ಆ್ಯಪ್ನಗರ

ಕೊರೊನಾ ಸೋಂಕಿನಿಂದ ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ನಿಧನ- ಅಧಿಕೃತ

ಕಳೆದ ಜುಲೈನಲ್ಲಿ ಬಿಜೆಪಿ ಅಶೋಕ್‌ ಗಸ್ತಿಯವರನ್ನು ಅಚ್ಚರಿಯ ರೀತಿಯಲ್ಲಿ ರಾಜ್ಯಸಭೆ ಅಭ್ಯರ್ಥಿಯಾಗಿ ಆಯ್ಕೆ ಮಾಡಿತ್ತು. ಜುಲೈ 22ರಂದು ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯೂ ಆಗಿದ್ದರು.

Vijaya Karnataka 17 Sep 2020, 11:47 pm
ಬೆಂಗಳೂರು: ಕೊರೊನಾ ಸೋಂಕಿತರಾಗಿದ್ದ ಬಿಜೆಪಿಯ ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ಗುರುವಾರ ರಾತ್ರಿ 10.31ಕ್ಕೆ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೋವಿಡ್‌ ಸೋಂಕಿತರಾಗಿದ್ದ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 2 ರಂದು ಅವರು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಾವನ್ನಪ್ಪಿದ್ದಾರೆ.
Vijaya Karnataka Web Ashok Gasti


55 ವರ್ಷದ ಅಶೋಕ್‌ ಗಸ್ತಿಯಲ್ಲಿ ತೀವ್ರತರ ಕೋವಿಡ್‌-19 ನ್ಯುಮೋನಿಯಾ ಕಾಣಿಸಿಕೊಂಡಿತ್ತು. ಬಹು ಅಂಗಾಗ ವೈಫಲ್ಯದಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದರಿಂದ ಅವರನ್ನು ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್‌ ಸಂಪರ್ಕದಲ್ಲಿಟ್ಟು ನಮ್ಮ ತಜ್ಞ ವೈದ್ಯರು ನಿರಂತರ ನಿಗಾ ಇಟ್ಟಿದ್ದರು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ಮಣಿಪಾಲ ಆಸ್ಪತ್ರೆ ನಿರ್ದೇಶಕ ಡಾ. ಮನೀಷ್‌ ರೈ ಹೇಳಿದ್ದಾರೆ.

ಕಳೆದ ಜುಲೈ 22ರಂದು ಅಶೋಕ ಗಸ್ತಿ ಅವರು ಅಚ್ಚರಿಯ ರೀತಿಯಲ್ಲಿ ಬಿಜೆಪಿಯಿಂದ ರಾಜ್ಯಸಭೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಆದರೆ ಮೊದಲ ಅಧಿವೇಶನದಲ್ಲಿ ಪಾಲ್ಗೊಳ್ಳುವ ಮೊದಲೇ ಅವರು ಇಹಲೋಕವನ್ನು ತ್ಯಜಿಸಿದ್ದಾರೆ.

ರಾಯಚೂರು ಜಿಲ್ಲೆಯ ಅಶೋಕ್ ಗಸ್ತಿ ಎಬಿವಿಪಿ ಮೂಲಕ ಸಂಘ ಪರಿವಾರದ ತೆಕ್ಕೆಗೆ ಬಂದವರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು 2001ರಲ್ಲಿ ನಗರಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಜಯ ಸಾಧಿಸಿದ್ದರು. ಈ ಮೂಲಕ ಜಿಲ್ಲೆಯಲ್ಲೇ ಮೊದಲ ಬಾರಿಗೆ ನಗರಸಭೆಯೊಂದರಲ್ಲಿ ಕಮಲದ ಬಾವುಟ ಹಾರಲು ಕಾರಣರಾಗಿದ್ದರು.

ರಾಜ್ಯಸಭೆ ಚುನಾವಣೆಗೆ ಬಿಜೆಪಿಯಿಂದ ಅಚ್ಚರಿಯ ಆಯ್ಕೆ; ಅವರ್ ಬಿಟ್, ಇವರ್ ಬಿಟ್, ಇವರ್ಯಾರು?

ಬಳಿಕ ರಾಯಚೂರು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಪಕ್ಷ ಸಂಘಟನೆಗೆ ದುಡಿದ ಇವರನ್ನು ನಂತರ ಪಕ್ಷದ ನಾಯಕರು ಒಬಿಸಿ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದರು. ಕಳೆದ ಬಾರಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಇವರಿಗೆ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹುದ್ದೆ ನೀಡಲಾಗಿತ್ತು.

ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿ ಎಂದೇ ಹೆಸರಾದ ಅವರು ಬಳ್ಳಾರಿ, ರಾಯಚೂರು ಹಾಗೂ ಕೊಪ್ಪಳ ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡ ವಿಭಾಗದ ಬಿಜೆಪಿ ಉಸ್ತುವಾರಿಯಾಗಿರುವಾಗಲೇ ಬಯಸದೇ ಬಂದ ಭಾಗ್ಯ ಎಂಬಂತೆ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಸೋಮವಾರದಿಂದ ಆರಂಭಗೊಂಡಿರುವ ರಾಜ್ಯಸಭೆಯ ಚೊಚ್ಚಲ ಅಧಿವೇಶನದಲ್ಲಿ ಅವರು ಪಾಲ್ಗೊಳ್ಳಬೇಕಾಗಿತ್ತು. ಆದರೆ ಕೊರೊನಾದಿಂದಾಗಿ ಕಲಾಪ ತಪ್ಪಿಸಿಕೊಂಡಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ