ಆ್ಯಪ್ನಗರ

ಮಂಗಳೂರಲ್ಲಿ ಮತ್ತೆ ಲಾಕ್‌ಡೌನ್‌ಗೆ‌ ಕೋಟಾ ಶ್ರೀನಿವಾಸ ಪೂಜಾರಿ ಒತ್ತಾಯ!

ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಲಾಕ್‌ಡೌನ್ ಮಾಡುವ ಅಗತ್ಯ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ. ಕನಿಷ್ಠ 1 ವಾರ ಲಾಕ್‌ಡೌನ್ ಬೇಕು ಎಂದಿದ್ದಾರೆ.

Vijaya Karnataka Web 13 Jul 2020, 1:54 pm
ಮಂಗಳೂರ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಲಾಕ್‌ಡೌನ್ ಮಾಡುವ ಅಗತ್ಯ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ.
Vijaya Karnataka Web kota srinivas poojary


ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ಕೊರೊನಾ ವೈರಸ್ ಮಿತಿಮೀರಿ ಹಬ್ಬುತ್ತಿದೆ. ಈ ಹಿನ್ನೆಲೆಯಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಸೇರಿದಂತೆ ಜಿಲ್ಲೆಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇವೆ. ಎಲ್ಲರೂ ಕೂಡ ಜಿಲ್ಲೆಯಲ್ಲಿ ಕನಿಷ್ಠ ಒಂದು ವಾರಗಳ ಕಾಲ ಲಾಕ್‌ಡೌನ್‌ ಹೇರುವ ಅಗತ್ಯ ಇದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಆದರೆ, ಸರಕಾರದ ಪರವಾಗಿ ಹೇಳುವುದಾದರೆ, ಲಾಕ್‌ಡೌನ್‌ ಮಾಡುವುದರಿಂದ ಯಾವುದೇ ಪ್ರಯೋಜನವಾಗದು. ಸೋಂಕನ್ನು ಮುಂದೂಡಬಹುದೇ ಹೊರತು, ಅದನ್ನು ನಿಗ್ರಹಿಸಲು ಸಾಧ್ಯವಿಲ್ಲ. ಲಾಕ್‌ಡೌನ್‌ ತೆರವಿನ ನಂತರ ಮತ್ತೆ ಸೋಂಕು ಹಬ್ಬುತ್ತದೆ. ಈಗಾಗಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದಲ್ಲಿ ಲಾಕ್‌ಡೌನ್ ಹೇರುವ ಕುರಿತು ಅಧಿಕಾರಿಗಳ ಜತೆಗೆ ಸಭೆ ನಡೆಸಿದ್ದಾರೆ. ಮುಖ್ಯಮಂತ್ರಿಗಳು ಕೂಡ ಲಾಕ್‌ಡೌನ್‌ನಿಂದ ಯಾವುದೇ ಪ್ರಯೋಜನವಾಗದು ಎಂದು ಅಬಿಪ್ರಾಯಪಟ್ಟಿದ್ದಾರೆ. ಆದರೆ, ಆಯಾ ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಹೇರುವ ಅಧಿಕಾರವನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಿದ್ದಾರೆ ಎಂದು ಹೇಳಿದರು.

ಎಲ್ಲ ಮನೆಗಳಿಗೂ ಇಮ್ಯುನಿಟಿ ಬೂಸ್ಟರ್‌, ಸ್ಯಾನಿಟೈಸರ್‌ ಒದಗಿಸಿ: ಎಚ್‌. ಡಿ. ಕುಮಾರಸ್ವಾಮಿ ಒತ್ತಾಯ

ಜಿಲ್ಲೆಯಲ್ಲಿ ಭಾನುವಾರ ದಾಖಲೆ ಸಂಖ್ಯೆ 196ಕ್ಕೆ ಏರಿಕೆಯಾಗಿದೆ. ಜು.11ರಂದು 186 ಪಾಸಿಟಿವ್‌ ವರದಿ ಬಂದಿರುವುದು ಈವರೆಗಿನ ಅತ್ಯಧಿಕ ಒಂದು ದಿನದ ದಾಖಲೆಯಾಗಿದೆ. ಭಾನುವಾರ ವರದಿಯಾದ ಹೊಸ ಪ್ರಕರಣಗಳಲ್ಲಿ 20 ಪ್ರಥಮ ಸಂಪರ್ಕ, ಅನಾರೋಗ್ಯ ಕಾರಣ 91, ಉಸಿರಾಟ ತೊಂದರೆ 16, ವಿದೇಶದಿಂದ ಆಗಮಿಸಿದವರು 10, ಪ್ರಸವಕ್ಕೆ ಮುನ್ನ ಮಾದರಿ ಸಂಗ್ರಹ 2, ಸಂಪರ್ಕ ಶೋಧನೆಯಲ್ಲಿ 57 ಪ್ರಕರಣಗಳಿವೆ. ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೂ ಕೊರೊನಾ ವೈರಸ್‌ ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿದೆ. ಅಲ್ಲದೆ ಮಂಗಳೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಪತ್ರಕರ್ತರಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ