ಮೈಸೂರು: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮನೆಯಲ್ಲಿಯೇ ಓಡಾಡಿಕೊಂಡು ಇದ್ದಾನೆ. ಅವನನ್ನು ಬಂಧಿಸದೇ ರಾಜ್ಯ ಸರ್ಕಾರ ನಾಟಕ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಸೋಮವಾರ ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಭ್ರಷ್ಟಾಚಾರ, ಅಕ್ರಮ ಆಸ್ತಿ ಗಳಿಕೆ ಆರೋಪ ಹೊತ್ತಿರುವ ಶಾಸಕ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆಗಳ ನಿಗಮ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪನನ್ನು ಸರ್ಕಾರ ರಕ್ಷಿಸುತ್ತಿದೆ. ವಿರೂಪಾಕ್ಷಪ್ಪ ರಾಜಾರೋಷವಾಗಿ ಓಡಾಡುತ್ತಿದ್ದಾರೆ. ಭ್ರಷ್ಟ ಸರ್ಕಾರ ಅವರ ರಕ್ಷಣೆ ಮಾಡ್ತಿದೆ. ಆತ ಎಲ್ಲಿದ್ದಾನೆಂದು ಸರ್ಕಾರಕ್ಕೆ ಗೊತ್ತಿದೆ. ಆತ ತನ್ನ ಮನೆಯಲ್ಲೇ ಓಡಾಡಿಕೊಂಡಿದ್ದಾನೆ. ಅವನನ್ನು ಬಂಧಿಸದೇ ರಾಜ್ಯ ಸರ್ಕಾರ ನಾಟಕ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ರಾಜ್ಯ ಸರ್ಕಾರವು ಮಾಡಾಳ್ ವಿರೂಪಾಕ್ಷಪ್ಪ ವಿಚಾರದಲ್ಲಿ ಜನರನ್ನು ದಾರಿತಪ್ಪಿಸುತ್ತಿದೆ. ಲುಕ್ಔಟ್ ನೋಟಿಸ್ ಜಾರಿ ಹೆಸರಿನಲ್ಲಿ ಜನರ ಗಮನ ಬೇರೆಡೆಗೆ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ಶೀಘ್ರವೇ ಬಂಧನಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ನಾವು ಲೋಕಾಯುಕ್ತ ಬಂದ್ ಮಾಡಿಲ್ಲ
ನಮ್ಮ ಸರ್ಕಾರ ಇದ್ದಾಗ ಲೋಕಾಯುಕ್ತವನ್ನು ಬಂದ್ ಮಾಡಿಲ್ಲ. ನಾನು ಲೋಕಾಯುಕ್ತ ಬಂದ್ ಮಾಡಿದ್ದರೇ ಇವತ್ತೇ ರಾಜೀನಾಮೆ ಕೊಡುತ್ತೇನೆ. ನಾವು ಭ್ರಷ್ಟಾಚಾರ ನಿಗ್ರಹಕ್ಕಾಗಿ ಎಸಿಬಿ ರಚನೆ ಮಾಡಿದ್ದೇ ಅಷ್ಟೇ. ಲೋಕಾಯುಕ್ತದ ಯಾವ ಅಧಿಕಾರವನ್ನು ಕಿತ್ತುಕೊಂಡಿಲ್ಲ. ನಮ್ಮ ಕಾಲದಲ್ಲೂ ಲೋಕಾಯುಕ್ತರು ಇದ್ದರು. ಎಲ್ಲಾ ಸತ್ಯ ಗೊತ್ತಿದ್ದರೂ ಬೊಮ್ಮಾಯಿ ಸುಳ್ಳು ಹೇಳುತ್ತಿದ್ದಾರೆ. ಎಸಿಬಿ ರದ್ದು ಮಾಡುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ, ಎಸಿಬಿ ರದ್ದು ಮಾಡಿದ್ದು ಬಿಜೆಪಿ ಸರ್ಕಾರವಲ್ಲ. ನ್ಯಾಯಾಲಯ ರದ್ದು ಮಾಡಿದೆ ಎಂದು ಸ್ಪಷ್ಟ ಪಡಿಸಿದರು.
ಬಿಜೆಪಿಯವರಿಗೆ ಸುಳ್ಳು ಹೇಳುವುದು ಚಟ ಆಗಿದೆ. ಸುಳ್ಳೇ ಬಿಜೆಪಿ ಮನೆ ದೇವರು. ಹೀಗಾಗಿ, ಲೋಕಾಯುಕ್ತ ವಿಚಾರದಲ್ಲಿ ಬಿಜೆಪಿಯವರು ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆಂದು. ಅದೇ ರೀತಿ ಅಭಿವೃದ್ಧಿ ವಿಚಾರದಲ್ಲಿಯೂ ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ಸಿದ್ಧರಾಮಯ್ಯ ಹರಿಹಾಯ್ದರು.
ರಾಜ್ಯ ಸರ್ಕಾರವು ಮಾಡಾಳ್ ವಿರೂಪಾಕ್ಷಪ್ಪ ವಿಚಾರದಲ್ಲಿ ಜನರನ್ನು ದಾರಿತಪ್ಪಿಸುತ್ತಿದೆ. ಲುಕ್ಔಟ್ ನೋಟಿಸ್ ಜಾರಿ ಹೆಸರಿನಲ್ಲಿ ಜನರ ಗಮನ ಬೇರೆಡೆಗೆ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ಶೀಘ್ರವೇ ಬಂಧನಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.