ಆ್ಯಪ್ನಗರ

ಸೆ.16ರಿಂದ ಮಂಗಳೂರು ವಿವಿ ಅಂತಿಮ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಪರೀಕ್ಷೆ

ಮಂಗಳೂರು ವಿಶ್ವವಿದ್ಯಾಲಯದ ಅಂತಿಮ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಸೆ.16ರಿಂದ ಪರೀಕ್ಷೆಗಳು ನಡೆಯಲಿದೆ. ಪರೀಕ್ಷೆಗಳಿಗೆ ಹಾಜರಾಗಲು ಆಯಾ ಕಾಲೇಜುಗಳಿಗೆ ಭೇಟಿ ನೀಡಲು ಸಾಧ್ಯವಾಗದ ರಾಜ್ಯದ ಹೊರಗಿನ ವಿದ್ಯಾರ್ಥಿಗಳಿಗೆ, ಜನವರಿಯಲ್ಲಿ ಸಾಮಾನ್ಯ ಸ್ಥಿತಿಗೆ ಮರಳಿದಾಗ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ವಿವಿ ಉಪ ಕುಲಪತಿ ಪ್ರೊ.ಪಿ.ಎಸ್‌.ಯಡಪಡಿತ್ತಾಯ ಹೇಳಿದ್ದಾರೆ.

Vijaya Karnataka Web 5 Aug 2020, 7:40 am
ಕೋಣಾಜೆ: ಮಂಗಳೂರು ವಿಶ್ವವಿದ್ಯಾಲಯದ ಅಂತಿಮ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಲು ಸಿದ್ಧತೆಗಳು ನಡೆಯುತ್ತಿರುವುದರಿಂದ, ವಿದ್ಯಾರ್ಥಿಗಳು ಹಿಂದೆ ಉಳಿಸಿಕೊಂಡಿರುವ ಪತ್ರಿಕೆಗಳಿಗೂ ಸಮಯ ಹೊಂದಿಸಿಕೊಂಡು ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ವಿವಿಯ ಉಪ ಕುಲಪತಿ ಪ್ರೊ.ಪಿ.ಎಸ್‌.ಯಡಪಡಿತ್ತಾಯ ಹೇಳಿದರು.
Vijaya Karnataka Web ಸಾಂದರ್ಭಿಕ ಚಿತ್ರ


ವಿವಿಯ ಹೊಸ ಆಡಳಿತ ಸೌಧದಲ್ಲಿ ಮಂಗಳವಾರ ನಡೆದ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್‌ 16ರಿಂದ ಪರೀಕ್ಷೆಗಳು ನಡೆಯಲಿದ್ದು, ಕೋವಿಡ್‌ -19ರ ಹಿನ್ನೆಲೆಯಲ್ಲಿ ಯುಜಿ ಮತ್ತು ಪಿಜಿ ಕಾರ‍್ಯಕ್ರಮಗಳಲ್ಲಿ ಅಂತಿಮ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ. ಒಂದು ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ನಡೆಸದಂತೆ ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ. ಪರೀಕ್ಷೆಯನ್ನು ನಡೆಸಲು ವಿಶ್ವವಿದ್ಯಾಲಯ ಎಲ್ಲ ಸಿದ್ಧತೆಗಳನ್ನು ಮಾಡಿದೆ. ಪರೀಕ್ಷೆಗಳನ್ನು ಅತ್ಯಂತ ಎಚ್ಚರಿಕೆಯಿಂದ ನಡೆಸಲು ಎಸ್‌ಒಪಿ ಸಿದ್ಧಪಡಿಸಲಾಗಿದೆ ಎಂದರು.

ಪರೀಕ್ಷೆಗಳಿಗೆ ಹಾಜರಾಗಲು ಆಯಾ ಕಾಲೇಜುಗಳಿಗೆ ಭೇಟಿ ನೀಡಲು ಸಾಧ್ಯವಾಗದ ರಾಜ್ಯದ ಹೊರಗಿನ ವಿದ್ಯಾರ್ಥಿಗಳಿಗೆ, ಜನವರಿಯಲ್ಲಿ ಸಾಮಾನ್ಯ ಸ್ಥಿತಿಗೆ ಮರಳಿದಾಗ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಅವರನ್ನು ಹೊಸ ಅಭ್ಯರ್ಥಿಗಳಂತೆಯೇ ಪರಿಗಣಿಸಲಾಗುವುದು ಎಂದರು.

ಮಂಗಳೂರು ವಿಶ್ವವಿದ್ಯಾಲಯದ ಹಾಸ್ಟೆಲ್‌ಗಳನ್ನು ಕೋವಿಡ್‌ ಕೇರ್‌ ಕೇಂದ್ರಗಳಾಗಿ ಪರಿವರ್ತಿಸಲಾಗಿರುವುದರಿಂದ ಅಂತಿಮ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ನಡೆಸಬೇಕಾದ ಪರೀಕ್ಷೆಗಳ ಬಗ್ಗೆ ರಿಜಿಸ್ಟ್ರಾರ್‌ ಉಪ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಪರೀಕ್ಷೆಗಳು ಪೂರ್ಣಗೊಳ್ಳುವವರೆಗೆ ಹಾಸ್ಟೆಲ್‌ಗಳನ್ನು ಕೋವಿಡ್‌ ಕೇರ್‌ ಕೇಂದ್ರಗಳಾಗಿ ಪರಿವರ್ತಿಸಬಾರದು ಎಂದು ಉಪ ಕುಲಪತಿ ಹೇಳಿದರು.

ಇನ್ನು ಒಂದು ವರ್ಷದಲ್ಲಿ ಉತ್ತರ ಪತ್ರಿಕೆಗಳ ಡಿಜಿಟಲ್‌ ಮೌಲ್ಯಮಾಪನವನ್ನು ಕೈಗೆತ್ತಿಕೊಳ್ಳಲಾಗುವುದು. ಕಾಲೇಜುಗಳ ಕಂಪ್ಯೂಟರ್‌ ಪ್ರಯೋಗಾಲಯಗಳನ್ನು ಬಳಸಿಕೊಂಡು, ವಿದ್ಯಾರ್ಥಿಗಳ ಸ್ಕ್ಯಾ‌ನ್‌ ಮಾಡಿದ ಉತ್ತರ ಲಿಪಿಗಳನ್ನು ಮೌಲ್ಯಮಾಪನ ಮಾಡಲು ಉಪನ್ಯಾಸಕರಿಗೆ ಸೂಚಿಸಲಾಗಿದೆ ಎಂದರು.
ಕುಲಸಚಿವ ರಾಜು ಮೊಗವೀರ ಹಾಗೂ ಹಣಕಾಸು ಅಧಿಕಾರಿ ಡಾ. ಬಿ. ನಾರಾಯಣ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ