ಮಂಗಳೂರು: ಕಾಟಿಪಳ್ಳ ನಿವಾಸಿ ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಇರುವ ಆರೋಪಿಗಳಾದ ನೌಷಾದ್ ಮತ್ತು ಮೊಹಮ್ಮದ್ ಇರ್ಷಾದ್ ಅವರ ಪೊಲೀಸ್ ಕಸ್ಟಡಿ ಜ.11ಕ್ಕೆ ಅಂತ್ಯವಾಗಲಿದ್ದು, ಅವರನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.
ಆರೋಪಿಗಳನ್ನು ಜ.4ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ಒಂದು ವಾರ ಕಾಲದ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿ ಬಹುತೇಕ ತನಿಖೆಯನ್ನು ನಡೆಸಿರುವುದರಿಂದ ಮತ್ತೆ ಪೊಲೀಸ್ ಕಸ್ಟಡಿ ಕೇಳುವ ಸಾಧ್ಯತೆ ಕಡಿಮೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಸ್ಟಡಿಯಲ್ಲಿ ತನಿಖೆಯ ವೇಳೆ ಕೆಲವೊಂದು ಮಹತ್ವದ ಸಂಗತಿಗಳನ್ನು ಆರೋಪಿಗಳು ಬಾಯಿಬಿಟ್ಟಿದ್ದಾರೆ ಎಂದು ಹೇಳಲಾಗಿದೆ. ಆದರೆ ಪೊಲೀಸರ ಕಾರ್ಯಾಚರಣೆ ಸಂದರ್ಭ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ಇನ್ನಿಬ್ಬರು ಆರೋಪಿಗಳಾದ ಪಿಂಕಿ ನವಾಜ್ ಮತ್ತು ರಿಜ್ವಾನ್ ತನಿಖೆ ಇನ್ನಷ್ಟೇ ನಡೆಸಬೇಕಿದೆ. ಇನ್ನು ಒಂದೆರಡು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಬಿಡುಗಡೆಗೊಳ್ಳುವ ಸಾಧ್ಯತೆ ಇರುವುದರಿಂದ ಆ ಬಳಿಕ ಅವರನ್ನು ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.