆ ಎಂದು ಉಲ್ಲೇಖಿಸಲಾಗಿದೆ ಎಂದು ಹೇಳಲಾಗಿದೆ. ಆದರೆ ಸಿದ್ಧಾರ್ಥ ಆತ್ಮಹತ್ಯೆ ಮಾಡಿಕೊಳ್ಳಲು ಬೇರೆ ಕಾರಣಗಳು ಇವೆಯೇ ಎಂಬ ಬಗ್ಗೆ ವಿಸ್ತೃತ ತನಿಖೆಯಲ್ಲಿ ಗೊತ್ತಾಗಲಿದೆ.

ಸಿದ್ಧಾರ್ಥ ಅವರ ಮರಣೋತ್ತರ ಪರೀಕ್ಷೆಯನ್ನು ಫೋರೆನ್ಸಿಕ್‌ ತಜ್ಞರಾದ ಡಾ. ಪ್ರತೀಕ್‌ ರಸ್ತೋಗಿ ಮತ್ತು ಡಾ. ರಶ್ಮಿ ನಡೆಸಿದ್ದರು. ಮಂಗಳೂರು ದಕ್ಷಿಣ ಎಸಿಪಿ ಕೋದಂಡರಾಮ ಪ್ರಕರಣದ ತನಿಖಾಧಿಕಾರಿಯಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ