ಆ್ಯಪ್ನಗರ

ಅತ್ಯಾಚಾರಕ್ಕೀಡಾದ 9ರ ಬಾಲಕಿ ಸಾವು: ಪ್ರಕರಣ ನಿಗೂಢ

ಗಲ್ಲು ಶಿಕ್ಷೆಯ ಸುಗ್ರೀವಾಜ್ಞೆ ಬೆನ್ನಿಗೇ ಮೈಸೂರಿನಲ್ಲೊಂದು ಹೇಯ ಕೃತ್ಯ

Vijaya Karnataka 24 Apr 2018, 7:37 am
ಮೈಸೂರು: 12 ವರ್ಷದೊಳಗಿನ ಹೆಣ್ಮಕ್ಕಳ ಮೇಲೆ ಅತ್ಯಾಚಾರ ಎಸಗುವ ದುಷ್ಕರ್ಮಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಸುಗ್ರಿವಾಜ್ಞೆ ಹೊರಬಿದ್ದ ಬೆನ್ನಲ್ಲೇ ಸಾಂಸ್ಕೃತಿಕ ನಗರ ಮೈಸೂರಿನಲ್ಲಿ 9 ವರ್ಷದ ಬಾಲೆ ಮೇಲೆ ಅತ್ಯಾಚಾರ ಎಸಗಿ ಆಕೆಯ ಸಾವಿಗೆ ಕಾರಣವಾದ ಹೇಯ ಘಟನೆ ನಡೆದಿದೆ.
Vijaya Karnataka Web rape


ನಗರದ ಎನ್‌.ಆರ್‌. ಠಾಣೆ ವ್ಯಾಪ್ತಿಯ ಕೆಸರೆ ಬಡಾವಣೆಯಲ್ಲಿ ಈ ದುಷ್ಕೃತ್ಯ ನಡೆದಿದ್ದು, 4ನೇ ತರಗತಿ ಓದುತ್ತಿದ್ದ ಬಾಲಕಿ ತೀವ್ರ ರಕ್ತಸ್ರಾವದಿಂದ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾಳೆ. ಪ್ರಕರಣ ತಡವಾಗಿ ಬೆಳಕಿಗೆ ಬರುವುದರ ಜತೆಗೆ ಖಾಸಗಿ ಮತ್ತು ಸರಕಾರಿ ಆಸ್ಪತ್ರೆಯಲ್ಲಿ ಸಕಾಲಕ್ಕೆ ಚಿಕಿತ್ಸೆ ದೊರೆಯದ ಹಿನ್ನೆಲೆಯಲ್ಲಿ ಅಮಾಯಕ ಬಾಲಕಿ ದಾರುಣ ಸಾವು ಕಂಡಿದ್ದಾಳೆ ಎಂದು ಹೇಳಲಾಗಿದೆ.

ಭಾನುವಾರ ಸಂಜೆ ಬಾಲಕಿ ಆಟವಾಡಲು ತೆರಳಿದ್ದು, ಈ ಸಂದರ್ಭದಲ್ಲಿ ಅತ್ಯಾಚಾರ ನಡೆದಿದೆ ಎಂದು ಹೇಳಲಾಗಿದೆ. ಆದರೆ ತನ್ನ ಮೇಲೆ ನಡೆದ ಪೈಶಾಚಿಕ ದಾಳಿ ಬಗ್ಗೆ ಅರಿವಿಲ್ಲದ ಬಾಲಕಿ, ಪೋಷಕರಿಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ಸೋಮವಾರ ಬೆಳಗ್ಗೆ ಬಾಲಕಿಗೆ ತಲೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೋಷಕರು ಮಾತ್ರೆ ನೀಡಿದ್ದರು. ಇದಾದ ಬಳಿಕ ಸ್ವಲ್ಪ ಹೊತ್ತಿನಲ್ಲಿ ವಾಂತಿಯಾಗಿ ಪ್ರಜ್ಞೆ ತಪ್ಪಿದ್ದಳು. ತಕ್ಷಣ ಸಮೀಪದ ನರ್ಸಿಂಗ್‌ ಹೋಮ್‌ಗೆ ಕರೆದುಕೊಂಡು ಹೋಗಿದ್ದರು. ಆದರೆ ಅಲ್ಲಿ ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು ಅತ್ಯಾಚಾರ ನಡೆದಿರುವ ವಿಷಯವನ್ನು ತಿಳಿಸಿದ್ದರು. ಹೆಚ್ಚಿನ ಚಿಕಿತ್ಸೆ ಗಾಗಿ ದೊಡ್ಡ ಆಸ್ಪತ್ರೆಗೆ ತೆಗೆದುಕೊಂಡು ಹೋಗುವಂತೆ ಶಿಫಾರಸು ಮಾಡಿದ್ದರು.

ಪೋಷಕರು ಅಲ್ಲಿಂದ ಕೆಆರ್‌ ಆಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸುವಂತೆ ಮನವಿ ಮಾಡಿದ್ದರು. ಆದರೆ,ಅಲ್ಲಿನ ವೈದ್ಯರು ಬಾಲಕಿಗೆ ತೀವ್ರ ರಕ್ತಸ್ರಾವವಾಗಿರುವುದರಿಂದ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ, ಖಾಸಗಿ ಆಸ್ಪತ್ರೆಗೆ ಸೇರಿಸುವಂತೆ ತಿಳಿಸಿದ್ದಾರೆ ಎನ್ನಲಾಗಿದೆ. ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ಹಾದಿಯಲ್ಲಿ ಬಾಲಕಿ ಮೃತಪಟ್ಟಿದ್ದಾಳೆ.

ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಸಂಗತಿಯನ್ನು ತಿಳಿದು ವೈದ್ಯರು, ಎನ್‌.ಆರ್‌. ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪೋಷಕರ ಬಳಿ ಮಾಹಿತಿ ಸಂಗ್ರಹಿಸಿದ್ದು, ಅತ್ಯಾಚಾರವಾಗಿರುವ ಬಗ್ಗೆ ಗೊತ್ತಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ