ಆ್ಯಪ್ನಗರ

ತಮಿಳುನಾಡಿಗೆ ನೀರು: ಹೆದ್ದಾರಿ ತಡೆ

ಕಬಿನಿ ಅಣೆಕಟ್ಟೆಯಿಂದ ತಮಿಳುನಾಡಿಗೆ ಹರಿಸಲಾಗುತ್ತಿರುವ ನೀರನ್ನು ಸ್ಥಗಿತಗೊಳಿಸಿ ತಕ್ಷ ಣ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಬಿಡುಗಡೆ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ‍್ಯಕರ್ತರು ಶನಿವಾರ ನಗರದಲ್ಲಿ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

Vijaya Karnataka 28 Jul 2019, 5:00 am
ನಂಜನಗೂಡು : ಕಬಿನಿ ಅಣೆಕಟ್ಟೆಯಿಂದ ತಮಿಳುನಾಡಿಗೆ ಹರಿಸಲಾಗುತ್ತಿರುವ ನೀರನ್ನು ಸ್ಥಗಿತಗೊಳಿಸಿ ತಕ್ಷ ಣ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಬಿಡುಗಡೆ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ‍್ಯಕರ್ತರು ಶನಿವಾರ ನಗರದಲ್ಲಿ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
Vijaya Karnataka Web water to tamil nadu highway barrier
ತಮಿಳುನಾಡಿಗೆ ನೀರು: ಹೆದ್ದಾರಿ ತಡೆ


ಬೆಳಗ್ಗೆ 11ರ ಸಮಯದಲ್ಲಿ ನಗರದ ವಿಶ್ವೇಶ್ವರಯ್ಯ ವೃತ್ತದಲ್ಲಿ ಸಂಘಟಿತರಾದ ನೂರಾರು ಸಂಖ್ಯೆಯ ರೈತರು ರಾಷ್ಟ್ರೀಯ ಹೆದ್ದಾರಿ 766 ಗುಂಡ್ಲುಪೇಟೆ ಮೈಸೂರು ಮಾರ್ಗವನ್ನು ಬಂದ್‌ ಮಾಡಿ ಧರಣಿ ಆರಂಭಿಸಿ ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.

ಕಬ್ಬು ಬೆಳೆಗಾರರ ಸಂಘದ ರಾಜ್ಯಾದ್ಯಕ್ಷ ಕುರುಬೂರು ಶಾಂತಕುಮಾರ್‌ ಮಾತನಾಡಿ, ಕಳೆದ ಒಂದುವಾರದಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಕಬಿನಿ ಅಣೆಕಟ್ಟೆಯಿಂದ ನಿರಂತರವಾಗಿ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ. ಅಣೆಕಟ್ಟೆಗೆ ಬರುವ ನೀರಿನ ಒಳಹರಿವು ಕಡಿಮೆಯಿದ್ದರೂ ಹೊರಕ್ಕೆ ಹೆಚ್ಚು ಪ್ರಮಾಣದ ನೀರನ್ನು ಹರಿಸುವ ಮೂಲಕ ಉದ್ದೇಶಪೂರ್ವಕವಾಗಿ ಅಣೆಕಟ್ಟೆ ತುಂಬದಂತೆ ನೋಡಿಕೊಳ್ಳುವ ಷಡ್ಯಂತ್ರ ನಡೆಸಲಾಗಿದೆ. ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಲಕ್ಷಾಂತರ ಸಂಖ್ಯೆಯ ಜನ ಹಾಗೂ ಜಾನುವಾರುಗಳು ಕಬಿನಿ ಅಚ್ಚುಕಟ್ಟು ಪ್ರದೇಶದ ನಾಲೆ ನೀರನ್ನೇ ಅವಲಂಬಿಸಿದ್ದಾರೆ. ಇನ್ನು ತಮಿಳುನಾಡಿಗೆ ಹರಿಸಲಾಗುತ್ತಿರುವ ನೀರನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಕಳೆದ ಒಂದುವಾರದಿಂದ ರೈತರು ಪ್ರತಿಭಟನೆ ನಡೆಸಿದ್ದರೂ ನೀರಾವರಿ ಇಲಾಖೆ ಅಧಿಕಾರಿಗಳು ರೈತರ ಮನವಿಗೆ ಸ್ಪಂದಿಸಿಲ್ಲ . ಈಗಲಾದರೂ ಎಚ್ಚೆತ್ತುಕೊಂಡು ನಾಲೆಗಳಿಗೆ ನೀರು ಹರಿಸಲು ಮುಂದಾಗಬೇಕು ಇಲ್ಲವಾದಲ್ಲಿ ಜು. 30ರಂದು ಸಾವಿರಾರು ಸಂಖ್ಯೆಯ ರೈತರನ್ನು ಸಂಘಟಿಸಿ ಕಬಿನಿ ಅಣೆಕಟ್ಟೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ಕಬ್ಬು ಬೆಳೆಗಾರರ ಸಂಘಟನೆ ತಾಲೂಕು ಘಟಕದ ಅಧ್ಯಕ್ಷ ಹಾಡ್ಯ ರವಿ ಮಾತನಾಡಿ, '' ಸ್ಥಳೀಯವಾಗಿ ಕುಡಿಯುವ ನೀರಿನ ಅಭಾವವಿದ್ದು, ರೈತರು ಕೃಷಿ ಚಟುವಟಿಕೆಯನ್ನು ಸ್ಥಗಿತಗೊಳಿಸಿ ನಗರ ಪ್ರದೇಶಕ್ಕೆ ಕೂಲಿ ಕೆಲಸಕ್ಕಾಗಿ ಪ್ರತಿನಿತ್ಯ ವಲಸೆ ಹೋಗುತ್ತಿದ್ದಾರೆ. ಆದರೆ ನೀರಾವರಿ ಇಲಾಖೆ ಅಧಿಕಾರಿಗಳು ಕಬಿನಿ ಅಣೆಕಟ್ಟೆ ತುಂಬುವ ಮೊದಲೇ ತಮಿಳುನಾಡಿಗೆ ಹೆಚ್ಚು ಪ್ರಮಾಣದ ನೀರು ಹರಿಸುವ ಮೂಲಕ ಸ್ಥಳೀಯ ರೈತರ ಹಿತವನ್ನು ಕಡೆಗಣಿಸಿದ್ದಾರೆ'' ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ನೀರಾವರಿ ಇಲಾಖೆ ಹಿರಿಯ ಅಧಿಕಾರಿಗಳು ಆಗಮಿಸಿ ಸೂಕ್ತ ವಿವರಣೆ ನೀಡುವವರೆಗೂ ರಸ್ತೆ ತೆರವುಗೊಳಿಸುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರಾದರೂ ಪಟ್ಟಣ ಠಾಣೆಯ ಪಿಎಸ್‌ಐ ಆನಂದ್‌ ಹೆದ್ದಾರಿ ತಡೆಯಿಂದಾಗುತ್ತಿರುವ ಅನನುಕೂಲ ತಪ್ಪಿಸುವ ಸಲುವಾಗಿ ಪ್ರತಿಭಟನೆ ಹಿಂತೆಗೆದುಕೊಳ್ಳಲು ಮನವಿ ಮಾಡಿದರು. ನಂತರ ಸ್ಥಳಕ್ಕಾಗಮಿಸಿದ ನೀರಾವರಿ ಇಲಾಖೆ ಸಹಾಯಕ ಎಂಜಿನಿಯರ್‌ ಕುಮಾರ್‌ ಅವರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ಅಂತ್ಯಗೊಳಿಸಲಾಯಿತು.

ಸಂಚಾರ ಅಸ್ತವ್ಯಸ್ತ: ಸುಮಾರು ಅರ್ಧ ಗಂಟೆಗೂ ಹೆಚ್ಚು ಸಮಯ ಹೆದ್ದಾರಿ ಬಂದ್‌ ಮಾಡಿದ್ದರಿಂದ ರಸ್ತೆಯ ಎರಡೂ ಬದಿಯಲ್ಲಿ ನೂರಾರು ಸಂಖ್ಯೆಯ ವಾಹನಗಳು ಸಾಲುಗಟ್ಟಿ ನಿಲ್ಲಬೇಕಾಯಿತು. ಪ್ರತಿಭಟನಾಕಾರರು ರಸ್ತೆ ತಡೆ ತೆರವುಗೊಳಿಸಿದ ನಂತರ ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ನೆರವಾದರು. ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರ ಸಂಘಟನೆ ಜಿಲ್ಲಾ ಉಪಾಧ್ಯಕ್ಷ ಕೆರೆಹುಂಡಿ ರಾಜಣ್ಣ, ಸಿಂಧುವಳ್ಳಿ ಬಸವಣ್ಣ, ಅತ್ತಹಳ್ಳಿ ದೇವರಾಜ್‌, ಕಿರಗಸೂರು ಶಂಕರ್‌, ಅಂಬಳೆ ಮಹದೇವಸ್ವಾಮಿ, ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ರಾಣಿ, ಭುಜಂಗಪ್ಪ, ಮಂಜುನಾಥ್‌, ಮಹೇಶ್‌, ಚಿಕ್ಕಸ್ವಾಮಿ, ವಿಜಯೇಂದ್ರ, ಪ್ರಭುಸ್ವಾಮಿ, ಸೋಮಶೇಖರ್‌, ಪರಶಿವಮೂರ್ತಿ, ಕೃಷ್ಣೇಗೌಡ, ರಂಗರಾಜು, ಬರಡನಪುರ ನಾಗರಾಜ್‌, ಅರುಣ್‌ ಮುಂತಾದವರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ