ಆ್ಯಪ್ನಗರ

ಪರಿಷತ್‌ ಚುನಾವಣೆ: ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಆಘಾತ ನೀಡಿದ 'ಮಹಾ ವಿಕಾಸ್‌ ಆಘಾಡಿ'!

ಆರು ವಿಧಾನ ಪರಿಷತ್‌ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಕೇವಲ ಒಂದು ಸ್ಥಾನ ಗೆದ್ದಿದ್ದರೆ, ಆಡಳಿತರೂಢ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್‌ ನಾಲ್ಕು ಸ್ಥಾನಗಳನ್ನು ಬುಟ್ಟಿಗೆ ಹಾಕಿಕೊಂಡಿವೆ. ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಜಯ ಸಾಧಿಸಿದ್ದಾರೆ.

Agencies 4 Dec 2020, 4:44 pm
ಮುಂಬಯಿ: ಮಹಾರಾಷ್ಟ್ರದ ವಿಧಾನ ಪರಿಷತ್‌ನ ಆರು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಭಾರಿ ಹಿನ್ನಡೆ ಅನುಭವಿಸಿದೆ. ಆರರಲ್ಲಿ ಬಿಜೆಪಿ ಕೇವಲ ಒಂದು ಸ್ಥಾನ ಗೆದ್ದಿದ್ದರೆ, ಆಡಳಿತರೂಢ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್‌ ನಾಲ್ಕು ಸ್ಥಾನಗಳನ್ನು ಬುಟ್ಟಿಗೆ ಹಾಕಿಕೊಂಡಿವೆ. ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಜಯ ಸಾಧಿಸಿದ್ದಾರೆ.
Vijaya Karnataka Web Devendra-Fadnavis


ಶಿವಸೇನೆ ಮಾತ್ರ ಒಂದೇ ಒಂದು ಸ್ಥಾನವನ್ನೂ ಗೆದ್ದಿಲ್ಲ. ಪಕ್ಷದ ಏಕೈಕ ಅಭ್ಯರ್ಥಿ ಅಮರಾವತಿಯಲ್ಲಿ ಪಕ್ಷೇತರ ಅಭ್ಯರ್ಥಿ ವಿರುದ್ಧ ಸೋಲುಂಡಿದ್ದಾರೆ. ಆದರೆ ಮೈತ್ರಿ ಪಕ್ಷಗಳಾದ ಎನ್‌ಸಿಪಿ ಮತ್ತು ಕಾಂಗ್ರೆಸ್‌ ನಾಲ್ಕು ಸ್ಥಾನ ಗೆದ್ದುಕೊಂಡಿವೆ.

ಬಿಜೆಪಿ ಧುಲೆ - ನಂದುರ್‌ಬರ್‌ ಕ್ಷೇತ್ರವನ್ನು ಮಾತ್ರ ಗೆದ್ದುಕೊಂಡಿದೆ. ಅಚ್ಚರಿಯ ಸಂಗತಿ ಎಂದರೆ ಬಿಜೆಪಿಯ ಭದ್ರಕೋಟೆ ಎಂದೇ ಅಂದುಕೊಳ್ಳಲಾಗಿದ್ದ ಪದವಿಧರ ಕ್ಷೇತ್ರಗಳಲ್ಲಿ ಪಕ್ಷ ನೆಲಕಚ್ಚಿದೆ. ಅದರಲ್ಲೂ ನಾಗ್ಪುರದಲ್ಲಿ ಸೋತು ಪಕ್ಷ ಭಾರಿ ಮುಖಭಂಗ ಅನುಭವಿಸಿದೆ. ಆರ್‌ಎಸ್‌ಎಸ್‌ ಕೇಂದ್ರ ಕಚೇರಿ ಇರುವ ನಾಗ್ಪುರ ಬಿಜೆಪಿ ಭದ್ರಕೋಟೆ. ಜೊತೆಗೆ ಈ ಸ್ಥಾನವನ್ನು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಪ್ರತಿನಿಧಿಸುತ್ತಿದ್ದರು. ಅಷ್ಟೇ ಅಲ್ಲ, ಮಾಜಿ ಸಿಎಂ ದೇವೇಂದ್ರ ಫಡ್ನವೀಸ್‌ ತಂದೆ ಗಂಗಾಧರ್‌ ರಾವ್‌ ಫಡ್ನವೀಸ್‌ ಕೂಡ ಇದೇ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. 1989ರಲ್ಲಿ ಮೊದಲ ಬಾರಿಗೆ ಈ ಕ್ಷೇತ್ರದಿಂದ ಗೆದ್ದಿದ್ದ ಗಡ್ಕರಿ ನಂತರ ಸತತ ನಾಲ್ಕು ಬಾರಿ ಜಯ ಸಾಧಿಸಿದ್ದರು. 2014ರಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವವರೆಗೂ ಅವರು ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.

ಈ ಬಾರಿ ಕೂಡ ಇಲ್ಲಿ ಬಿಜೆಪಿ ಬಿರುಸಿನ ಪ್ರಚಾರ ನಡೆಸಿತ್ತು. ಫಡ್ನವೀಸ್‌, ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್‌ ಪಾಟೀಲ್‌ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದರು. ಆದರೂ ಇಲ್ಲಿ ಪಕ್ಷ ಸೋಲು ಕಂಡಿದೆ. ಪುಣೆಯಲ್ಲೂ ಇದೇ ರೀತಿ ಅಬ್ಬರದ ಮತಪ್ರಚಾರ ನಡೆಸಲಾಗಿತ್ತು. ಅಲ್ಲೂ ಮೈತ್ರಿ ಪಕ್ಷಗಳು ಬಿಜೆಪಿಗೆ ಸೋಲುಣಿಸಿವೆ.

“ಮಹಾರಾಷ್ಟ್ರ ವಿಧಾನ ಪರಿಷತ್‌ ಚುನಾವಣೆಯ ಫಲಿತಾಂಶ ನಮ್ಮ ನಿರೀಕ್ಷೆಗೆ ತಕ್ಕಂತೆ ಬಂದಿಲ್ಲ. ನಾವು ಹೆಚ್ಚಿನ ಸ್ಥಾನಗಳನ್ನು ನಿರೀಕ್ಷಿಸಿದ್ದೆವು. ಆದರೆ ಒಂದೇ ಸ್ಥಾನವನ್ನು ಗೆದ್ದುಕೊಂಡಿದ್ದೇವೆ. ಮೂರು ಪಕ್ಷಗಳ (ಮಹಾ ವಿಕಾಸ್‌ ಆಘಾಡಿ) ಒಟ್ಟು ಶಕ್ತಿಯನ್ನು ನಾವು ತಪ್ಪಾಗಿ ಅಂದಾಜಿಸಿದ್ದೆವು,” ಎಂದು ಫಡ್ನವೀಸ್‌ ಫಲಿತಾಂಶದ ಬಳಿಕ ಪ್ರತಿಕ್ರಿಯೆ ನೀಡಿದ್ದಾರೆ.

ಮಂಗಳವಾರ ಆರೂ ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಈ ಚುನಾವಣೆಯನ್ನು ಆಡಳಿತರೂಢ ಮೈತ್ರಿಕೂಟ ಮತ್ತು ವಿರೋಧ ಪಕ್ಷ ಬಿಜೆಪಿ ಪ್ರತಿಷ್ಠೆಯಾಗಿ ಪರಿಗಣಿಸಿದ್ದವು. ಎನ್‌ಸಿಪಿ ಮತ್ತು ಕಾಂಗ್ರೆಸ್‌ ತಲಾ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರೆ, ಶಿವಸೇನೆ ಒಂದು ಕ್ಷೇತ್ರದಲ್ಲಿ ಮಾತ್ರ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ಬಿಜೆಪಿ ನಾಲ್ಕು ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡಿತ್ತು.

ಎನ್‌ಸಿಪಿ ತಾನು ಸ್ಪರ್ಧಿಸಿದ ಔರಂಗಬಾದ್‌ ಹಾಗೂ ಪುಣೆ ಪದವಿಧರ ಕ್ಷೇತ್ರಗಳೆರಡನ್ನೂ ಗೆದ್ದುಕೊಂಡಿದೆ. ನಾಗ್ಪುರ ಪದವಿಧರ ಕ್ಷೇತ್ರ ಮತ್ತು ಪುಣೆ ಶಿಕ್ಷಕರ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿದೆ.

"ಫಲಿತಾಂಶವು ಮಹಾ ವಿಕಾಸ್‌ ಆಘಾಡಿ ಸರಕಾರದ ಒಂದು ವರ್ಷದ ಸಾಧನೆಯ ಪ್ರತಿಬಿಂಬವಾವಾಗಿದೆ," ಎಂದು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್ ಗೆಲುವಿನ ಬಳಿಕ‌ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ