ಆ್ಯಪ್ನಗರ

ಕೊರೊನಾ ಸಂಕಷ್ಟದಲ್ಲೂ ಸುಲಿಗೆ ! ಖಾಸಗಿ ಆಸ್ಪತ್ರೆಗಳ ವಿರುದ್ಧ ವ್ಯಾಪಕ ಆಕ್ರೋಶ

ಕೊರೊನಾ ಸಂಕಷ್ಟದ ಅವಧಿಯಲ್ಲೂ ಖಾಸಗಿ ಆಸ್ಪತ್ರೆಗಳಿಂದ ಸುಲಿಗೆ ನಡೆಯುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಆದರೆ ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇದು ಜನರ ಆಕ್ರೋಶಕ್ಕೆ ಕಾರಣವಾಗುತ್ತಿದೆ.

Vijaya Karnataka Web 10 Jul 2020, 10:41 am
ಮಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ರಾಜ್ಯ ಸರ್ಕಾರ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆಗೆ ಅವಕಾಶ ಕಲ್ಪಿಸಿದೆ. ಆದರೆ ಸಂಕಷ್ಟದ ಅವಧಿಯಲ್ಲಿ ಸೋಂಕಿತರಿಗೆ ಹೆಚ್ಚುವರಿ ದರವನ್ನು ವಿಧಿಸುವ ಮೂಲಕ ಖಾಸಗಿ ಆಸ್ಪತ್ರೆಗಳು ಸುಲಿಗೆ ಮಾಡುತ್ತಿವೆ ಎಂಬ ಆರೋಪ ಕೇಳಿ ಬರುತ್ತಿವೆ. ಆಸ್ಪತ್ರೆಯ ಸುಲಿಗೆಗೆ ಬೇಸತ್ತು ರೋಗಿಯೊಬ್ಬರು ಚಿಕಿತ್ಸಾ ಬಿಲ್ ಪಾವತಿಸದೆ ಹೊರಬಂದ ಘಟನೆಯೂ ನಡೆದಿದೆ.
Vijaya Karnataka Web corona tratment


ಮಂಗಳೂರಿನ ಹಲವು ಖಾಸಗಿ ಆಸ್ಪತ್ರೆಗಳ ವಿರುದ್ಧ ಈ ರೀತಿಯ ಆರೋಪಗಳನ್ನು ಜನರು ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಆದರೆ ಇದನ್ನು ನಿಭಾಯಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪ್ರತಿದಿನ 200 ರಂತೆ ಕೊರೊನಾ ಪಾಸಿಟಿವ್‌ ಸೋಂಕಿತರು ಪತ್ತೆಯಾಗುತ್ತಿರುವ ಸಂದರ್ಭದಲ್ಲಿ ಜಿಲ್ಲಾ ಸರ್ಕಾರಿ ಕೋವಿಡ್‌ ಆಸ್ಪತ್ರೆಯಲ್ಲಿ ಇರುವುದು ಕೇವಲ 270 ಹಾಸಿಗೆಗಳು. ಪರಿಣಾಮ ಜನರು ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕಾದ ಪರಿಸ್ಥಿತಿ ಬಂದಿದೆ.

ರಾಮನಗರದಲ್ಲಿ ಮತ್ತೆ ಮುಂದುವರಿಯುತ್ತಾ ಸ್ವಯಂ ಪ್ರೇರಿತ ಲಾಕ್‌ಡೌನ್‌?

ಕೊರೊನಾ ಚಿಕಿತ್ಸೆಗಾಗಿ ಮಂಗಳೂರಿನ ಇಂಡಿಯಾನ ಎಂಬ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಈ ಕುರಿತಾಗಿ ಗಂಭೀರ ಆರೋಪ ಮಾಡಿದ್ದಾರೆ. "ಜೂನ್ 30 ರಂದು ಮಂಗಳೂರಿನ ಇಂಡಿಯಾನ ಆಸ್ಪತ್ರೆಯಲ್ಲಿ ಬಿ. ಜಕ್ರಿ ಎಂಬುವವರು ಕೊರೊನಾ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ದಾಖಲಾದ ಮೂರು ದಿನಗಳ ಬಳಿಕ ಇವರಲ್ಲಿ ಕೊರೊನಾ ಸೋಂಕು ಲಕ್ಷಣಗಳು ಇರಲಿಲ್ಲ. ಹೀಗಿದ್ದರೂ ಒಟ್ಟು ಹತ್ತು ದಿನಗಳ ಕಾಲ ಆಸ್ಪತ್ರೆಯಲ್ಲಿ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಿದ್ದು, ಯಾವುದೇ ರೀತಿಯ ಸೌಲಭ್ಯಗಳನ್ನು ನೀಡಿಲ್ಲ. ಆದರೆ 1 ಲಕ್ಷ 17 ಸಾವಿರ ಬಿಲ್ ಮಾಡಿದ್ದಾರೆ" ಎಂದು ಅವರು ಆರೋಪಿಸಿದ್ದಾರೆ.

ಆದರೆ ಈ ಆರೋಪವನ್ನು ಆಸ್ಪತ್ರೆಯ ಆಡಳಿತ ಮಂಡಳಿ ನಿರಾಕರಿಸಿದೆ."ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚುವರಿ ದರವನ್ನು ಪಡೆದುಕೊಂಡಿಲ್ಲ ಎಂದು ಸಮರ್ಥನೆ ನೀಡಿದೆ. ಓರ್ವ ರೋಗಿ ಉಳಿದುಕೊಳ್ಳುವ ಕೊಠಡಿಗೆ ಸರ್ಕಾರ 12,500 ರೂಪಾಯಿ ಪ್ರತಿದಿನದ ದರ ಎಂದು ನಿಗದಿ ಪಡಿಸಿದೆ. ನೇರವಾಗಿ ಖಾಸಗಿ ಆಸ್ಪತ್ರೆಗೆ ಬಂದ ರೋಗಿಗೆ ಈ ದರವನ್ನು ವಿಧಿಸಲಾಗುತ್ತದೆ. ಅವರಿಗೆ ಉಚಿತ ಚಿಕಿತ್ಸೆ ಬೇಕಾದರೆ ಸರ್ಕಾರಿ ಆಸ್ಪತ್ರೆಗೆ ಹೋಗಬಹುದು ಎಂದು ಆರಂಭದಲ್ಲೇ ಸೂಚಿಸಿದ್ದೇವೆ. ರೋಗಿಗೆ ಹೆಚ್ಚುವರಿ ದರ ಪಾವತಿ ಮಾಡುವಂತೆ ಒತ್ತಡ ಹೇರಿಲ್ಲ. ಸರ್ಕಾರದ ನಿಯಮದಂತೆ ನಡೆದುಕೊಂಡಿದ್ದೇವೆ" ಎನ್ನುತ್ತಾರೆ ಇಂಡಿಯಾನ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಯೂಸುಫ್ ಕುಂಬ್ಲೆ.

ಕೊರೊನಾ ಲೈವ್ ಅಪ್ಡೇಟ್ಸ್: ದೇಶದಲ್ಲಿ 21,623 ಮಂದಿ ಬಲಿ! ರಾಜ್ಯ 6ನೇ ಸ್ಥಾನಕ್ಕೆ ಏರಿಕೆ!

ಆದರೆ ಖಾಸಗಿ ಆಸ್ಪತ್ರೆಯ ನಡೆಗೆ ಸಾಮಾಜಿಕ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲೂ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಕೊರೊನಾದಂತಹ ಸಂಕಷ್ಟದ ಅವಧಿಯಲ್ಲೂ ಖಾಸಗಿ ಆಸ್ಪತ್ರೆಗಳು ಸುಳಿಗೆ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ. ಜಿಲ್ಲಾಡಳಿತದ ಮಧ್ಯ ಪ್ರದೇಶಕ್ಕೆ ಆಗ್ರಹಿಸಿದ್ದಾರೆ.

“ದಕ್ಷಿಣ ಕನ್ನಡ ಜಿಲ್ಲಾಡಳಿತ ಕೊರೊನಾ ನಿಭಾಯಿಸುವುದರಲ್ಲಿ ಸಂಪೂರ್ಣ ವಿಫಲವಾಗಿದೆ. ಜಿಲ್ಲೆಯಲ್ಲಿ ಕನಿಷ್ಟ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು‌ ಸಿದ್ದಪಡಿಸಿಲ್ಲ. ಸರ್ಕಾರಿ ಆಸ್ಪತ್ರೆಯಲ್ಲಿ ಇರುವುದು ಕೇವಲ 270 ಬೆಡ್‌ಗಳು ಮಾತ್ರ, ಉಳಿದವರು ಖಾಸಗಿ ಆಸ್ಪತ್ರೆಯನ್ನು ಅವಲಂಬಿಸುವ ಸ್ಥಿತಿ ಇದೆ. ಆದರೆ ಖಾಸಗಿ ಆಸ್ಪತ್ರೆಗಳ ಮೇಲೆ ಜಿಲ್ಲಾಡಳಿತಕ್ಕೆ ಯಾವುದೇ ಹಿಡಿತ ಇಲ್ಲ. ಸಿಂಗಲ್‌ ರೂಂನಲ್ಲಿ ಯಾವುದೇ ಸೌಲಭ್ಯ ಇಲ್ಲದೆ, ಹೆಚ್ಚುವರಿ ದರವನ್ನು ವಸೂಲಿ ಮಾಡುತ್ತಿದ್ದಾರೆ. ನಿಯಮಗಳನ್ನು ಮೀರಿ ಹತ್ತು ದಿನಗಳ ಕಾಲ ಹೆಚ್ಚುವರಿಯಾಗಿ ಇರಬೇಕು ಎಂದು ಒತ್ತಾಯ ಮಾಡುತ್ತಿದ್ದು ಬಲವಂತದ ವಸೂಲಿ ನಡೆಯುತ್ತಿದೆ. ಆದರೆ ಜನರ ಆರೋಪಗಳಿಗೆ ಜಿಲ್ಲಾಡಳಿತ ಯಾವುದೇ ಸ್ಪಂದನೆ ನೀಡುತ್ತಿಲ್ಲ. ಇದರಿಂದ ಖಾಸಗಿ ಆಸ್ಪತ್ರೆಗಳಿಗೆ ಬೇಕಾಬಿಟ್ಟಿ ನಡೆದುಕೊಳ್ಳಲು ಮುಕ್ತ ವಾತಾವರಣ ಸಿಕ್ಕಿಂದಂತಾಗಿದೆ" ಎನ್ನುತ್ತಾರೆ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ.

ಬೆಂಗಳೂರಿನಲ್ಲಿ ಒಂದೇ ದಿನ 1373 ಕೊರೊನಾ ಪ್ರಕರಣ: ರಾಜ್ಯಕ್ಕೆ ಹೋಲಿಸಿದರೆ ನಗರದಲ್ಲೇ ಶೇ 44ರಷ್ಟು ಸೋಂಕಿತರು!

ಒಟ್ಟಿನಲ್ಲಿ ಸರ್ಕಾರ ಈ ಕಡೆಗೆ ಗಮನ ಹರಿಸಬೇಕಾಗಿದೆ. ಕೊರೊನಾ ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಮತ್ತಷ್ಟು ಸಂಕಷ್ಟ ನೀಡುವುದು ಅಮಾನವೀಯ. ಈ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳು ಸರ್ಕಾರದ ನಿಯಮಗಳನ್ನು ಮೀರಿ ನಡೆಯದಂತೆ ಎಚ್ಚರಿಕೆ ವಹಿಸಬೇಕಾಗಿದೆ. ಅಲ್ಲದೆ ಸರ್ಕಾರ ಆಸ್ಪತ್ರೆಗಳಲ್ಲಿ ಬೆಡ್‌ಗಳ ಸಂಖ್ಯೆಯನ್ನು ಹಾಗೂ ಸೂಕ್ತ ಸೌಲಭ್ಯಗಳನ್ನು ಕಲ್ಪಿಸಬೇಕಾಗಿದೆ. ಇದು ಕೇವಲ ಮಂಗಳೂರು ಮಾತ್ರವಲ್ಲ, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂತಹ ಆರೋಪಗಳು ಕೇಳಿಬರುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೂಡಲೇ ಗಮನಹರಿಸಬೇಕಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ