ಆ್ಯಪ್ನಗರ

ಸಿದ್ದರಾಮಯ್ಯ ವಿರುದ್ಧ ಡಿನೋಟಿಫಿಕೇಶನ್‌ ಪ್ರಕರಣಕ್ಕೆ ಮರು ಜೀವ

ಅಕ್ರಮ ಭೂ ಒತ್ತುವರಿ, ಸರಕಾರಿ ಅಧಿಕಾರ ದುರ್ಬಳಕೆ ಆರೋಪದಡಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣ, ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ.

Vijaya Karnataka Web 11 May 2019, 6:02 pm
ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಡಿನೋಟಿಫಿಕೇಶನ್ ಮತ್ತು ಭೂ ಕಬಳಿಕೆ ಪ್ರಕರಣಕ್ಕೆ ಮರು ಜೀವ ಸಿಕ್ಕಿದೆ. ಅಕ್ರಮ ಭೂ ಒತ್ತುವರಿ, ಸರಕಾರಿ ಅಧಿಕಾರ ದುರ್ಬಳಕೆ ಆರೋಪದಡಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣ, ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ.
Vijaya Karnataka Web Siddaramaiah


ಮೈಸೂರು ನ್ಯಾಯಾಲಯದಿಂದ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆ ಮಾಡಿ ಮೈಸೂರಿನ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾರ ಯಶವಂತ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಪ್ರಕರಣ ಸಂಬಂಧ ಲಕ್ಷ್ಮೀಪುರಂ ಠಾಣೆ ಪೊಲೀಸರು ಕಳೆದ 2018 ರ ನ.3 ರಂದು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ ದೂರುದಾರ ಆರ್‌ಟಿಐ ಕಾರ್ಯಕರ್ತ ಗಂಗರಾಜು ಅವರು, ಬಿ ರಿಪೋರ್ಟ್ ವಿರುದ್ದ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ದಾಖಲಿಸಿಕೊಂಡ ನ್ಯಾಯಾಧೀಶರು, ಅಗತ್ಯ ದಾಖಲೆಗಳ ಪರಿಶೀಲನೆಯೊಂದಿಗೆ ವಿಚಾರಣೆ ನಡೆಸಿದರು. ಅಲ್ಲದೇ ಅಕ್ರಮ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಹಾಲಿ ಶಾಸಕರಾಗಿರುವ ಹಿನ್ನೆಲೆಯಲ್ಲಿ ಅವರ ವಿರುದ್ದ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಸಲು ನ್ಯಾಯಾಧೀಶರು ಕಳೆದ ಮೇ 10 ರಂದು ವರ್ಗಾವಣೆ ಮಾಡಿದ್ದಾರೆ. ಪ್ರಕರಣದ ವಿಚಾರಣೆ ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮುಂದಿನ ಜೂನ್ 10 ರಂದು ನಡೆಯಲಿದೆ.

ಕೇಸ್ ವಿವರ: 1988ರಲ್ಲಿ ಆಗಿನ ನಗರಾಭಿವೃದ್ಧಿ ವಿಶ್ವಸ್ಥ ಮಂಡಳಿ (ಮುಡಾ) ವಿಜಯನಗರ 2ನೇ ಹಂತದ ಬಡಾವಣೆ ನಿರ್ಮಾಣಕ್ಕೆ ಹಿನಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿದ್ದ 535 ಎಕರೆ ಪ್ರದೇಶವನ್ನು ವಶಪಡಿಸಿಕೊಂಡಿತ್ತು. 10 ವರ್ಷಗಳ ಬಳಿಕ ಬಡಾವಣೆ ರಚಿಸಿ ನಿವೇಶನ ಹಂಚಿಕೆಯಾದ ನಂತರ ಸಿದ್ದರಾಮಯ್ಯ ಅವರ ಆಪ್ತ ಪಾಪಣ್ಣ (ಆಗಿನ ಹಿನಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ) ಅವರು ತಮ್ಮ ಸಂಬಂಧಿಕರಿಗೆ ಸೇರಿದ 30 ಗುಂಟೆ ಜಮೀನಿನನ್ನು ಕೈ ಬಿಡುವಂತೆ ಮುಡಾಗೆ ಅರ್ಜಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿ ಮುಡಾ ಈ ಜಾಗವನ್ನು ಡಿನೋಟಿಫೈ ಮಾಡಿತ್ತು.

ಡಿನೋಟಿಫೈ ಮಾಡಿದ್ದಾರೆನ್ನಲಾದ ಜಮೀನಿನಲ್ಲಿ ಸಾಕಮ್ಮ ಅವರಿಗೆ ಸೇರಿದ್ದ 10 ಗುಂಟೆ ನಿವೇಶನವನ್ನು ಸಿದ್ದರಾಮಯ್ಯ ಅವರು ಖರೀದಿಸಿದ್ದಲ್ಲದೆ, ಪಕ್ಕದ ಜಮೀನನ್ನು ಅತಿಕ್ರಮಿಸಿ ಹೆಚ್ಚುವರಿ ಅಳತೆಯಲ್ಲಿ ಮನೆ ಕಟ್ಟಿದ್ದರು. ಕೆಲ ವರ್ಷಗಳ ಬಳಿಕ ಬೇರೆಯವರಿಗೆ ಮಾರಾಟ ಮಾಡಿದ್ದರು. ಈ ಅಕ್ರಮದಲ್ಲಿ ಮುಡಾ ಮಾಜಿ ಅಧ್ಯಕ್ಷರು ಸೇರಿದಂತೆ ಅಧಿಕಾರಿಗಳು ಶಾಮೀಲಾಗಿ ಸಹಕರಿಸಿದ್ದಾರೆ. ನೋಟಿಫೈ ಮಾಡಿದ ಸಂದರ್ಭದಲ್ಲೆ ಸಾಕಮ್ಮ ಅವರಿಗೆ ಬದಲಿ ನಿವೇಶನವನ್ನು ಮುಡಾದಿಂದ ನೀಡಲಾಗಿತ್ತು. ಆದರೆ ಕಳೆದ ಡಿಸೆಂಬರ್ (2017)ನಲ್ಲಿ ಮತ್ತೆ ನಿವೇಶನ ನೀಡುವಂತೆ ಸಾಕಮ್ಮ ಕುಟುಂಬದವರು ಅರ್ಜಿ ಸಲ್ಲಿಸಿದ್ದು ಅದನ್ನೂ ಮುಡಾ ಪುರಸ್ಕರಿಸಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅಂದಿನ ಮುಡಾ ಅಧ್ಯಕ್ಷ ಸಿ. ಬಸವೇಗೌಡ, ಅಂದಿನ ಮುಡಾ ಆಯುಕ್ತ ಧ್ರುವಕುಮಾರ್, ಸದ್ಯ ಮುಡಾ ಆಯುಕ್ತ ಪಿ.ಎಸ್ ಕಾಂತರಾಜ್ ವಿರುದ್ದ ಗಂಗರಾಜು ನ್ಯಾಯಾಲಯದಲ್ಲಿ ಖಾಸಗಿ ದೂರು ನೀಡಿದ್ದರು.

ನ್ಯಾಯಾಲಯದ ಸೂಚನೆ ಮೇರೆಗೆ ಲಕ್ಷ್ಮೀಪುರಂ ಠಾಣೆ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದು, ಕಳೆದ 2018 ರ ನ. 3ರಂದು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಬಿ ರಿಪೋರ್ಟ್ ಪ್ರಶ್ನಿಸಿ ಗಂಗರಾಜು ಮೇಲ್ಮನವಿ ಸಲ್ಲಿಸಿದ ಪರಿಣಾಮ ವಿಚಾರಣೆ ನಡೆಸಿದ ನ್ಯಾಯಾಧೀಶರು, ದೂರುದಾರ ಸಲ್ಲಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸಿ, ಪ್ರಕರಣದ ವಿಚಾರಣೆಯನ್ನು ವರ್ಗಾವಣೆ ಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ