ಸಾಗರ: ಮಲೆನಾಡಿನ ಜನರಿಗೆ ಮಾರಕವಾದ ಕಸ್ತೂರಿರಂಗನ್ ವರದಿ ಜಾರಿಗೆ ಬರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ಸರಣಿ ಜನಾಂದೋಲನ ಹಮ್ಮಿಕೊಳ್ಳಲಿದೆ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಅವೈಜ್ಞಾನಿಕವಾಗಿರುವ ಕಸ್ತೂರಿರಂಗನ್ ವರದಿ ಜಾರಿಗೆ ತರದಂತೆ ಒತ್ತಾಯಿಸಿ ಮಾ. 15ರಂದು ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ನಂತರ ಮುಂದಿನ ದಿನಗಳಲ್ಲಿ ಸಾಗರ ಉಪವಿಭಾಗಾಧಿಕಾರಿ ಕಚೇರಿ ಎದುರು, ಗ್ರಾಮಾಂತರ ಪ್ರದೇಶಗಳಲ್ಲಿ ಸರಣಿ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ರಾಜ್ಯದ 10 ಜಿಲ್ಲೆಗಳನ್ನು ಯೋಜನೆ ವ್ಯಾಪ್ತಿಗೆ ಸೇರಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ 472 ಗ್ರಾಮಗಳನ್ನು ಯೋಜನೆ ವ್ಯಾಪ್ತಿಗೆ ತರಲಾಗಿದೆ. 10 ಜಿಲ್ಲೆಯ 40 ತಾಲೂಕಿನ 1553 ಹಳ್ಳಿಗಳ ಸುಮಾರು 70 ಲಕ್ಷ ಜನರು ಯೋಜನೆ ಜಾರಿಯಾದರೆ ಸಂತ್ರಸ್ತರಾಗುತ್ತಾರೆ. ಸಮರ್ಪಕ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕೇರಳ ರಾಜ್ಯವನ್ನು ಯೋಜನೆಯಿಂದ ಕೈಬಿಡಲಾಗಿದೆ. ಈ ಹಿಂದೆ ಅರಣ್ಯ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ ಯೋಜನೆ ಸಾಧುವಲ್ಲ ಎಂಬ ನಿರ್ಣಯ ಕೈಗೊಂಡು, ಅದನ್ನು ರಾಜ್ಯ ಸರಕಾರದ ಮೂಲಕ ಕೇಂದ್ರ ಸರಕಾರಕ್ಕೆ ಕಳಿಸಲಾಗಿತ್ತು. ಈ ಪ್ರದೇಶದಲ್ಲಿ ವಾಸಿಸುವ ಜನರಿಗೆ, ಅರಣ್ಯವಾಸಿಗಳಿಗೆ, ಅಭಿವೃದ್ಧಿ ಕೆಲಸಗಳಿಗೆ ಯೋಜನೆ ತೊಂದರೆಯಾಗುವುದರ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿತ್ತು ಎಂದು ತಿಳಿಸಿದರು.
ತಾಲೂಕು ಬಗರ್ಹುಕುಂ ಸಮಿತಿ ಅಧ್ಯಕ್ಷ ಬಿ.ಆರ್.ಜಯಂತ್ ಮಾತನಾಡಿ, ಪಶ್ಚಿಮಘಟ್ಟದ 16 ಲಕ್ಷ ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ ್ಮ ಪ್ರದೇಶವೆಂದು ಘೋಷಿಸಲು ಯೋಜನೆ ರೂಪಿಸಲಾಗಿದೆ. ಇದು ರಾಜ್ಯದ ಶೇ. 60ರಷ್ಟು ಪ್ರದೇಶವನ್ನು ವ್ಯಾಪಿಸುವುದರಿಂದ ಈ ಪ್ರದೇಶದಲ್ಲಿ ವಾಸಿಸುವವರು ಅತಂತ್ರರಾಗುತ್ತಾರೆ. ಗ್ರಾಮವಾಸಿಗಳನ್ನು ಜೈಲಿಗೆ ಹಾಕಿದಂತಾಗುತ್ತದೆ. ಕೇಂದ್ರ ಸರಕಾರ ತಕ್ಷ ಣ ಈ ಪ್ರಸ್ತಾವನೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.
ಗೋಷ್ಠಿಯಲ್ಲಿ ಜಿಪಂ ಸದಸ್ಯ ಕಾಗೋಡು ಅಣ್ಣಪ್ಪ, ಎಪಿಎಂಸಿ ಅಧ್ಯಕ್ಷ ಕೆ.ಹೊಳೆಯಪ್ಪ, ತಾಲೂಕು ಕಾಂಗ್ರೆಸ್ ಅಧ್ಯಕ್ಷ ಎಲ್.ಟಿ.ತಿಮ್ಮಪ್ಪ, ಗಣಪತಿ ಹೆನಗೆರೆ ಹಾಜರಿದ್ದರು.
----------------
ಮಲೆನಾಡು ಪರಿಸರ ಸೂಕ್ಷ ್ಮ ಪ್ರದೇಶವೆಂದು ಘೋಷಣೆಯಾಗಲು ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ ಎಂದು ರಕ್ತದಲ್ಲಿ ಬರೆದು ಕೊಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದರು. ಆದರೆ, ಯೋಜನೆ ಘೋಷಣೆಯಾದರೂ ಈತನಕ ಅವರು ಕೇಂದ್ರದ ಮೇಲೆ ಒತ್ತಡ ತರುವ ಪ್ರಯತ್ನ ಮಾಡಿಲ್ಲ.
- ಮಲ್ಲಿಕಾರ್ಜುನ ಹಕ್ರೆ, ಸಾಗರ ತಾಪಂ ಅಧ್ಯಕ್ಷ ರು